ಸೆ. 15ರ ತನಕ ಮಳೆ; ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 12; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಪಂಜಾಬ್, ನವದೆಹಲಿ, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಒಡಿಶಾ, ಛತ್ತೀಸ್ಗಢ್, ಮಧ್ಯಪ್ರದೇಶ, ಗುಜರಾತ್ ಪೂರ್ವ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ 10ರಷ್ಟು ಮಳೆಯಾಗಿತ್ತು. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಮಳೆ ಕೊರತೆಕಂಡು ಬಂದಿದೆ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜುಲೈನಲ್ಲಿ ಶೇ 7ರಷ್ಟು, ಆಗಸ್ಟ್ನಲ್ಲಿ ಶೇ 24 ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಆದರೆ ಈಗ ಮಳೆಯಾದರೆ ಭತ್ತ, ಹತ್ತಿ, ಕಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.
24 ಗಂಟೆಗಳಲ್ಲಿ ಮಳೆ; ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರ್ಯಾಣ, ನವದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ್, ಒಡಿಶಾ, ಛತ್ತೀಸ್ಗಢ್, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ, ಪೂರ್ವ ಗುಜರಾತ್ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸೆಪ್ಟೆಂಬರ್ 12 ಮತ್ತು 13ರಂದು ಉತ್ತರ ಕೊಂಕಣ, ಗುಜರಾತ್ನ ದಕ್ಷಿಣ ಭಾಗ, ಕರಾವಳಿ ಕರ್ನಾಟಕ, ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಲಡಾಖ್, ಹರ್ಯಾಣ, ದೆಹಲಿ, ಪಂಜಾಬ್, ಬಿಹಾರ, ಪಶ್ಚಿಮ ಬಂಗಾಳದಲ್ಲಿ ಮಳೆಯಾಗಲಿದೆ.
ಬೀದರ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಕಾರಂಜಾ ಜಲಾಶಯ ಭರ್ತಿಯಾಗಿದೆ. ಡ್ಯಾಂನಿಂದ 9 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ವಿವಿಧ ಪ್ರದೇಶಗಳಲ್ಲಿ ಬೆಳೆಗಳು ಜಲಾವೃತವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟವೂ ಏರಿಕೆಯಾಗುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ 13,668 ಕ್ಯುಸೆಕ್ ಒಳ ಹರಿವು ದಾಖಲಾಗಿದೆ. ಮಂಡ್ಯದಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ 11,391 ಕ್ಯುಸೆಕ್ ನೀರು ಹರಿದುಬರುತ್ತಿದೆ.
ಮಹಾರಾಷ್ಟ್ರ ಭಾಗದಲ್ಲಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಆಮಲಟ್ಟಿ ಜಲಾಶಯಕ್ಕೆ 48,800 ಕ್ಯುಸೆಕ್ ನೀರು ಹರಿದು ಬರುತ್ತಿದೆ. ನಾರಾಯಣಪುರ ಜಲಾಶಯಕ್ಕೆ ಒಳಹರಿವು 61,317 ಕ್ಯುಸೆಕ್ ಆಗಿದೆ.
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಜಲಾಶಯಕ್ಕೆ 25,169 ಕ್ಯುಸಕ್ ನೀರು ಹರಿದುಬರುತ್ತಿದೆ. ಭದ್ರಾ ಜಲಾಶಯಕ್ಕೆ 5,353 ಕ್ಯುಸೆಕ್, ಘಟಪ್ರಭಾ ಜಲಾಶಯಕ್ಕೆ 6,662 ಕ್ಯುಸೆಕ್ ಒಳಹರಿವು ಇದೆ.
ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 2260.83 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2089.48 ಮಿ. ಮೀ. ಮಳೆಯಾಗಿತ್ತು.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಪ್ರಸ್ತುತ ನೀರಿನ ಮಟ್ಟ 2858.06 ಅಡಿಗಳು. ಕಳೆದ ವರ್ಷ ಇದೇ ದಿನ 2856.40 ಅಡಿಗಳ ನೀರಿನ ಸಂಗ್ರಹವಿತ್ತು. ಜಲಾಶಯಕ್ಕೆ ಒಳಹರಿವು 5076 ಕ್ಯುಸೆಕ್, ಹೊರ ಹರಿವು 5522 ಕ್ಯುಸೆಕ್.












Click it and Unblock the Notifications