ಮುಂಗಾರು ಪೂರ್ವ ಮಳೆ ಇನ್ನೂ 3 ದಿನ ಮುಂದುವರೆಯುವ ಸಾಧ್ಯತೆ
ಬೆಂಗಳೂರು, ಮೇ 26: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮುಂದುವರೆದಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತ ನೇರ ಪರಿಣಾಮ ರಾಜ್ಯದ ಮೇಲೆ ಬೀರಿಲ್ಲ. ಆದರೆ ಅರಬ್ಬೀ ಸಮುದ್ರದಲ್ಲಿ ಎತ್ತರದ ಅಲೆಗಳು ಕಂಡುಬಂದಿವೆ. ನಾಳೆ ವೇಳೆಗೆ ಚಂಡಮಾರುತದ ದುರ್ಬಲಗೊಳ್ಳಲಿದೆ.
ಕರ್ನಾಟಕಕ್ಕೆ ಜೂನ್ 2ರಂದು ಅಧಿಕೃತ ಮುಂಗಾರು ಪ್ರವೇಶ ಸಾಧ್ಯತೆ
ಮುಂಗಾರುಪೂರ್ವ ಮಳೆ ಕೊಡಗು, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ದಕ್ಷಿಣ ರಾಜ್ಯದ ಹಲವು ಭಾಗಗಳಲ್ಲಿ ಬೀಳುತ್ತಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದರು.
ಈ ಬಾರಿಯ ಮೇ ತಿಂಗಳಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ನೈರುತ್ಯ ಮುಂಗಾರು ಮಳೆಯು ಸಕಾಲದಲ್ಲಿ ಆಗಮಿಸುವ ನಿರೀಕ್ಷೆ ಇದೆ. ಮೇ 29ಕ್ಕೆ ಕೇರಳ ಕರಾವಳಿಯನ್ನು ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದ್ದು, ಆನಂತರ ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಕಾಲಿಡಲಿದೆ.
ಶುಕ್ರವಾರ ಮಧ್ಯಾಹ್ನದಿಂದ ರಾತ್ರಿಯವರೆಗೂ ರಾಜ್ಯದ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ನಿರಂತರವಾಗಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿತ್ತು. ಮುಂದಿನ 24 ಗಂಟೆಯೊಳಗೆ ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಹಾಗೂ ಮಹಾರಾಷ್ಟ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ.
28 ಗುಡಿಸಲುಗಳು ಜಲಾವೃತ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನಲ್ಲಿ ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ರಾಮಗಿರಿ ಗ್ರಾಮದ ಹೊರವಲಯದಲ್ಲಿ ವಾಸವಾಗಿದ್ದ ಅಲೆಮಾರಿಗಳು, ಸುಡುಗಾಡು ಸಿದ್ಧರ ಗುಡಿಸಲುಗಳು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಇಲ್ಲಿನ 28 ಗುಡಿಸಲುಗಳಿಗೆ ನೀರು ನುಗ್ಗಿದ್ದರಿಂದ ಇಲ್ಲಿನ ನಿವಾಸಿಗಳು ರಾಮಗಿರಿ-ತಾಳಿಕಟ್ಟೆ ರಸ್ತೆಗೆ ಬಂದು ಕುಳಿತು ರಾತ್ರಿ ಇಡೀ ಅಲ್ಲಿಯೇ ಕಾಲ ಕಳೆದಿದ್ದಾರೆ.