ಮಳೆ; ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾನುವಾರ ಯೆಲ್ಲೊ ಅಲರ್ಟ್
ಬೆಂಗಳೂರು, ನವೆಂಬರ್ 28; ಶ್ರೀಲಂಕಾ ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 28ರಂದು ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾನುವಾರ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಈ ಐದು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಸೋಮವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರಿಂದಾಗಿ ಆಂಧ್ರ ಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಭಾನುವಾರ ಲಘುವಾಗಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ತಮಿಳುನಾಡಿನಲ್ಲಿ ನವೆಂಬರ್ 30ರ ತನಕ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಆಂಧ್ರ ಪ್ರದೇಶದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ತಾಪಮಾನ ಕುಸಿತವಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಬೆಳಗಾವಿ ಮತ್ತು ಧಾರವಾಡದಲ್ಲಿ ಶನಿವಾರ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.

ಭಾರೀ ಮಳೆ ಮುನ್ಸೂಚನೆ ಇಲ್ಲ
ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ಎಂಡಿಸಿ) ಮುಂದಿನ ದಿನಗಳಲ್ಲಿ ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವುದಿಲ್ಲ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಗುರುವಾರದ ಬಳಿಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ಶನಿವಾರ ಮೋಡ ಕವಿದ ವಾತಾವರಣವಿತ್ತು, ಭಾನುವಾರ ಬೆಳಗ್ಗೆ ಸಹ ಶೀತಗಾಳಿ ಬೀಳಸುತ್ತಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ.

ಭಾನುವಾರ ವಿವಿಧ ರಾಜ್ಯದಲ್ಲಿ ಮಳೆ
ತಮಿಳುನಾಡು ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಭಾನುವಾರ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೇರಳ, ಲಕ್ಷದ್ವೀಪ, ಕರ್ನಾಟಕದ ವಿವಿಧ ಜಿಲ್ಲೆಗಳು, ಲಡಾಖ್, ಗೋವಾ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ನವೆಂಬರ್ 28ರಂದು ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ನವೆಂಬರ್ 29ರ ಬಳಿಕ ಮಳೆ ಸುರಿಯದಿದ್ದರೂ ಮೋಡ ಕವಿದ ವಾತಾವರಣ ಮುಂದುವೆಯುವ ನಿರೀಕ್ಷೆ ಇದೆ.

ಈಶಾನ್ಯ ಮಾನ್ಸೂನ್ ಪ್ರಭಾವದಿಂದ ಮಳೆ
ಈಶಾನ್ಯ ಮಾನ್ಸೂನ್ ಪ್ರಭಾವದಿಂದಾಗಿ ದಕ್ಷಿಣ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ತೆಲಂಗಾಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. 2015ರಲ್ಲಿ ಇದೇ ಪ್ರಭಾವದಿಂದ ಚೆನ್ನೈ ಮತ್ತು ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಭಾನುವಾರ ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮುಂತಾದ ಕಡೆ ನವೆಂಬರ್ 30ರ ತನಕ ಮಳೆಯಾಗುವ ಸಾಧ್ಯತೆ ಇದೆ.
Recommended Video

ಮುಂದಿನ ವಾರಾಂತ್ಯದ ತನಕ ಮಳೆ
ಬಂಗಾಳಕೊಲ್ಲಿಯಲ್ಲಿ ಸೋಮವಾರ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರಿಂದಾಗಿ ಮುಂದಿನ ವಾರಾಂತ್ಯದ ತನಕ ಪೂರ್ವ ಕರಾವಳಿ ರಾಜ್ಯಗಳಾದ ಒಡಿಶಾ, ಆಂಧ್ರ ಪ್ರದೇಶದಲ್ಲಿ ಮಳೆಯಾಗಬಹುದು. ನವೆಂಬರ್ 29 ಮತ್ತು 30ರಂದು ಲಡಾಖ್, ಅರುಣಾಚಲ ಪ್ರದೇಶದಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ದೇಶದ ಇತರ ಯಾವುದೇ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿಲ್ಲ.












Click it and Unblock the Notifications