ಜೂನ್ 1ರ ತನಕ ಬೆಂಗಳೂರಿನಲ್ಲಿ ಸಂಜೆ ಮಳೆ
ಬೆಂಗಳೂರು, ಮೇ 28; ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪೂರ್ವ ಮುಂಗಾರು ಮಳೆ ಗುಡುಗು, ಸಿಡಿಲಿನ ಸಮೇತ ಅಬ್ಬರಿಸುತ್ತಿದೆ. ಜೂನ್ 1ರ ತನಕ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 1ರ ತನಕ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಗಾಳಿಯೊಂದಿಗೆ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆಯ ಮುನ್ಸೂಚನೆ ನೀಡಲಾಗಿದೆ, ಜನರು ಎಚ್ಚರದಿಂದ ಇರಬೇಕು ಎಂದು ಮನವಿ ಮಾಡಲಾಗಿದೆ.
ಯಾವ-ಯಾವ ಜಿಲ್ಲೆಗಳಲ್ಲಿ ಮಳೆ; ಸಾಧಾರಣ ಮಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಆಗಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವೂ ಇರಲಿದೆ ಬಿಸಿಲಿನ ಝಳ ಕಡಿಮೆ ಇರಲಿದೆ ಎಂದು ಅಂದಾಜಿಸಲಾಗಿದೆ.

ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಮತ್ತು ರಾಯಚೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಸಮಯದಲ್ಲಿ ಜೂನ್ 1ರ ತನಕ ಮಳೆಯ ಮುನ್ಸೂಚನೆ ನೀಡಲಾಗಿದೆ.
ಈ ವಾರದ ಆರಂಭದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಸಂಜೆ ಸುರಿದ ಮಳೆ ಅವಾಂತರ ಸೃಷ್ಟಿ ಮಾಡಿತ್ತು. ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಮಳೆಗೆ ವಾಹನ ಸವಾರರು ಪರದಾಡಿದ್ದರು. ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆಯಾಗಿಲ್ಲ. ಆದರೆ ಮೋಡ ಕವಿದ ವಾತಾವರಣ ಇದ್ದು, ಗರಿಷ್ಠ ಉಷ್ಣಾಂಶವೂ 30 ಡಿಗ್ರಿ ಸೆಲ್ಸಿಯಸ್ ದಾಟಿದೆ.
ಅಧಿಕಾರಿಗಳ ಜೊತೆ ಸಭೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನೈಋತ್ಯ ಮುಂಗಾರು ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ್ದಾ, ಹಲವಾರು ಸೂಚನೆಗಳನ್ನು ಸಹ ನೀಡಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ, ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆ ಬಂದು ಮರಗಳು ಬಿದ್ದುಹೋದರೆ ಕೂಡಲೇ ತೆರವುಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್ಫಾರ್ಮರ್ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್ನಲ್ಲಿ ಪ್ರಾರಂಭವಾಗುತ್ತದೆ. ಏಪ್ರಿಲ್ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್ ಮಳೆ ಪ್ರಾರಂಭವಾಗಿದೆ. ಭಾರೀ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಅಗತ್ಯ ಎಂದು ಸೂಚನೆ ನೀಡಿದ್ದಾರೆ. ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.












Click it and Unblock the Notifications