ಕರ್ನಾಟಕದ ಹವಾಮಾನ; ಸೆ. 9ರ ತನಕ ಗುಡುಗು ಸಹಿತ ಮಳೆ
ಬೆಂಗಳೂರು, ಸೆಪ್ಟೆಂಬರ್ 04; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಮಳೆಯಾಗಿದ್ದು, ಭಾನುವಾರವೂ ಮೋಡ ಕವಿದ ವಾತಾವರಣವಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರ ತನಕ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ವೇಗವಾಗಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ.
Infographics: ಕರ್ನಾಟಕದಲ್ಲಿ ಸೆ.7ರವೆರಗೂ ಧಾರಾಕಾರ ಮಳೆ
ಭಾನುವಾರ ಶಿವಮೊಗ್ಗ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 9ರ ತನಕ ಗುಡುಗು ಸಹಿತ ಮಳೆ ಬೆಂಗಳೂರು, ಕರಾವಳಿ ಜಿಲ್ಲೆಗಳು, ಮಲೆನಾಡು ಮತ್ತು ಕೊಡಗಿನಲ್ಲಿ ಮುಂದುವರೆಯಲಿದೆ.
ಮಳೆ ನೀರಿನ ಸೆಳೆತಕ್ಕೆ ಕೊಚ್ಚಿಹೋದ ಸೇತುವೆ, ಕಣ್ವ ಜಲಾಶಯದ ಸಂಪರ್ಕ ಕಡಿತ
ಬೆಂಗಳೂರು ನಗರದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಮೋಡ ಕವಿದ ವಾತಾವರಣ ಮುಂದುವರೆದಿದೆ. ಇನ್ನೂ ಒಂದು ವಾರ ನಗರದಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
Karnataka Rains : ಕರ್ನಾಟಕ ಮಳೆ: ದಕ್ಷಿಣ ಒಳನಾಡಿನಲ್ಲಿ 186% ಅಧಿಕ ಮಳೆ
ಬದಲಿ ಮಾರ್ಗ ಬಳಸಿ; ರಾಮನಗರ ಜಿಲ್ಲೆಯಲ್ಲಿ ಭಾನುವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಮತ್ತೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆ ಇದೆ. ಇದರಿಂದಾಗಿ ವಾಹನ ಸವಾರರು ಪರ್ಯಾಯ ಮಾರ್ಗವನ್ನು ಬಳಕೆ ಮಾಡುವಂತೆ ಮನವಿ ಮಡಲಾಗಿದೆ.
ರಾಮನಗರ ಪೊಲೀಸರು ಬೆಂಗಳೂರು-ಮೈಸೂರು ಪ್ರಯಾಣಿಕರು ಬೆಂಗಳೂರು-ಕನಕಪುರ ಅಥವಾ ಬೆಂಗಳೂರು-ಕುಣಿಗಲ್ ಮಾರ್ಗವಾಗಿ ಮೈಸೂರು ತಲುಪುವಂತೆ ಸಲಹೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಮಳೆ ಭಾರೀ ಅವಾಂತರ ಸೃಷ್ಟಿ ಮಾಡಿತ್ತು, ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಭಾನುವಾರ ಸಹ ಮಳೆ ಪ್ರಮಾಣ ಹೆಚ್ಚಾದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರವಾಹದಂತೆ ನೀರು ಸಂಗ್ರಹವಾಗುವ ಸಾಧ್ಯತೆ ಇದೆ. ಆದ್ದರಿಂದ ಬದಲಿ ಮಾರ್ಗದ ಮೂಲಕ ಸಂಚಾರ ನಡೆಸಲು ಪೊಲೀಸರು ಸಲಹೆ ನೀಡಿದ್ದಾರೆ.
ಸತತ ಎರಡು ಗಂಟಗಳ ಕಾಲ ಮಳೆ ಸುರಿದರೆ ರಾಮನಗರಲ್ಲಿ ಪ್ರವಾಹ ಉಂಟಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಲ್ಲುವ ಸಾಧ್ಯತೆ ಇದೆ. ಆದ್ದರಿಂದ ವಾಹನ ಸವಾರರು ಪರ್ಯಾಯ ಮಾರ್ಗವನ್ನು ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಮಂಡ್ಯ ಜಿಲ್ಲಾ ಪೊಲೀಸರಿಗೆ ಸಹ ಈ ಕುರಿತು ಮಾಹಿತಿ ನೀಡಲಾಗಿದೆ.
ನೈಋತ್ಯ ಮುಂಗಾರು ಅಬ್ಬರ; ಜೂನ್ನಿಂದ ಸೆಪ್ಟೆಂಬರ್ ತನಕ ನೈಋತ್ಯ ಮುಂಗಾರು ಅವಧಿಯಾಗಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಆದರೆ ಆಗಸ್ಟ್ ತಿಂಗಳ ಕೊನೆಯಲ್ಲಿ ಆರಂಭವಾಗಿರುವ ಧಾರಾಕಾರ ಮಳೆ ಜನರನ್ನು ಕಂಗೆಡಿಸಿದೆ.
ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳ ಜನರು ಮಳೆಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇಂತಹ ಸಮಯದಲ್ಲಿಯೇ ಇನ್ನೂ 6 ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಯೆಲ್ಲೋ ಅಲರ್ಟ್; ಭಾನುವಾರದಿಂದ ನಾಲ್ಕು ದಿನಗಳ ಕಾಲ ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ರಾಮನಗರ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಸೋಮವಾರದಿಂದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯ ಸೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಸಹ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 9ರ ತನಕ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ. ನಗರದಲ್ಲಿ ಭಾನುವಾರ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇದೆ.