ಬೆಂಗಳೂರು ಸೇರಿ ವಿವಿಧ ಜಿಲ್ಲೆಯಲ್ಲಿ ಸೆ.24ರ ತನಕ ಮಳೆ
ಬೆಂಗಳೂರು, ಸೆಪ್ಟೆಂಬರ್ 22; ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸೆಪ್ಟೆಂಬರ್ 24ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಿದೆ. ಬುಧವಾರ ಸಹ ಮೋಡ ಕವಿದ ವಾತಾವರಣವಿದೆ.

ಮುಂದಿನ 24 ಗಂಟೆಗಳ ಕಾಲ ಕರ್ನಾಟಕ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆಯನ್ನು ನೀಡಿಲ್ಲ.
ಬೆಂಗಳೂರು ನಗರದಲ್ಲಿ ಮಂಗಳವಾರವೂ ಮಧ್ಯಾಹ್ನ ಮತ್ತು ಸಂಜೆ ಉತ್ತಮ ಮಳೆಯಾಗಿದೆ. ಸೆಪ್ಟೆಂಬರ್ 24ರ ತನಕ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 17 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬೇಕಿತ್ತು. ಆದರೆ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಮಳೆ ಮುಂದುವರೆದಿದೆ. ಈ ತಿಂಗಳಿನಲ್ಲಿ ವಾಡಿಕೆಗಿಂತ ಶೇ 27ರಷ್ಟು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರೀಕ್ಷಿಸಿದೆ.
ಇನ್ನೂ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕ ಮಾತ್ರವಲ್ಲ ಮುಂದಿನ 24 ಗಂಟೆಗಳಲ್ಲಿ ಒಡಿಶಾ, ಪಶ್ಚಿಮ ಬಂಗಾಳದ ವಿವಿಧ ಪ್ರದೇಶಗಳು, ಗುಜರಾತ್, ಪೂರ್ವ ರಾಜಸ್ಥಾನ, ವಿದರ್ಭ, ಮರಾಠವಾಡ, ತೆಲಂಗಾಣ, ಗುಜರಾತ್, ಗೋವಾ, ಅಂಡಮಾನ್ & ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಗುಜರಾತ್ನಲ್ಲಿ ಸೆಪ್ಟೆಂಬರ್ 24ರ ತನಕ, ಕೇರಳದಲ್ಲಿ ಸೆಪ್ಟೆಂಬರ್ 23ರ ತನಕ ಹೆಚ್ಚು ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ. ಪಂಜಾಬ್, ಹರ್ಯಾಣ, ಹಿಮಾಚಲ ಪ್ರದೇಶ, ಲಡಾಖ್ನಲ್ಲಿ ಇಂದು ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.
ಪಶ್ಚಿಮ ಬಂಗಾಳ ಮತ್ತು ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆಯಿಂದಾಗಿ ಪ್ರವಾಹದ ಭೀತಿ ಎದುರಾಗಿದೆ. ವಾಯುಭಾರ ಕುಸಿದ ಪರಿಣಾಮ ಗುಡುಗಿನಿಂದ ಕೂಡಿದ ಮಳೆ ಸುರಿಯುತ್ತಿದ್ದು, ರಾಜ್ಯಗಳು ಸಹ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧವಾಗಿವೆ.
ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿತ್ತು. ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದವು. ಮಳೆಯಿಂದಾಗಿ 283 ಗ್ರಾಮಗಳು, 45 ತಾಲೂಕುಗಳಲ್ಲಿ ಹಾನಿಯಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ವರದಿ ತಯಾರು ಮಾಡಿದೆ.
ಆದರೆ ಜುಲೈ ತಿಂಗಳಿಗೆ ಹೋಲಿಕೆ ಮಾಡಿದರೆ ಆಗಸ್ಟ್ನಲ್ಲಿ ಮಳೆ ಕೊರತೆ ಉಂಟಾಗಿತ್ತು. ಸೆಪ್ಟೆಂಬರ್ ತಿಂಗಳನಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆ ವಿವಿಧ ರಾಜ್ಯಗಳಲ್ಲಿ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ನೈಋತ್ಯ ಮುಂಗಾರು ಮಾರುತಗಳು ಸೆಪ್ಟೆಂಬರ್ ತಿಂಗಳಿಗೆ ಅಂತ್ಯಗೊಳ್ಳುವುದಿಲ್ಲ. ಅಕ್ಟೋಬರ್ ಮಧ್ಯ ಭಾಗದ ತನಕ ಇರಲಿವೆ ಎಂದು ನಿರೀಕ್ಷಿಸಲಾಗಿದೆ. 2017, 2018ರಲ್ಲಿಯೂ ಸಹ ಮುಂಗಾರು ಮಾರುತಗಳು ಅಕ್ಟೋಬರ್ ತನಕ ಮಳೆ ಸುರಿಸಿದ್ದವು.
ಸೆಪ್ಟೆಂಬರ್ 1 ರಿಂದ 20ರ ತನಕ ಭಾರತದ ಎಲ್ಲಾ ಭಾಗಗಳಲ್ಲಿ ವಾಡಿಗೆಗಿಂತಲೂ ಹೆಚ್ಚು ಮಳೆಯಾಗಿದೆ. ಮಧ್ಯ ಭಾರತದಲ್ಲಿ ಶೇ 71ರಷ್ಟು ಮಳೆಯಾಗಿದೆ. ಮುಂಗಾರು ಮಾರುತಗಳು ಕೊನೆಗೊಳ್ಳುವ ಹೊತ್ತಿಗೆ ವಿವಿಧ ರಾಜ್ಯಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications