Karnataka Rains : ಬೆಂಗಳೂರು ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ
ಬೆಂಗಳೂರು, ನ.15: ರಾಜ್ಯದಲ್ಲಿ ಚಳಿ ಶುರುವಾದರೂ ಮಳೆರಾಯನ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಬೆಂಗಳೂರು ನಗರ ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 17 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಕೆಲ ದಿನಗಳಿಂದ ರಾಜ್ಯದಲ್ಲಿ ಹಗುರ ಮಳೆಯಾಗುತ್ತಿದ್ದು, ಹಿಂಗಾರು ಮಳೆ ಮುಗಿಯುವ ಲಕ್ಷಣಗಳಿತ್ತು. ಇದರ ನಡುವೆ ಚಳಿ ವಿಪರಿತವಾಗಿತ್ತು. ಆದರೆ, ಇದಕ್ಕೆ ವಿರುದ್ಧವಾಗಿ ವರದಿ ನೀಡಿರುವ ಹವಾಮಾನ ಇಲಾಖೆ ಇನ್ನು ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡದ ಕರಾವಳಿ ಜಿಲ್ಲೆಗಳು, ಉತ್ತರ ಕನ್ನಡ, ಉಡುಪಿ, ಧಾರವಾಡದ ಉತ್ತರ ಪ್ರದೇಶಗಳು, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮಲೆನಾಡು (ಗುಡ್ಡಗಾಡು) ಪ್ರದೇಶಗಳು ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂಜಾನೆ ಮಂಜು ಮುಸುಕಿದ ವಾತಾವರಣವಿರುತ್ತದೆ. ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿಯೂ ಅದರಲ್ಲೂ ತಮಿಳುನಾಡು ಗಡಿಗೆ ಸಮೀಪದಲ್ಲಿರುವ ಬೆಂಗಳೂರಿನ ಮೇಲೂ ಪರಿಣಾಮ ಬೀರುತ್ತಿದೆ. ತಮಿಳುನಾಡು ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮೈಲಾದುತುರೈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ..

ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಮಳೆ ಪೀಡಿತ ಮತ್ತು ಜಲಾವೃತ ಪ್ರದೇಶಗಳನ್ನು ಪರಿಶೀಲನೆ ನಡೆಸಿದ್ದಾರೆ. "ರಾಜ್ಯದ ಜಲಾವೃತ ಪ್ರದೇಶಗಳಲ್ಲಿ ಒಳಚರಂಡಿ ಮತ್ತು ಲೋಕೋಪಯೋಗಿ ಇಲಾಖೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಆದರೆ ಯಾವುದೇ ಅಪಾಯವಿಲ್ಲ" ಎಂದು ಸ್ಟಾಲಿನ್ ತಿಳಿಸಿದ್ದಾರೆ.












Click it and Unblock the Notifications