Rain Forecast: ಬೆಂಗಳೂರು ಸೇರಿದಂತೆ ರಾಜ್ಯದ ಈ ಭಾಗದಲ್ಲಿ ಇಂದಿನಿಂದ ಮತ್ತೆ ಭರ್ಜರಿ ಮಳೆ
ಬೆಂಗಳೂರು ಆಗಸ್ಟ್ 27: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಕೆಲವೆಡೆ ನಿರೀಕ್ಷೆಗೂ ಮೀರಿದ ಮಳೆಯಾಗುತ್ತಿರುವುದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು... ಆಗಸ್ಟ್ 27 ರಿಂದ ಆಗಸ್ಟ್ 31ರವರೆಗೆ ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.

ಆದರೆ ಆಗಸ್ಟ್ 28ರಿಂದ ಮಳೆ ಕಡಿಮೆಯಾಗಲಿದ್ದು ಕೆಲ ಜಿಲ್ಲೆಗಳಲ್ಲಿ ಮಾತ್ರವೇ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ. ಇನ್ನೂ ರಾಯಚೂರು, ಬಳ್ಳಾರಿ, ಯಾದಗಿರಿ, ಗುಲ್ಬರ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತೀರಾ ಕಡಿಮೆಯಿದೆ. ಪ್ರತೀ ವರ್ಷದಂತೆ ಈ ಭಾಗದಲ್ಲಿ ಬಿಸಿಲು ಹೆಚ್ಚಾಗಿದ್ದು ಮಳೆಯಾಗದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಮಳೆಗಾಲದಲ್ಲಿ ಮಳೆ ನಿರೀಕ್ಷೆಯಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ಮಳೆರಾಯ ನಿರಾಸೆ ತಂದಿದ್ದಾನೆ.
ಇನ್ನೂ ಇತ್ತ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಮಳೆಯೊಂದಿಗೆ ಗಂಟೆಗೆ 30-40ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ 40-50ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಜೊತೆಗೆ ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿಯ ವೇಗ 40-50ಕಿಮೀ ಇರಲಿದೆ.

