ಹವಾಮಾನ ವರದಿ; ಬೆಂಗಳೂರಲ್ಲಿ ನಾಲ್ಕು ದಿನ ಮಳೆ
ಬೆಂಗಳೂರು, ನವೆಂಬರ್ 12; ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ತಾಪಮಾನ ಕುಸಿದಿದ್ದು, ಶೀತಗಾಳಿ ದಿನವಿಡೀ ಇತ್ತು. ನಗರದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಗುರುವಾರ ದಿನ ಪೂರ್ತಿ ಮಳೆಯಾಗಿದೆ. ಜಿಟಿ ಜಿಟಿ ಮಳೆಯ ಕಾರಣ ಜನರು ಪರದಾಡಿದರು ಜೊತೆಗೆ ಶೀತದ ವಾತಾವರಣ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿತು.
ಕರ್ನಾಟಕದಲ್ಲಿ ಮಳೆ; ಜಲಾಶಯಗಳಲ್ಲಿ ಎಷ್ಟು ನೀರಿದೆ?
ಬೆಂಗಳೂರು ನಗರದ ತಾಪಮಾನ 17 ರಿಂದ 18 ಡಿಗ್ರಿಗೆ ಕುಸಿದಿದೆ. ದಿನಪೂರ್ತಿ ತುಂತುರು ಮಳೆಯಾಗಿದ್ದು, ಜನರ ಸಂಚಾರ ಕಡಿಮೆಯಾಗಿತ್ತು. ದಿನಪೂರ್ತಿ ಮಳೆಯಾದರೂ ಯಾವುದೇ ಅನಾಹುತಗಳು ವರದಿಯಾಗಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೇಳಿದೆ.
ಮೊದಲು ಓದಿ: ಚೆನ್ನೈನಲ್ಲಿ ಮಳೆ ಸೃಷ್ಟಿಸಿದ ಅವಾಂತರಗಳ ಪಟ್ಟಿ ಇಲ್ಲಿದೆ
ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ನಗರದಲ್ಲಿ 4.2 ಮಿ. ಮೀ. ಮಳೆಯಾಗಿತ್ತು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3.8 ಮಿ. ಮೀ. ಮಳೆಯಾಗಿದ್ದು, ಎಚ್ಎಎಲ್ನಲ್ಲಿ 3.5 ಮಿ. ಮೀ. ಮಳೆ ದಾಖಲಾಗಿದೆ. ನಗರದ ತಾಪಮಾನ ದಿನವಿಡೀ 17, 18 ಡಿಗ್ರಿ ಸೆಲ್ಸಿಯಸ್ ನಡುವೆ ಇತ್ತು.
ಕರ್ನಾಟಕ; ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ
ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ
ಶುಕ್ರವಾರ ಮತ್ತು ಶನಿವಾರ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ವ್ಯಾಪ್ತಿಯ ಜಿಲ್ಲೆಗಳಲ್ಲಿ ನವೆಂಬರ್ 14 ಮತ್ತು 15ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಗುರುವಾರದ ನೀರಿನ ಮಟ್ಟ 2857.67 ಅಡಿಗಳು. ಒಳಹರಿವು 637 ಕ್ಯುಸೆಕ್, ಹೊರ ಹರಿವು ನದಿಗೆ 533 ಕ್ಯುಸೆಕ್, ನಾಲೆಗೆ 500 ಕ್ಯುಸೆಕ್.
ವಿವಿಧ ಜಿಲ್ಲೆಗಳಲ್ಲಿ ಮಳೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 15ರ ತನಕ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಆಗಾಗ ತುಂತುರು ಮಳೆಯಾಗಬಹುದು. ಬೆಳಗಾವಿ, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸೋಮವಾರದ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 0.02 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 2859.91 ಮಿ. ಮೀ. ಮಳೆ ಸುರಿದಿದೆ.
ವಾಯುಭಾರ ಕುಸಿತದಿಂದ ಮಳೆ
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇದುವರೆಗೂ 14 ಜನರು ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶದ ದಕ್ಷಿಣ ಭಾಗ ಮತ್ತು ಚೆನ್ನೈ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸಂಕಷ್ಟಕ್ಕೆ ಸಿಲುಕಿದ ರೈತರು
ವಾಯುಭಾರ ಕುಸಿತದ ಪರಿಣಾಮ ಸುರಿಯುತ್ತಿರುವ ಮಳೆ ರೈತರಿಗೆ ಸಂಕಷ್ಟ ತಂದೊಡ್ಡಿದೆ. ತರಕಾರಿ ಬೆಳೆಗಳಿಗೆ ಹಾನಿಯಾಗುತ್ತಿದೆ. ಟೊಮೆಟೋ, ಬೀನ್ಸ್ ಸೇರಿದಂತೆ ವಿವಿಧ ಬೆಳಗಳಿಗೆ ಹಾನಿಯಾಗಿದೆ. ರಾಗಿ, ಭತ್ತದ ಬೆಳೆಗೆ ಹಾನಿಯಾಗಲಿದ್ದು, ರೈತರು ಆತಂಕಗೊಂಡಿದ್ದಾರೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇದು ಅಡಕೆ ಕಟಾವು ಸಮಯ. ಸರಿಯಾದ ಬಿಸಿಲಿಲ್ಲದೇ, ತುಂತುರು ಮಳೆಯಾಗುತ್ತಿದ್ದು ಅಡಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಡಕೆ ತೋಟಗಳಿಗೆ ಮತ್ತೆ ಕೊಳೆ ರೋಗ ಕಾಣಿಸಿಕೊಂಡಿದೆ.
Recommended Video