ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ
ಬೆಂಗಳೂರು, ಸೆಪ್ಟೆಂಬರ್ 26: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕಾಗಿದೆ. ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮುಂದಿನ 5 ದಿನಗಳವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆ
ಬೆಂಗಳೂರು ನಗರದಲ್ಲಿ ಮತ್ತೆ ಮಳೆಯಾಗಿದೆ. ಶನಿವಾರ ರಾತ್ರಿ ಎರಡು ಬಾರಿ ಮಳೆ ಸುರಿದಿದೆ. ಭಾನುವಾರ ಸಹ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕಳೆ ವಾರದಿಂದ ನಗರದಲ್ಲಿ ಮಳೆಯಾಗುತ್ತಿದೆ.
ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರವರೆಗೂ ಮಳೆ
ಭಾನುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಚಿತ್ರದುರ್ಗ ವಿಶೇಷ; ಕೈಕೊಟ್ಟ ಮಳೆ, ಸ್ಪಿಂಕ್ಲರ್ ಮೊರೆ ಹೋದ ರೈತ
ನೈಋತ್ಯ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಮಳೆ ಸುರಿಸುತ್ತದೆ. ಆದರೆ ಈ ಬಾರಿ ಮುಂಗಾರು ಇನ್ನೂ 10 ದಿನಗಳ ಕಾಲ ಮಂದುವರೆಯಬಹುದು ಎಂದು ಅಂದಾಜಿಸಲಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯಬಹುದಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಮಹಾರಾಷ್ಟ್ರದಲ್ಲಿಯೂ ಮಳೆ ಸುರಿದ ಕಾರಣ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿತ್ತು. ಈಗ ಮುಂಗಾರು ಚುರುಕುಗೊಂಡಿದ್ದು, ಮಳೆಯ ಮುನ್ಸೂಚನೆ ಕೊಡಲಾಗಿದೆ.
ಸೆಪ್ಟೆಂಬರ್ 25ರ ಸಂಜೆ ಬಂಗಾಳಕೊಲ್ಲಿಗೆ ಚಂಡಮಾರುತವೊಂದು ಅಪ್ಪಳಿಸಿದೆ. ಇದರಿಂದಾಗಿ ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ಮಳೆಯಾಗಲಿದೆ. ಚಂಡಮಾರುತದಿಂದಾಗಿ ಮುಂದಿನ 12 ಗಂಟೆಗಳ ಕಾಲ ಮಳೆ ಸುರಿಯಬಹುದು ಎಂದು ಅಂದಾಜಿಸಲಾಗಿದೆ.
ಬಂಗಾಳಕೊಲ್ಲಿಗೆ ಅಪ್ಪಳಿಸಿರುವ ಚಂಡಮಾರುತಕ್ಕೆ 'ಗುಲಾಬ್' ಎಂದು ನಾಮಕರಣ ಮಾಡಲಾಗಿದೆ. ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶದ ದಕ್ಷಿಣ ಮತ್ತು ಉತ್ತರ ಕರಾವಳಿ, ಒಡಿಶಾ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಎಚ್ಚರಿಕೆ ಕೊಡಲಾಗಿದೆ.
ಉತ್ತರ ಪ್ರದೇಶ, ಮಧ್ಯಪ್ರದೇಶ, ತಮಿಳುನಾಡು, ಕೇರಳ, ಲಕ್ಷದ್ವೀಪ, ಪಶ್ಚಿಮ ರಾಜಸ್ಥಾನ, ಬಿಹಾರ, ಜಾರ್ಖಂಡ್ನಲ್ಲಿಯೂ 24 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.
ನದಿಗೆ ನೀರು ಬಿಡುಗಡೆ; ಬೀದರ್ನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕಾರಂಜಾ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. 7.69 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ 7.24 ಟಿಎಂಸಿ ಅಡಿ ನೀರಿನ ಸಂಗ್ರಹವಿವೆ.
ಜಲಾಶಯಕ್ಕೆ ಒಳಹರಿವು ಹೆಚ್ಚಾದ ಕಾರಣದಿಂದಾಗಿ 5050 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ರೈತರಿಗೆ ಸಂಕಷ್ಟ ತಂದಿದ್ದು, ಟೊಮೆಟೋ, ಉದ್ದು ಬೆಳೆಗಳಿಗೆ ಹಾನಿಯಾಗಿದೆ. ಡ್ಯಾಂನಿಂದ ನೀರು ಬಿಟ್ಟ ಪರಿಣಾಮ ಅದು ಹೊಲಗಳಿಗೆ ನುಗ್ಗಿದೆ.
ಜೂನ್ ತಿಂಗಳಿನಲ್ಲಿ ಮುಂಗಾರು ಆಗಮನವಾದರೂ ಸರಿಯಾಗಿ ಮಳೆ ಸುರಿಯಲಿಲ್ಲ. ಆದರೆ ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ಸುರಿದ ಮಳೆ ಅನಾಹುತ ಸೃಷ್ಟಿ ಮಾಡಿತ್ತು. ಆಗಸ್ಟ್ ತಿಂಗಳಿನಲ್ಲಿ ಮಳೆ ಕಡಿಮೆಯಾಗಿತ್ತು. ಸೆಪ್ಟೆಂಬರ್ನಲ್ಲಿ ಚಂಡಮಾರುತದ ಪರಿಣಾಮದಿಂದ ಮಳೆಯಾಗುತ್ತಿದೆ.
ಕೆಆರ್ಎಸ್ ಭರ್ತಿಯಾಗಿಲ್ಲ; ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. 9 ಅಡಿಗೂ ಹೆಚ್ಚಿನ ನೀರು ಜಲಾಶಯ ಭರ್ತಿಯಾಗಲು ಅಗತ್ಯವಿದೆ. ಪ್ರಸ್ತುತ ಜಲಾಶಯಕ್ಕೆ 4785 ಕ್ಯುಸೆಕ್ ಒಳಹರಿವು ಇದೆ. ಹೊರ ಹರಿವು 9274 ಕ್ಯುಸೆಕ್ ಆಗಿದೆ.
Recommended Video
ಈ ಬಾರಿ ಮುಂಗಾರು ಸಮಯದಲ್ಲಿ ಕೊಡಗು ಸೇರಿದಂತೆ ಕಾವೇರಿ ಕಣಿವೆಯಲ್ಲಿ ಪ್ರವಾಹ ಸೃಷ್ಟಿಸುವ ಮಳೆ ಸುರಿಯಲಿಲ್ಲ. ಹೀಗಾಗಿ ಕೆಆರ್ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬರಲೇ ಇಲ್ಲ. ಹಿಂದೆ ಅಕ್ಟೋಬರ್ ತಿಂಗಳಿನಲ್ಲಿ ಜಲಾಶಯ ಭರ್ತಿಯಾದ ಉದಾಹರಣೆ ಇದೆ. ಈ ಬಾರಿಯೂ ಜಲಾಶಯ ಭರ್ತಿಯಾಗಲಿದೆ ಎಂಬುದು ರೈತರ ನಿರೀಕ್ಷೆಯಾಗಿದೆ.