Karnataka: ಕೊಡಗು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಸ್ಥಳಿಯರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
ಬೆಂಗಳೂರು, ಮೇ 31: ಕರ್ನಾಟಕದಲ್ಲಿ ಮುಂದಿನ ಎರಡು ಮೂರು ದಿನ ವ್ಯಾಪಕ ಮಳೆಯಾರ್ಭಟ ಕಂಡು ಬರಲಿದೆ. ಮುಂಗಾರು ಮುನ್ನವೇ ರಾಜ್ಯದ ಎಂಟು ಜಿಲ್ಲೆಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ನೀಡಲಾಗಿದೆ. ವಿಶೇಷವೆಂದರೆ ಕೊಡಗಿನಲ್ಲಿ ಹೆಚ್ಚಿನ ಅನಾಹುತಗಳು ಸಂಭವಿಸದಂತೆ ಮುಂಜಾಗ್ರತಾ ದೃಷ್ಟಿಯಿಂದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಈ ಮೊದಲು ದಕ್ಷಿಣ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಹೆಚ್ಚು ಮಳೆ ದಾಖಲಾಗುತ್ತಿತ್ತು. ಇದೀಗ ಆ ಮಳೆ ಕರಾವಳಿ ಭಾಗಕ್ಕೂ ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆ ಸೇರಿ ಒಟ್ಟು ಎಂಟು ಜಿಲ್ಲೆಗಳಿಗೆ ಮುಂದಿನ ಮೂರು ದಿನ (ಜೂನ್ 3ರತನಕ) ಹಳದಿ ಎಚ್ಚರಿಕೆ ಘೋಷಿಸಲಾಗಿದೆ.

ಈಗಾಗಲೇ ಕೊಡಗಿನಲ್ಲಿ ಮಳೆ ಆರ್ಭಟ ಶುರುವಾಗಿದೆ. ಕಳೆದ ಎರಡು ಮೂರು ವರ್ಷಗಳಲ್ಲಿ ಈ ಭಾಗದಲ್ಲಿ ಅಧಿಕ ಹಾನಿ ಉಂಟಾಗಿತ್ತು. ಸಣ್ಣ ಗುಡ್ಡಗಳು ಕುಸಿತ ಮನೆಗಳಿಗೆ ಹಾನಿ ಉಂಟಾಗಿತ್ತು. ಈ ಎಲ್ಲ ದೃಷ್ಟಿಯಿಂದ ಸರ್ಕಾರ ಈ ಭಾರಿ ಅಗತ್ಯ ಎಚ್ಚರಿಕೆ ವಹಿಸಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನಗರಸಭೆ ಆದೇಶ ಮಾಡಿದೆ. ಮಡಿಕೇರಿ ವ್ಯಾಪ್ತಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ನಿರಂತರ ಮಳೆ ಆರಂಭವಾದರೆ ಕೊಡಗಿನ ಇಂದಿರಾ ನಗರ, ಮಂಗಳಾದೇವಿ ನಗರ, ಚಾಮುಂಡೇಶ್ವರಿ ನಗರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಗರಸಭೆ ಮೌಖಿಕವಾಗಿ ಆದೇಶಿಸಿದೆ. ಜಿಲ್ಲೆಯ ನದಿ ತೀರದ ನಿವಾಸಿಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ ನೆಲ್ಲಿ ಹುದಿಕೇರಿ, ವಿರಾಜಪೇಟೆ ತಾಲೂಕಿನ ಕರಡಿಗೋಡು ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಮುಂದಿನ ಮೂರರಿಂದ ನಾಲ್ಕು ದಿನ ಯೆಲ್ಲೋ ಅಲರ್ಟ್ ಪಡೆದ ಜಿಲ್ಲೆಗಳ ಹೊರತಾಗಿ ಉಡುಪಿ, ಬೆಳಗಾವಿ, ಹಾವೇರಿ, ಗದಗ, ವಿಜಯಪುರ, ಕೊಪ್ಪಳ, ರಾಯಚೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಹಲವೆಡೆ ವ್ಯಾಪಕ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications