Breaking:ಕರ್ನಾಟಕದಲ್ಲಿ ಮುಂದಿನ 4 ದಿನ ಭಾರಿ ಮಳೆ
ಬೆಂಗಳೂರು, ಆಗಸ್ಟ್ 29: ಕರ್ನಾಟಕದಾದ್ಯಂತ ಭಾರಿ ಮುಂಗಾರು ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಸಮುದ್ರದಲ್ಲಿ, ಆಂಧ್ರಪ್ರದೇಶ ಮತ್ತು ಕೇರಳ ಭಾಗದಲ್ಲಿ ಉಂಟಾಗಿರುವ ತೀವ್ರ ಸುಳಿಗಾಳಿಯಿಂದಾಗಿ ಮುಂಗಾರು ಮಾರುತಗಳು ಚುರುಕುಗೊಂಡಿವೆ. ಇದರ ಪ್ರಭಾವದಿಂದ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಸೆ.2ರವರೆಗೂ ಮುಂದುವರಿಯುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಮಾತ್ರ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಅಬ್ಬರಿಸಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರಗಳ ಒಂದೆರಡು ಕಡೆ ಭಾರಿ ಮಳೆ ಹಿನ್ನೆಲೆ ಎರಡು ದಿನ 'ಯೆಲ್ಲೋ ಅಲರ್ಟ್' ಕೊಡಲಾಗಿದೆ.
ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಅಬ್ಬರ ಮಳೆ ಬೀಳಲಿದೆ. ಈ ಪೈಕಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಧಾರಾಕಾರ ಮಳೆ ಬೀಳಲಿದೆ.
12ಸೆಂ.ಮೀ. ವರೆಗೆ ಮಳೆ ನಿರೀಕ್ಷೆ
ನಂತರ ಮೂರು ದಿನ ಈ ಪೈಕಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣದಿಂದ ಭಾರಿ ಮಳೆ ಬೀಳಲಿದ್ದು, ಈ ಎಲ್ಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಸುಮಾರು 12ಸೆಂ. ಮೀ.ನಷ್ಟು ಮಳೆ ದಾಖಲಾಗಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
ಸೋಮವಾರ ಬೆಳಗ್ಗೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಉತ್ತರ ಒಳನಾಡು ಜಿಲ್ಲೆಗಳ ಹಾವೇರಿ, ಬೆಳಗಾವಿ, ಬಾಗಲಕೋಟೆ, ರಾಣೆಬೆನ್ನೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಬಿದ್ದಿದೆ.