ಕರ್ನಾಟಕ; ಕರಾವಳಿ, ಇತರ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು, ಏಪ್ರಿಲ್ 10; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಭಾನುವಾರವೂ ಸಹ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.
ಮುಂಜಾನೆ ಮೋಡ ಕವಿದ ವಾತಾವರಣ ಇದ್ದರೂ ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪ ಏರಿಕೆಯಾಗಲಿದೆ. ಬೆಂಗಳೂರು, ಮಂಗಳೂರು, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂಜಾನೆ ಇರಲಿದೆ.

ಶಿವಮೊಗ್ಗ, ಬೆಳಗಾವಿ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹಾಸನ, ದಾವಣಗೆರೆ, ಮೈಸೂರಿನಲ್ಲಿಯೂ ಏಪ್ರಿಲ್ 11ರ ತನಕ ಮಳೆಯಾಗಲಿದೆ.
ಕೇರಳ, ತಮಿಳುನಾಡು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 11ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಬಿಸಿಗಾಳಿ ಬೀಸುವ ನಿರೀಕ್ಷೆ ಇದೆ.
ಮೂರು ದಿನಗಳ ಕಾಲ ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದಂತೆ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ತ್ರಿಪುರದಲ್ಲಿಯೂ ಸಾಧಾರಣ ಮಳೆಯ ಮುನ್ಸೂಚನೆ ಕೊಡಲಾಗಿದೆ.
ರಾಜಸ್ಥಾನ, ಗುಜರಾತ್, ಒಡಿಶಾ, ಪಂಜಾಬ್, ಹರ್ಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಛತ್ತೀಸ್ಗಢದಲ್ಲಿ ಬಿಸಿಗಾಳಿಯ ಪರಿಸ್ಥಿತಿ ಇದರಲಿದೆ.
ಕೇರಳ, ತಮಿಳುನಾಡಿನಲ್ಲಿ ಮಳೆ; ಕಳೆದ 10 ದಿನಗಳಿಂದ ಕೇರಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿತ್ತು. ಕಳೆದ ಎರಡು ದಿನಗಳಿಂದ ಗುಡುಗು ಸಹತ ಭಾರೀ ಮಳೆಯಾಗಿದೆ.
ಶುಕ್ರವಾರ ಕೇರಳದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಣ್ಣೂರಿನಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಸಿಡಿಲಿಗೆ ಬಲಿಯಾಗಿದ್ದರು. ಶನಿವಾರ ಸಹ ಏಳು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿತ್ತು.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತ ಸೃಷ್ಟಿಯಾಗುವ ಪರಿಸ್ಥಿತಿಯಿಂದಾಗಿ ಕೇರಳ ಮತ್ತು ತಮಿಳುನಾಡಿನಲ್ಲಿ ಮಳೆಯಾಗುತ್ತಿದೆ. ಕರ್ನಾಟಕ ಕರಾವಳಿಯಲ್ಲಿಯೂ ಸಹ ಚದುರಿದಂತೆ ಮಳೆಯಾಗಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮತ್ತು ಶ್ರೀಲಂಕಾದ ಸಮೀಪ ಚಂಡಮಾರುತದ ಚಲನೆಯು ಮುಂದುವರಿಯಲಿದೆ. ಸೋಮವಾರವೂ ಸಹ ತಮಿಳುನಾಡು ಮತ್ತು ಕೇರಳದಲ್ಲಿ ಮಳೆಯಾಗುವ ಸೂಚನೆ ಇದೆ.
ವಿವಿಧ ಜಿಲ್ಲೆಗಳಲ್ಲಿ ತಾಪಮಾನ; ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯಾದರೆ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ರಾಯಚೂರು, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ 34, ಮಂಗಳೂರು 32, ಶಿವಮೊಗ್ಗ 36, ಮೈಸೂರು 34, ಮಂಡ್ಯ 36, ಕೊಡಗು 28, ರಾಮನಗರ 36, ಹಾಸನ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ.
ಚಾಮರಾಜನಗರ 34, ಚಿಕ್ಕಬಳ್ಳಾಪುರ 35, ಕೋಲಾರ 34, ತುಮಕೂರು 36, ದಾವಣಗೆರೆ 37, ಚಿಕ್ಕಮಗಳೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇರಲಿದೆ.












Click it and Unblock the Notifications