Breaking:ಉತ್ತರ ಒಳನಾಡಿಗೆ 4ದಿನ, ಕರಾವಳಿಗೆ 1ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್
ಬೆಂಗಳೂರು, ಅಕ್ಟೋಬರ್ 07: ಕರ್ನಾಟಕದ ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಸಾಧಾರಣದಿಂದ ಧಾರಾಕಾರವಾಗಿ ಮಳೆ ಮುಂದುವರಿಯುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಗುರುವಾರ ಮಳೆಯಾಗಿದ್ದು, ಶುಕ್ರವಾರ ಮೋಡ ಕವಿದ ವಾತಾವರಣ ಮುಂದುವರೆದಿದೆ.
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುರುವಾರ ಗುಡುಗು ಸಹಿತ ಜೋರು ಮಳೆ ಸುರಿದಿದೆ. ಈ ಮಳೆ ಮುಂದಿನ ನಾಲ್ಕು ದಿನ (ಅಕ್ಟೋಬರ್ 11ರವರೆಗೆ) ಹೀಗೆ ಮುಂದುವರಿಯಲಿದೆ. ಈ ಭಾಗದ ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವು ಕಡೆಗಳಲ್ಲಿ ದಿನ ಬಿಟ್ಟು ದಿನ ಧಾರಾಕಾರವಾಗಿ ಮಳೆ ಅಬ್ಬರಿಸಲಿದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
"ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಶುಕ್ರವಾರ ಒಂದು ದಿನ ಮಳೆಯು ತೀವ್ರವಾಗಿರಲಿದೆ. ಈ ಕಾರಣದಿಂದ ಒಂದು ದಿನ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ," ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಜ್ಞಾನಿ ಡಾ.ಪ್ರಸಾದ್ ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಎದ್ದಿದ್ದ ಮೇಲ್ಮೈ ಸುಳಿಗಾಳಿಯು ಗುರುವಾರ ಸಂಜೆಗೆ ವೇಳೆಗೆ ಅಲ್ಲಿನ ದಕ್ಷಿಣ ಕರಾವಳಿಯತ್ತ ಸಾಗಿದೆ. ಅದು ಸಮುದ್ರ ಮಟ್ಟದಿಂದ ಸುಮಾರು 3.5ಕಿಲೋ ಮೀಟರ್ ಎತ್ತರದಲ್ಲಿದೆ. ಅದೇ ರೀತಿ ಬಂಗಾಳ ಕೊಲ್ಲಿ ಪಶ್ಚಿಮ ಸಮುದ್ರ ಭಾಗದಲ್ಲಿ ಉಂಟಾಗಿದ್ದ ಮತ್ತೊಂದು ಮೇಲ್ಮೈ ಸುಳಿಗಾಳಿಯು ದುರ್ಬಲಗೊಂಡಿಲ್ಲ. ಈ ಕಾರಣದಿಂದ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಇದೆ.
ಎಲ್ಲಿ ಹೆಚ್ಚು ಮಳೆ ಆಗಿದೆ?
ಗುರುವಾರದ ವರದಿ ಪ್ರಕಾರ ದಕ್ಷಿಣ ಕನ್ನಡ, ಬಳ್ಳಾರಿ, ಬೆಳಗಾವಿ, ಉಡುಪಿ, ಹಾವೇರಿ, ಗದಗ, ಕಲಬುರಗಿ, ರಾಯಚೂರು ಜಿಲ್ಲೆಗಳ ವಿವಿಧೆಡೆ ಮಧ್ಯಾಹ್ನದ ನಂತರ ಜೋರು ಮಳೆ ಆಗಿದೆ. ಮಳೆ ಬಿದ್ದ ಪ್ರದೇಶದಲ್ಲಿ ಡಿಢೀರನೇ ಮೋಡ ಕವಿದ ವಾತಾವರಣ ಸೃಷ್ಟಿಯಾಯಿತು. ಸುಮಾರು ಮೂರು ಗಂಟೆಗಳ ಕಾಲ ತೀವ್ರವಾಗಿ ಮಳೆ ಸುರಿಯಿತು.
ವಿವಿಧ ಜಿಲ್ಲೆಗಳಲ್ಲಿ ಮಳೆ
ಗುರುವಾರ ಬೆಂಗಳೂರು ನಗರ ಸೇರಿದಂತೆ ಕಲ್ಯಾಣ ಕರ್ನಾಟಕ, ಮಲೆನಾಡು ಮತ್ತು ಕೊಡಗು ಜಿಲ್ಲೆಯಲ್ಲಿ ಮಳೆಯಾಗಿದೆ. ವಿಜಯನಗರ ಜಿಲ್ಲೆಯಲ್ಲಿ 25 ಮನೆಗಳ ಗೋಡೆ ಕುಸಿದಿದೆ. ಕಲಬುರಗಿಯಲ್ಲಿ 7 ಸೆಂ. ಮೀ. ಮಳೆಯಾಗಿದೆ. ಧಾರವಾಡದಲ್ಲಿ ಮಳೆ ನೀರಿನಲ್ಲಿ ಬಸ್ ಸಿಲುಕಿಕೊಂಡು ಪ್ರಯಾಣಿಕರು ಪರದಾಡಿದರು.
ಕರ್ನಾಟಕಕ್ಕೆ ಹಿಂಗಾರು ಪ್ರವೇಶ
ಕರ್ನಾಟಕಕ್ಕೆ ಅಕ್ಟೋಬರ್ 2ನೇ ವಾರದಲ್ಲಿ ಹಿಂಗಾರು ಪ್ರವೇಶವಾಗಲಿದೆ. ಅಲ್ಲಿಯ ತನಕ ಮುಂಗಾರು ಮಳೆ ಮುಳೆ ಮುಂದುವೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮಳೆ ಏಕೆ?
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈಸುಳಿಗಾಳಿ ಪ್ರಭಾವದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆಂಧ್ರ ಪ್ರದೇಶ, ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯದಲ್ಲಿಯೂ ಸಹ ಅಕ್ಟೋಬರ್ 8ರ ತನಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.