Karnataka Rain: ಕರ್ನಾಟಕ; ಕರಾವಳಿ & ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು, ಏಪ್ರಿಲ್ 07; ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ಉಷ್ಣಾಂಶವೂ ಏರಿಕೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆ ಉತ್ತರ-ಪಶ್ಚಿಮ ಭಾರತ ಮತ್ತು ಈಶಾನ್ಯ ಭಾರತ ಪ್ರದೇಶದಲ್ಲಿ ಬಿಸಿಯಾದ ಗಾಳಿ ಮುಂದುವರೆಯಲಿದ್ದು, ಮುಂದಿನ ಐದು ದಿನ ಮಳೆಯಾಗಬಹುದು ಎಂದು ಹೇಳಿದೆ.

ಮುಂದಿನ 5 ದಿನಗಳ ಕಾಲ ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ನಾಗಾಲ್ಯಾಂಡ್, ಮಣಿಪುರ, ತ್ರಿಪುರದಲ್ಲಿಯೂ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಭಾರತಕ್ಕೆ ಮುನ್ಸೂಚನೆ; ದಕ್ಷಿಣ ಭಾರತದಲ್ಲಿ ಮುಂದಿನ 5 ದಿನಗಳ ತನಕ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.
ದಕ್ಷಿಣ ಅಂಡಮಾನ್ ಭಾಗದಲ್ಲಿ ಚಂಡಮಾರುತ ರೂಪಗೊಳ್ಳುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಬಂಗಾಲಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಮುಂದಿನ 48 ಗಂಟೆಗಳಲ್ಲಿ ಈ ಕುರಿತು ಸ್ಪಷ್ಟವಾದ ಚಿತ್ರಣ ಸಿಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗುಜರಾತ್ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ತಾಪಮಾನ ಇಳಿಕೆಯಾಗಲಿದೆ. 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಳಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜಸ್ಥಾನದಲ್ಲಿ ಮುಂದಿನ 5 ದಿನಗಳ ತನಕ ಬಿಸಿಯಾದ ಗಾಳಿ ಮುಂದುವರೆಯಲಿದೆ.

ದಕ್ಷಿಣ ಹರ್ಯಾಣ, ದೆಹಲಿ, ಉತ್ತರ ಪ್ರದೇಶದ ಪಶ್ಚಿಮ ಭಾಗ ಮತ್ತು ಮಧ್ಯ ಪ್ರದೇಶದಲ್ಲಿ 5 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ. ಹಿಮಾಚಲ ಪ್ರದೇಶ, ವಿದರ್ಭ, ಬಿಹಾರ ಸಹ ಬಿಸಿಗಾಳಿಗೆ ಸಿಲುಕಲಿದೆ. ಮಧ್ಯ ಪ್ರದೇಶ, ಜಮ್ಮು ವಲಯದಲ್ಲಿ 2 ದಿನ ಬಿಸಿಗಾಳಿ ಬೀಸಲಿದೆ.
ವಿವಿಧ ಜಿಲ್ಲೆಗಳಲ್ಲಿ ತಾಪಮಾನ; ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿತ್ತು. ಬಳಿಕ ಚದುರಿದಂತೆ ಮೋಡ ಕವಿದ ವಾತಾವರಣ ಕಂಡು ಬಂದರೂ ಮಳೆಯಾಗಿಲ್ಲ. ಆದರೆ ತಾಪಮಾನ ಏರಿಕೆಯಾಗುತ್ತಲೇ ಇದೆ.
ಗುರುವಾರ ರಾಯಚೂರು, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.












Click it and Unblock the Notifications