ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ
ಬೆಂಗಳೂರು, ಜೂ. 08: ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರದಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತೆಗೆದುಕೊಂಡಿರುವ ಗೊಂದಲದ ತೀರ್ಮಾನ ಇದೀಗ ಕಾನೂನು ಸಮರಕ್ಕೆ ನಾಂದಿ ಹಾಡಿದೆ. ಈಗಾಗಲೇ ಪ್ರಸಕ್ತ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಮಾಡಿದ್ದು, ಪುನರಾವರ್ತಿತ ಪಿಯುಸಿ ವಿದ್ಯಾರ್ಥಿಗಳಿಗೂ ಪಿಯುಸಿ ಪರೀಕ್ಷೆ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ರಾಜ್ಯದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಮಾಡಲಾಗಿದೆ. ಅದರೆ ಪುನರಾವರ್ತಿತ ಅಭ್ಯರ್ಥಿಗಳಿಗೆ ಪಿಯುಸಿ ಪರೀಕ್ಷೆ ಆಯೋಜಿಸಲಾಗಿದೆ. ಈ ಮೂಲಕ ಪುನರಾವರ್ತಿತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ. ಕೊರೊನಾ ಸೋಂಕಿನ ಭಯ ಎಲ್ಲಾ ವಿದ್ಯಾರ್ಥಿಗಳಿಗೂ ಇದೆ. ಶಿಕ್ಷಣ ಸಚಿವರ ತೀರ್ಮಾನ ತಾರತಮ್ಯದಿಂದ ಕೂಡಿದ್ದು ಶಿಕ್ಷಣ ಹಕ್ಕು, ಸಮಾನತೆಯ ಹಕ್ಕಿಗೆ ಧಕ್ಕೆಯಾಗಿದೆ. ಪರೀಕ್ಷೆ ನಡೆಸುವುದಾದರೆ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಿ. ಇಲ್ಲದಿದ್ದರೆ ಪುನರಾವರ್ತಿತ ಅಭ್ಯರ್ಥಿಗಳಿಗೂ ಪರೀಕ್ಷೆ ರದ್ದು ಮಾಡಲಿ ಎಂದು ಕೋರಿ ಎಸ್.ವಿ ಸಿಂಗ್ರಿಗೌಡ ಎಂಬುವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ 95 ಸಾವಿರ ಪುನರಾವರ್ತಿತ ಪಿಯುಸಿ ವಿದ್ಯಾರ್ಥಿಗಳಿದ್ದಾರೆ. ಇವರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ 6.72 ಲಕ್ಷ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸು ಮಾಡುವ ತೀರ್ಮಾನವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಇದರಿಂದ ಪುನರಾವರ್ತಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಪರೀಕ್ಷೆ ನಡೆದರೆ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಯಲಿ. ಪರೀಕ್ಷೆ ರದ್ದು ಮಾಡಿದ್ದೇ ಆದಲ್ಲಿ ಪುನರಾವರ್ತಿತ ಅಭ್ಯರ್ಥಿಗಳನ್ನು ಪರಿಗಣಿಸಲಿ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
Recommended Video
ಕೋಟ್ಯಂತರ ನಷ್ಟ: ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಈಗಾಗಲೇ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಪೂರ್ವ ತಯಾರಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಪ್ರಶ್ನೆ ಪತ್ರಿಕೆ ಮುದ್ರಣ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗುತ್ತಿದೆ. ಇದರ ನಡುವೆ ಪುನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷಾ ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ಪುನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಆದಲ್ಲಿ ಶಿಕ್ಷಣ ಇಲಾಖೆಗೆ ಕೋಟ್ಯಂತರ ರೂಪಾಯಿ ನಷ್ಟವಾಗಲಿದೆ. ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆಯೋಜನೆ ಮಾಡಿರುವ ಶಿಕ್ಷಣ ಸಚಿವರ ತೀರ್ಮಾನ ವಿರೋಧಿಸಿ ಕೆಲ ಪೋಷಕರು ನ್ಯಾಯಾಲಯದ ಕದ ತಟ್ಟಲು ತಯಾರಿ ನಡೆಸಿದ್ದಾರೆ.