ಕರ್ನಾಟಕ; 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, ಜುಲೈ 20 : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಬಿರುಸುಗೊಂಡಿದ್ದು ಭಾರಿ ಮಳೆಯಾಗುತ್ತಿದೆ. ಜುಲೈ 20 ಮತ್ತು 21ರಂದು ರಾಜ್ಯದ 9 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video
ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಧಾರಕಾರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಮವಾರ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು 'ಅರೆಂಜ್ ಅಲರ್ಟ್' ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ಜೋರಾಗಿ ಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕಾರವಾರ ಮತ್ತು ಕುಂದಾಪುರದಲ್ಲಿ ಭಾನುವಾರ 13 ಸೆಂ. ಮೀ.ನಷ್ಟು ಮಳೆಯಾಗಿದೆ. ಕಾರ್ಕಳ, ಗೋಕರ್ಣ ಮತ್ತು ಆಗುಂಬೆಯಲ್ಲಿ 7 ಸೆಂ. ಮೀ. ಮಳೆ ಸುರಿದಿದೆ.

ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ಭಾನುವಾರ ಸಂಜೆಯಿಂದ ತುಂತುರು ಮಳೆಯಾಗುತ್ತಿದೆ. ರಾತ್ರಿಯೂ ಹಲವು ಭಾರಿ ಮಳೆಯಾಗಿದ್ದು, ಉಷ್ಣಾಂಶದಲ್ಲಿ ಇಳಿಕೆಯಾಗಿದೆ. ಸೋಮವಾರ ಮುಂಜಾನೆಯೂ ಅಲ್ಲಲ್ಲಿ ಮಳೆಯಾಗಿದ್ದು, ನಗರದಲ್ಲಿ ಮೋಡ ಕವಿದ ವಾತಾವರಣವಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಶಿವಮೊಗ್ಗದಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ. ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಣೆ ಮಾಡಿದೆ.
ಹೊಸಪೇಟೆ ಬಳಿಯ ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯಕ್ಕೆ ಭಾನುವಾರ ಒಂದೇ ದಿನ 4 ಟಿಎಂಸಿ ಅಡಿ ನೀರು ಹರಿದು ಬಂದಿದೆ. ವಿಜಯಪುರ, ಧಾರವಾಡ, ಗದಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಚಳ್ಳಕೆರೆ ತಾಲೂಕಿನಲ್ಲಿ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.












Click it and Unblock the Notifications