7th Pay Commission; ಸರ್ಕಾರಿ ನೌಕರರು ಮುಷ್ಕರ ನಡೆಸಬಹುದೇ?
ಬೆಂಗಳೂರು, ಜುಲೈ 12: ಕರ್ನಾಟಕದ ಸರ್ಕಾರಿ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಹಾಗಾದರೆ ಸರ್ಕಾರಿ ನೌಕರರು ಮುಷ್ಕರ ಮಾಡಬಹುದೇ? ಎಂಬುದು ಸದ್ಯದ ಪ್ರಶ್ನೆ.
ಕಾಂಗ್ರೆಸ್ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸಲು ವಿಳಂಬ ಮಾಡುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರದ ಕರೆ ನೀಡಿದ್ದಾರೆ. ಜುಲೈ ಅಂತ್ಯ ಅಥವ ಆಗಸ್ಟ್ನಲ್ಲಿ ಮುಷ್ಕರ ನಡೆಯುವ ನಿರೀಕ್ಷೆ ಇದೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16 ರಂದು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ವರದಿ ಸ್ವೀಕರಿಸಿದ್ದಾರೆ. ಆದರೆ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ವರದಿ ಜಾರಿಗೊಳಿಸಲಿಲ್ಲ. ಆದರೆ ಈಗ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಮಾಡುತ್ತಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣ.
ಮುಷ್ಕರ ನಡೆಸಬಹುದೇ?; ಚಿಕ್ಕಮಗಳೂರಿನಲ್ಲಿ ಭಾನುವಾರ ನಡೆದ ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಅನಿರ್ಧಿಷ್ಟಾವಧಿ ಮುಷ್ಕರದ ತೀರ್ಮಾನ ಕೈಗೊಳ್ಳಲಾಗಿದೆ. "ಅಮಾನತು, ಎಸ್ಮಾ ಜಾರಿ ಸೇರಿದಂತೆ ಯಾವುದೇ ಒತ್ತಡ, ಬೆದರಿಕೆಗಳಿಗೆ ಬಗ್ಗದೆ ಸರ್ಕಾರಿ ನೌಕರರು ಕರ್ತವ್ಯ ಬಹಿಷ್ಕಾರ ಮಾಡಿ ಚಳವಳಿ ನಡೆಸಬೇಕು" ಎಂದು ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಕರೆ ನೀಡಿದ್ದಾರೆ.
ನಿಯಮಗಳ ಪ್ರಕಾರ ಮುಷ್ಕರ ನಡೆಸುವ ಮೊದಲು ನೌಕರರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲಿಖಿತವಾಗಿ ಈ ಕುರಿತು ಮಾಹಿತಿ ನೀಡಬೇಕು. ಒಟ್ಟು 2 ಹಂತದಲ್ಲಿ ವೇತನ ಆಯೋಗದ ಶಿಫಾರಸು ಜಾರಿಗಾಗಿ ಹೋರಾಟ ಮಾಡಲು ಸರ್ಕಾರಿ ನೌಕರರು ತೀರ್ಮಾನಿಸಿದ್ದಾರೆ. ಮುಷ್ಕರ 2ನೇ ಹಂತದ ಹೋರಾಟವಾಗಿದೆ.
ಒಟ್ಟು ಎರಡು ಹಂತದಲ್ಲಿ ಹೋರಾಟದಲ್ಲಿ ಮೊದಲು ಜುಲೈ 8 ರಿಂದ 14ರ ತನಕ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಕೆ ಮಾಡಲಾಗುತ್ತದೆ. 2ನೇ ಹಂತದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ.
ಜುಲೈ 15ರಿಂದ 26ರ ತನಕ ಕರ್ನಾಟಕ ವಿಧಾನಸಭೆ ಅಧಿವೇಶನ ನಡೆಯಲಿದೆ. ಆದ್ದರಿಂದ ಅಧಿವೇಶನ ಮುಗಿದ ಬಳಿಕ ನೌಕರರು ಮುಷ್ಕರ ಆರಂಭಿಸುವ ಸಾಧ್ಯತೆ ಇದೆ. ಕರ್ನಾಟಕ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಜಿ. ಸಂಗಾ ಈ ಕುರಿತು ಮಾಹಿತಿ ನೀಡಿದ್ದಾರೆ. ಮುಷ್ಕರ ನಡೆಸುವ ಕುರಿತು ಎರಡು ದಿನದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
7ನೇ ವೇತನ ಆಯೋಗದ ವರದಿ ಜಾರಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ. ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಮರು ಸ್ಥಾಪನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು.
ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ತನ್ನ ವರದಿಯಲ್ಲಿ ನೌಕರರ ಮೂಲ ವೇತನದ ಶೇಕಡ 27.5ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಇದರಿಂದ ಸರ್ಕಾರಕ್ಕೆ ಆಗುವ ಆರ್ಥಿಕ ಹೊರೆಯನ್ನು ಲೆಕ್ಕಚಾರ ಹಾಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸು ಜಾರಿ ಕುರಿತು ತೀರ್ಮಾನ ಮಾಡಲಿದ್ದಾರೆ.
ಮುಖ್ಯಮಂತ್ರಿಗಳು ವರದಿಯನ್ನು ಹಣಕಾಸು ಇಲಾಖೆಗೆ ಸಲ್ಲಿಸಿದ್ದರು. ಶಿಫಾರಸು ಹೇಗೆ ಜಾರಿಗೊಳಿಸಬಹುದು? ಎಂದು ಇಲಾಖೆ ರೂಪುರೇಷೆಯೊಂದನ್ನು ಸಿದ್ಧಪಡಿಸಿ ಅದನ್ನು ಸಿದ್ದರಾಮಯ್ಯಗೆ ನೀಡಿದೆ. ಇದನ್ನು ಜುಲೈ 15ರಂದು ನಡೆಯುವ ಸಚಿವ ಸಂಪುಟ ಸಭೆಯ ಮುಂದಿಟ್ಟು ಬಳಿಕ ಘೋಷಣೆ ಮಾಡಲಾಗುತ್ತದೆ ಎಂಬ ಮಾಹಿತಿ ಇದೆ.












Click it and Unblock the Notifications