ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಉಷ್ಣಾಂಶ 22 ಡಿಗ್ರಿಗೆ ಕುಸಿದಿದೆ. ನಗರದಲ್ಲಿ ಭಾನುವಾರ ಸಂಜೆ ವೇಳೆಗೆ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ. ತಂಪಾದ ಗಾಳಿ ಬೀಸುತ್ತಿದ್ದು, ಆಗಾಗ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಒಂದು ವಾರದಿಂದ ಮಳೆ ಸುರಿಯುತ್ತಲೇ ಇದೆ.
ಶೃಂಗೇರಿ, ಕೊಪ್ಪ, ಕಳಸ, ಹೊರನಾಡು, ಮೂಡಿಗೆರೆ, ಕೊಟ್ಟಿಗೆಹಾರ, ವಿರಾಜಪೇಟೆ, ಸೋಮವಾರ ಪೇಟೆ, ಮಡಿಕೇರಿ, ಕುಶಾಲನಗರ, ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ.
ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ. ಕರ್ನಾಟಕದಲ್ಲಿ ಜುಲೈನಲ್ಲಿ ಶೇ 7, ಆಗಸ್ಟ್ನಲ್ಲಿ ಶೇ 24ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಕರ್ನಾಟಕದಲ್ಲಿ ಮಳೆ; ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲ. ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ.
ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿ ತೀರಕ್ಕೆ ಜನರು ತೆರಳಬಾರದು, ಮೀನುಗಾರಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆಯನ್ನು ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮುಂದಿನ 24 ಗಂಟೆಯಲ್ಲಿ ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಚಲಿಸುವ ನಿರೀಕ್ಷೆ ಇದೆ. ಇದರಿಂದಾಗಿ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ. ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ.
ಒಡಿಶಾ, ಗುಜರಾತ್, ಮಹಾರಾಷ್ಟ್ರ, ಗೋವಾ, ಛತ್ತೀಸ್ಗಢ್, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಾಖಂಡ್, ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ಕೇರಳ, ತೆಲಂಗಾಣ, ಅಂಡಮಾನ್ & ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಸೋಮವಾರ ಸಿಕ್ಕಿಂ, ಅಸ್ಸಾಂ, ವಿಜೋರಾಂ, ಲಕ್ಷದ್ವೀಪ, ದೆಹಲಿ, ನ್ಯಾಗಾಲ್ಯಾಂಡ್, ಮಣಿಪುರ, ತ್ರಿಪುರ, ಬಿಹಾರ, ಉತ್ತರ ಪ್ರದೇಶ, ಹರ್ಯಾಣ, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಲಡಾಖ್ ಮುಂತಾದ ಕಡೆ ಗುಡುಗು ಸಹಿತ ಮಳೆಯಾಗಲಿದೆ.
ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ವಿವಿಧ ಜಲಾಶಯಗಳು ಭರ್ತಿಯಾಗಿವೆ. ಆದರೆ ಕಾವೇರಿ ಕೊಳ್ಳದ ಪ್ರಮುಖ ಜಲಾಶಯ ಕೆಆರ್ಎಸ್ ಭರ್ತಿಯಾಗಿಲ್ಲ. 38.04 ಮೀಟರ್ ಜಲಾಶಯದಲ್ಲಿ 35.51 ಮೀಟರ್ ನೀರಿನ ಸಂಗ್ರಹವಿದೆ. ಸುಮಾರು 11 ಸಾವಿರ ಕ್ಯುಸೆಕ್ ಒಳಹರಿವು ಇದ್ದು, 10,945 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.











Click it and Unblock the Notifications