ವಿಜಯದಶಮಿ ವೇಳೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು, ಅಕ್ಟೋಬರ್ 15: ರಾಜ್ಯದ ಕರಾವಳಿ ತೀರದಲ್ಲಿ ಅಕ್ಟೋಬರ್ 18 ಹಾಗೂ 19ರಂದು ಭಾರಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುರುವಾರ ಮತ್ತು ಶುಕ್ರವಾರ ತಲಾ 65 ಮಿಮೀನಷ್ಟು ಮಳೆ ಬೀಳುವ ಸಾಧ್ಯತೆಗಳಿವೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಮಾತ್ರವಲ್ಲದೇ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಮಳೆ ಬೀಳುವ ಸಾಧ್ಯತೆಗಳಿವೆ.

ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ಅಕ್ಟೋಬರ್ 15ರಂದು ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಏಳು ದಿನಗಳಲ್ಲಿ ಶೇ.77ರಷ್ಟು ಹೆಚ್ಚು ಮಳೆ ಬಿದ್ದಿದ್ದರೆ, ಉಡುಪಿ ಜಿಲ್ಲೆಯಲ್ಲಿ ಶೇ.7ರಷ್ಟು ಹೆಚ್ಚುವರಿ ಮಳೆ ಬಿದ್ದಿದೆ.
ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರದಿಂದ ಕೂಡಿದ ಭಾರಿ ಮಳೆ ಗುಡುಗು-ಸಿಡಿಲು ಸಹಿತ ಸುರಿಯುವ ನಿರೀಕ್ಷೆ ಇದೆ. ವಿಶೇಷವಾಗಿ ಮಲೆನಾಡಿನ ಜಿಲ್ಲೆಗಳಲ್ಲಿ ದಟ್ಟ ಮೋಡವಿದ್ದು, ಭಾರಿ ಮಳೆ ಬೀಳಲಿದೆ. ತಮಿಳುನಾಡಿನಲ್ಲಿ ದಟ್ಟಮೋಡಗಳು ಕವಿದಿದ್ದು, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.
ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ.












Click it and Unblock the Notifications