ಐಎಂಎ ಹಗರಣ: ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ರೋಷನ್ ಬೇಗ್
ಬೆಂಗಳೂರು,ಜು.18. ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮಾಜಿ ಸಚಿವ ಆರ್.ರೋಷನ್ ಬೇಗ್ ತಮ್ಮ ವಿರುದ್ಧದ ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ರೋಷನ್ ಬೇಗ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿ ಸಿಬಿಐ, ಕಮರ್ಶಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ಅಧಿಕಾರಿ ಹಾಗೂ ದೂರುದಾರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರ ರೋಷನ್ ಬೇಗ್ ಪರ ಹಿರಿಯ ವಕೀಲರು, ಅರ್ಜಿದಾರರ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್ ನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದರು.
ಆರೋಪದ ಹಿನ್ನೆಲೆ ಏನು?
ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ತಿಯಾಕ್ ಎಂಬುವರು ಪೊಲೀಸರ ಮುಂದೆ ನೀಡಿದ್ದ ಹೇಳಿಕೆಯಲ್ಲಿ, ಮನ್ಸೂರ್ ಖಾನ್ 2018ರ ವಿಧಾನಸಭೆ ಚುನಾವಣೆಯಲ್ಲಿ ರೋಷನ್ ಬೇಗ್ ಅವರಿಗೆ 2 ಕೋಟಿಗೂ ಹೆಚ್ಚು ಹಣ ನೀಡಿದ್ದಾರೆಂದು ತಿಳಿಸಿದ್ದಾರೆ. ಅದರ ಅನುಸಾರ ಅವರನ್ನು ಪ್ರಕರಣದ ಸಾಕ್ಷಿ ಎಂದು ಪರಿಗಣಿಸಲಾಗಿದೆ.
ಹಾಗಾಗಿ, ಬೇಗ್ ಐಎಂಎ ಕಂಪನಿ ಪ್ರವರ್ತಕರಾಗಿ ಸಂಸ್ಥೆಯ ವಾಣಿಜ್ಯ ಚಟುವಟಿಕೆ ಫಲಾನುಭವಿ ಎಂದು ಸಿಬಿಐ ಅರೋಪಿಸಿದೆ. ಹಗರಣದಲ್ಲಿ ಬೇಗ್ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 406, 409 ಮತ್ತು 120 ಬಿ ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆದಾರರ ಹಿತರಕ್ಷಣಾ (ಕೆಪಿಐಡಿಇಎಫ್) ಕಾಯ್ದೆ-2004ರ ಅನ್ವಯ 2019ರ ಅಕ್ಟೋಬರ್ ನಲ್ಲಿ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹಾಗಾಗಿ ವಿಶೇಷ ನ್ಯಾಯಾಲಯ ಬೇಗ್ ವಿರುದ್ಧ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಅದನ್ನು ಪ್ರಶ್ನಿಸಿ ಬೇಗ್ ವಿಚಾರಣೆ ಗೆ ತಡೆ ಕೋರಿದ್ದಾರೆ.












Click it and Unblock the Notifications