Karnataka Rains : ಸೆ.7ರವರೆಗೆ ಕರ್ನಾಟಕದಲ್ಲಿ ಭಾರಿ ಮಳೆ
ಬೆಂಗಳೂರು, ಸೆಪ್ಟಂಬರ್ 02: ಕರ್ನಾಟಕದ ಹಲವು ಕಡೆಗಳಲ್ಲಿ ಸೆಪ್ಟಂಬರ್ 7ರವರೆಗೆ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿಯಿಂದ ಅತೀ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಇದಲ್ಲದೇ ಕರಾವಳಿ ಹಾಗೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಮಳೆ ಅಷ್ಟಾಗಿ ಬಾರದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೂರು ದಿನಗಳ ನಂತರ ಮತ್ತೆ ಮಳೆ ತುಸು ಚುರುಕಾಗುವ ಲಕ್ಷಣಗಳು ಇವೆ. ಹೀಗಾಗಿ ಈ ಎರಡು ಭಾಗದ ಏಳು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಸೆ.7ರವರೆಗೆ ಮಳೆ ಮುಂದುವರಿಯಲಿದೆ. ಈ ಪೈಕಿ ಮುಂದಿನ ಮೂರು ದಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಗುಡುಗು ಸಹಿತ ಭಾರಿಯಿಂದ ಅತೀ ಭಾರಿ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರ ಅದೇ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಕೊಡಲಾಗಿದೆ. ಇದರ ಹೊರತು ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರ್ನಾಟಕ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 40-50 ಕಿ.ಮೀ. ಇರಲಿದೆ. ಕೆಲವೊಮ್ಮೆ ಈ ಗಾಳಿಯ ವೇಗ 60 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಕೊಡಗಿನಲ್ಲಿ ಅಧಿಕ ಮಳೆ ದಾಖಲು
ಶುಕ್ರವಾರ ಬೆಳಗ್ಗೆ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಘಂಟೆಯಲ್ಲಿ ನೈರುತ್ಯ ಮುಂಗಾರು ಒಳನಾಡಿನಲ್ಲಿ ಚುರುಕಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ಅಧಿಕ 13ಸೆಂಟಿ ಮೀಟರ್ ಮಳೆ ಆಗಿದೆ. ಉಳಿದಂತೆ ಕೊಡಗಿನ ನಾಪೋಕ್ಲು 11ಸೆಂಟಿ ಮೀಟರ್, ಶಿವಮೊಗ್ಗ ತಾಳಗುಪ್ಪದಲ್ಲಿ 10ಸೆಂ.ಮೀ, ಉಡುಪಿಯ ಕೋಟ 9ಸೆಂ.ಮೀ, ಗದಗ ಜಿಲ್ಲೆಯ ಶಿರಹಟ್ಟಿ ಮತ್ತು ಬೆಳಗಾವಿಯ ಖಾನಪುರದಲ್ಲಿ ತಲಾ ತಲಾ 7 ಸೆಂ.ಮೀ. ಮಳೆ ಆಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಸೆಪ್ಟಂಬರ್ 4 ಮತ್ತು 5ರಂದು ಸಾಧಾರಣ ಮಳೆ ಆಗಲಿದ್ದು, ಉಳಿದ ದಿನಗಳಲ್ಲಿ ತುಂತುರು ಮಳೆ ಬರಬಹುದು. ಆಗಾಗ ಬಿಸಿಲಿನ ವಾತಾವರಣ ಕಂಡು ಬರುವ ಸಾಧ್ಯತೆ ಇದೆ. ಇದರ ಹೊರತು ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.












Click it and Unblock the Notifications