ಇದರೊಂದಿಗೆ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಗಾಳಿಯ ವೇಗ 30-40ಕಿಮೀ ಇರಲಿದೆ. ಇದು ಕರ್ನಾಟಕದ ಹವಾಮಾನ ವರಿದಿಯಾದರೆ ಇನ್ನೂ ದೇಶದಲ್ಲಿ ಮಳೆ ಹೇಗಿದೆ? ಎಲ್ಲೆಲ್ಲಿ ಇಂದು ಮಳೆಯಾಗಲಿದೆ ಎಂದು ತಿಳಿಯೋಣ.
ದೇಶದಲ್ಲಿ ಇಂದಿನ ಹವಾಮಾನ
ಆಗಸ್ಟ್ ತಿಂಗಳು ಮುಗಿಯುತ್ತಿದ್ದು ದೇಶದ ಹಲವು ಭಾಗಗಳಲ್ಲಿ ಮಾನ್ಸೂನ್ ಮತ್ತೆ ಚುರುಕು ಪಡೆಯುತ್ತಿದೆ. ಹವಾಮಾನ ಇಲಾಖೆ ದೆಹಲಿಯಿಂದ ಉತ್ತರಾಖಂಡದವರೆಗೆ ಮಳೆ ಎಚ್ಚರಿಕೆ ನೀಡಿದೆ. ಕಳೆದ ಎರಡು ದಿನಗಳಿಂದ ಗುಜರಾತ್ನಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಹಲವು ಜಿಲ್ಲೆಗಳಲ್ಲಿ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿದ್ದು, ಕೆಲವೆಡೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಗುಜರಾತ್ನಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಗುಜರಾತ್ನಲ್ಲಿ IMD ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯಸ್ಥಾನ ಮತ್ತು ಮಧ್ಯಪ್ರದೇಶದಲ್ಲೂ ಇದೇ ಪರಿಸ್ಥಿತಿ ಇದೆ. ಅಲ್ಲಿಯೂ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತವಾಗಿವೆ. ಹಾಗಾದರೆ ಇಂದು ದೇಶದಾದ್ಯಂತ ಹವಾಮಾನ ಹೇಗಿದೆ ಎಂದು ತಿಳಿಯೋಣ.
ದೆಹಲಿಯಲ್ಲಿ ಮಳೆಯ ಎಚ್ಚರಿಕೆ
ಹವಾಮಾನ ಇಲಾಖೆ ಪ್ರಕಾರ, ಮುಂದಿನ 5 ದಿನಗಳ ಕಾಲ ದೆಹಲಿಯಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ರಾಜಧಾನಿಯ ಹವಾಮಾನವು ಈ ವಾರ ಪೂರ್ತಿ ತಂಪಾಗಿರುತ್ತದೆ. IMD ಪ್ರಕಾರ, ಇಂದು ಆಕಾಶ ಮೋಡ ಇರಲಿದ್ದು ಬಲವಾದ ಗಾಳಿಯಿಂದಾಗಿ ಜನರು ಶಾಖದಿಂದ ಕೊಂಚ ರಿಲೀಫ್ ಪಡೆಯಬಹುದು. ಇಂದು ಮತ್ತು ನಾಳೆ ದೆಹಲಿಯ ಕೆಲವೆಡೆ ತುಂತುರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಹಗಲಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಹಾಗೂ ಕನಿಷ್ಠ ತಾಪಮಾನ 26 ಡಿಗ್ರಿ ಇರುವ ನಿರೀಕ್ಷೆಯಿದೆ.
ರಾಜಸ್ಥಾನದಲ್ಲಿ ಹವಾಮಾನ ಪರಿಸ್ಥಿತಿ
ರಾಜಸ್ಥಾನದಲ್ಲಿ ಭಾರೀ ಮಳೆ ಮುಂದುವರಿದಿದೆ. ಪ್ರತಾಪಗಢ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಇಂದು ಮತ್ತು ನಾಳೆ ರಾಜ್ಯದ ದಕ್ಷಿಣ ಮತ್ತು ಪೂರ್ವ ಭಾಗದಲ್ಲಿ ಧಾರಾಕಾರ ಅಧಿಕ ಸಾಧ್ಯತೆಯಿದೆ. ಇದರೊಂದಿಗೆ ಇಂದು ದಕ್ಷಿಣ ರಾಜಸ್ಥಾನದ ಕೆಲವು ಭಾಗಗಳಲ್ಲಿ ಗಂಟೆಗೆ 40-60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಗುಜರಾತ್ ನಲ್ಲಿ ಪ್ರವಾಹದಂತಹ ಪರಿಸ್ಥಿತಿ
ಗುಜರಾತ್ನ ಹಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಬೆಳಗಿನ ತನಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಿಗೆ ಮಂಗಳವಾರ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ.
ಈ ರಾಜ್ಯಗಳಲ್ಲಿ ಇಂದು ಮಳೆ ಎಚ್ಚರಿಕೆ!
ಇಂದು ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಈಶಾನ್ಯ ಭಾರತದ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲೂ ಧಾರಾಕಾರ ಮಳೆಯ ಎಚ್ಚರಿಕೆ ನೀಡಲಾಗಿದೆ. ಭಾರೀ ಮಳೆಯ ಸಂದರ್ಭದಲ್ಲಿ ಜನರು ಜಾಗರೂಕರಾಗಿರಬೇಕು. ಅನಗತ್ಯವಾಗಿ ಮನೆಯಿಂದ ಹೊರಗೆ ಬರದಂತೆ ಹವಾಮಾನ ಇಲಾಖೆ ಸೂಚಿಸಿದೆ.












Click it and Unblock the Notifications