ಈ ಬಾರೀ ಜೆಡಿಎಸ್ 120 ಸ್ಥಾನಗಳಲ್ಲಿ ಜಯ ಎಂದ ಎಚ್ಡಿಕೆ; ಜೆಡಿಎಸ್ 120 ಸ್ಥಾನ ಗೆದ್ದರೆ ರಾಜಕೀಯ ನಿವೃತ್ತಿ ಎಂದ ಸುಧಾಕರ್
ಚಿಕ್ಕಬಳ್ಳಾಪುರ,ಏಪ್ರಿಲ್ 5 : ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಈಗಾಗಲೇ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನ ಘೋಷಣೆ ಮಾಡಿದ್ದು, ಹೊಸ ಹೊಸ ತಂತ್ರಗಾರಿಕೆಯನ್ನ ರಾಜಕೀಯ ಪಕ್ಷಗಳು ನಡೆಸುತ್ತಿವೆ.
ಈಗಾಗಲೇ ಸಾಕಷ್ಟು ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಈ ಬಾರಿಯ ಚುನಾವಣೆಯಲ್ಲಿ ನಾವೇ ಅಧಿಕಾರದ ಗದ್ದುಗೆ ಏರಲು ಸಿದ್ದತೆಯನ್ನ ನಡೆಸಿವೆ. ಇತ್ತ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಿಷನ್ 123 ಟಾರ್ಗೆಟ್ ಹಾಕಿಕೊಂಡಿದ್ದು, ಜೆಡಿಎಸ್ 120 ಸ್ಥಾನಗಳನ್ನ ಗೆಲ್ಲಲಿದೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ 120 ಸ್ಥಾನಗಳಲ್ಲಿ ಗೆಲುವು ಸಾದಿಸಿದ್ದೇ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲಿದ್ದಾರೆ. ರಾಜ್ಯದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳ ಆಡಳಿತವನ್ನು ಕಂಡು ರೋಸಿ ಹೋಗಿದ್ದಾರೆ. ಬಿಜೆಪಿ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೂ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಈಗ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ಖಾಲಿಯೂ ಆಗುವುದಿಲ್ಲ, ಖಾಲಿಯಾಗದ ಖುರ್ಚಿಗೆ ಟವೆಲ್ ಹಾಕಿಕೊಂಡು ಕೊತರೆ ಏನು ಪ್ರಯೋಜನವಿಲ್ಲ, ಅವರ ಆಸೆ ಈಡೇರುವುದೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರತಿ ಬಾರಿಯೂ ಚರ್ಚೆಯಾಗುತ್ತಲೇ ಇರುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಹೊಂದಾಣಿಕೆ ಯಾವ ಮಟ್ಟದಲ್ಲಿದೆ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ. ಹೈ ಕಮಾಂಡ್ ಹೇಳುವುದನ್ನು ಇವರು ಒಪ್ಪಲ್ಲ ಅನ್ನುವುದಕ್ಕೆ ಇದು ನಿದರ್ಶನ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಬ್ಬರ ಮಧ್ಯೆ ಸಮನ್ವಯತೆ ಇಲ್ಲ, ಹಾಗಾಗಿ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಬಹುಮತ ಪಡೆಯುವುದಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನಡೆಸುವ ಶಕ್ತಿ ಸಿಗುವುದಿಲ್ಲ, ಹಾಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲಿದೆ. ಸಮ್ಮಿಶ್ರ ಸರ್ಕಾರ ಮತ್ತು ಕಾಂಗ್ರೆಸ್ ಗೆ ಯಾವುದೇ ಕಾರಣಕ್ಕೂ ಅವಕಾಶವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ಬಾರೀ ಹಳೇ ಮೈಸೂರು ಭಾಗದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಟ್ಟು 15 ವಿಧಾನ ಸಭಾ ಕ್ಷೇತ್ರಗಳನ್ನು ನಾವು ಪಕ್ಷ ಸಂಘಟನೆಯನ್ನ ಬಲ ಪಡಿಸಿದ್ದು, ಈ ಬಾರಿ ಕನಿಷ್ಠ 5 ರಿಂದ 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವುದಾಗಿ ಸಚಿವ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಯೇ ಇಲ್ಲ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಇನ್ನೂ ಕಾಂಗ್ರೆಸ್ ಅಭ್ಯರ್ಥಿಯೇ ಅಂತಿಮವಾಗಿಲ್ಲ. ಇನ್ನೂ ಅಭ್ಯರ್ಥಿಯ ಹುಡುಕಾಟದಲ್ಲಿದ್ದಾರೆ, ಚಿಕ್ಕಬಳ್ಳಾಪುರ ಮಾತ್ರವಲ್ಲ, ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯೇ ಸಿಕ್ಕಿಲ್ಲ. ಈ ಎಲ್ಲ ಬೆಳವಣಿಗೆಗಳಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 90ರ ಗಡಿ ದಾಟುವುದಿಲ್ಲ ಎಂದು ಸಚಿವ ಸುಧಾಕರ್ ಭವಿಷ್ಯ ನುಡಿದರು.
ಇನ್ನೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೊದಲ ಪಟ್ಟಿ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಯಾವಾಗ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಪಕ್ಷ ಶಿಸ್ತಿನ ಪಕ್ಷವಾಗಿದ್ದು, ಅದಕ್ಕೆ ಅದರದೇ ಆದ ನೀತಿ ಹಾಗೂ ನಿಯಮಗಳಿವೆ. ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮ ಮಾಡಲಿದೆ. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇರುವುದರಿಂದ ಎಲ್ಲವೂ ವ್ಯವಸ್ಥಿತವಾಗಿ ನಡೆಯಲಿದೆ ಎಂದು ಹೇಳಿದರು.












Click it and Unblock the Notifications