ಇವತ್ತು ಚುನಾವಣೆ ನಡೆದರೆ ಬಿಜೆಪಿ ಗೆಲ್ಲುವ ಸ್ಥಾನಗಳೆಷ್ಟು ಗೊತ್ತಾ? : ಯಡಿಯೂರಪ್ಪ ಅವರ ಲೆಕ್ಕಾಚಾರ ಇಲ್ಲಿದೆ
ಬೆಂಗಳೂರು, ನವೆಂಬರ್ 30: ಈ ಸರಕಾರದ ಆಡಳಿತ ವೈಖರಿ, ಭ್ರಷ್ಟಾಚಾರದಿಂದ ಜನರು ಬೇಸತ್ತಿದ್ದಾರೆ. ಇವತ್ತು ಚುನಾವಣೆ ನಡೆದರೆ ಬಿಜೆಪಿ 130-135 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರಕ್ಕೆ ಬರುವಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಈ ಕುರಿತು ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ. ಈ ಸರಕಾರದ ಆಡಳಿತ ವೈಖರಿ, ಭ್ರಷ್ಟಾಚಾರದಿಂದ ಜನರು ಬೇಸತ್ತಿದ್ದಾರೆ. ಜನಹಿತ ಮರೆತು ಜನಜೀವನದಲ್ಲಿ ಚೆಲ್ಲಾಟವನ್ನು ನಮ್ಮ ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿ ತರಾಟೆಗೆ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜೀ ಅವರು ದೂರವಾಣಿ ಮೂಲಕ ಈ ಆಯ್ಕೆಯನ್ನು ತಿಳಿಸಿದ್ದರು ಎಂದ ಅವರು, ಅನೇಕ ಕಾರಣಗಳಿಂದ ನಮಗೆ ಹಿನ್ನಡೆ ಆಗಿದೆ. ಅದನ್ನು ಸರಿಪಡಿಸಿ ಪಕ್ಷ ಬಲಪಡಿಸಿ, 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ ಎಂದು ಬಿ ಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿವಮೊಗ್ಗ ಜಿಲ್ಲೆಯ 3 ಲಕ್ಷ ಮತ್ತು ರಾಜ್ಯದ 1 ಕೋಟಿ ಕಾರ್ಯಕರ್ತರು ವಿಜಯೇಂದ್ರನವರ ಜೊತೆಗೆ ಇದ್ದಾರೆ ಎಂದರು. ವಿಜಯೇಂದ್ರರ ಹೆಸರು ಘೋಷಿಸಿದಾಗ ಕರ್ನಾಟಕದಲ್ಲಿ ಮಿಂಚಿನ ಸಂಚಲನ ಆಯಿತು ಎಂದು ವಿಶ್ಲೇಷಿಸಿದರು. ಈ ಆಯ್ಕೆಗೆ ಕೆಲವೇ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಅವರನ್ನು ಸಮಾಧಾನ ಪಡಿಸುವ ಕೆಲಸ ಆಗಲಿದೆ ಎಂದು ತಿಳಿಸಿದರು.
ಜಮೀರ್ ಅಹ್ಮದ್ ಹೇಳಿಕೆಯನ್ನು ಅವರು ಖಂಡಿಸಿದರು. ಸಂವಿಧಾನದ ಕುರಿತು ಗೌರವ ಇಲ್ಲದಿದ್ದರೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು. ಸಿಬಿಐ ಕೇಸ್ ವಾಪಸ್ ಪಡೆದ ನಿಮಗೆ ಸಂವಿಧಾನದ ಕುರಿತು ಗೌರವ ಇದೆಯೇ ಎಂದು ಪ್ರಶ್ನಿಸಿದರು. ಮೋದಿಜೀ ಅವರು ವಿಶ್ವನಾಯಕರಾಗಿ ಬೆಳೆದಿದ್ದಾರೆ ಎಂದು ತಿಳಿಸಿದರು. ರಾಜ್ಯದ 28ಕ್ಕೆ 28 ಸೀಟು ಕೂಡ ಬಿಜೆಪಿ- ಜೆಡಿಎಸ್ಗೆ ಸಿಗಲಿದೆ ಎಂದು ಸವಾಲೆಸೆದರು.

ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಯುವ ಮುಖಂಡನನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ನೇಮಿಸಿದ ಪಕ್ಷದ ಕೇಂದ್ರದ ನಾಯಕರಿಗೆ ಧನ್ಯವಾದ ಸಮರ್ಪಿಸಿದರು. ಸಂಘಟನೆಗೆ ಶಕ್ತಿ ತುಂಬುವ ಕಾರ್ಯದಲ್ಲಿ ಯಶಸ್ಸು ಸಿಗಲಿ. ಬಿಜೆಪಿ ರಾಜ್ಯದಲ್ಲಿ ಹೆಮ್ಮರವಾಗಿ ಬೆಳೆದಿದೆ. ಅಭಿವೃದ್ಧಿ ಕೆಲಸ, ಕಾರ್ಯಕರ್ತರ ಶ್ರಮವಿದ್ದರೂ ನಾವು ಕೆಲವೆಡೆ ಗೆಲ್ಲಲಾಗಲಿಲ್ಲ ಎಂದು ಹೇಳಿದರು.
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ, ಲೋಕಸಭಾ ಚುನಾವಣೆಯಲ್ಲೂ 28ಕ್ಕೆ 28 ಸ್ಥಾನ ಗೆಲ್ಲಿಸಿ ಕೊಡಿ. ನಮ್ಮ ವಿರುದ್ಧ ಎಲ್ಲ ರಾಜಕೀಯ ಶಕ್ತಿಗಳು ಒಗ್ಗೂಡಿವೆ. ಮತ್ತೊಮ್ಮೆ ಮೋದಿಜೀ ಅವರು ಪ್ರಧಾನಿಯಾಗಲು ನಮ್ಮ ಕಾರ್ಯಕರ್ತರ ಪರಿಶ್ರಮ, ಜವಾಬ್ದಾರಿ ಇದೀಗ ಇನ್ನೂ ಹೆಚ್ಚಾಗಿದೆ ಎಂದು ತಿಳಿಸಿದರು.












Click it and Unblock the Notifications