Karnataka Rains : ಕರ್ನಾಟಕದಲ್ಲಿ ಮೂರು ದಿನ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು, ನವೆಂಬರ್ 27; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವಾರದ ಆರಂಭದಲ್ಲಿ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗಿತ್ತು. ಮಳೆಯ ಜೊತೆ ಚಳಿಯೂ ಇತ್ತು. ಆದರೆ, ಗುರುವಾರದ ಬಳಿಕ ಮಳೆಯಾಗಿಲ್ಲ. ಚುಮು ಚುಮು ಚಳಿಯ ವಾತಾವರಣ ಮುಂದುವರೆದಿದೆ. ಮುಂಜಾನೆ ಸಮಯದಲ್ಲಿ ಇಬ್ಬನಿಯೂ ಇದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.
ಬೆಂಗಳೂರಿಗೆ ಬಿಡುವು ಕೊಟ್ಟ ವರುಣ; ಬೆಂಗಳೂರು ನಗರದಲ್ಲಿ ಈ ವಾರದ ಆರಂಭದಲ್ಲಿ ಅಬ್ಬರಿಸಿದ್ದ ವರುಣ ಎರಡು ದಿನಗಳಿಂದ ಬಿಡುವು ನೀಡಿದ್ದಾನೆ. ಆದರೆ ನಗರದಲ್ಲಿ ಆಗಾಗ ಮೋಡ ಕವಿದ ವಾತಾವರಣ ಉಂಟಾಗುತ್ತಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾನುವಾರ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರದಲ್ಲಿ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ.
ಕೃಷಿ ಕ್ಷೇತ್ರಕ್ಕೆ ಹಾನಿ; ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಿದೆ. 10 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಕಡಿಮೆ ಬಿತ್ತನೆಯಾಗಿದೆ ಎಂದು ಅಂದಾಜಿಸಲಾಗಿದೆ.
ಕೃಷಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ನವೆಂಬರ್ 10ರ ತನಕ ರಾಜ್ಯಾದ್ಯಂತ 26.68 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು. ಆದರೆ 16.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ.












Click it and Unblock the Notifications