7th Pay Commission; 7ನೇ ವೇತನ ಆಯೋಗ ವರದಿ ಜಾರಿಗೆ ಸವಾಲುಗಳು
ಬೆಂಗಳೂರು, ಜುಲೈ 04: ಕರ್ನಾಟಕ ಸರ್ಕಾರಿ ನೌಕರರು, ನಿವೃತ್ತ ನೌಕರರ ಮಹತ್ವದ ಬೇಡಿಕೆ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ. ಆದರೆ ಈ ಕುರಿತು ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಬಹುದು ಎಂಬುದು ಎಲ್ಲರ ಲೆಕ್ಕಾಚಾರವಾಗಿದೆ.
2024ರ ಮಾರ್ಚ್ 16 ರಂದು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ವರದಿಯನ್ನು ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೀಡಿದೆ. ರಾಜ್ಯದ 7ನೇ ವೇತನ ಆಯೋಗವು ವರದಿಯಲ್ಲಿ ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕಿದೆ.

ಲೋಕಸಭೆ ಸೇರಿದಂತೆ ವಿವಿಧ ಚುನಾವಣಾ ಮಾದರಿ ನೀತಿ ಸಂಹಿತೆಯ ಕಾರಣಕ್ಕೆ ವರದಿ ಜಾರಿ ತಡವಾಗಿದೆ. ಈ ಹಿಂದೆ ನಡೆದ ಎರಡು ಸಚಿವ ಸಂಪುಟ ಸಭೆಯಲ್ಲಿ ವರದಿ ಕುರಿತು ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಗ್ರಹ ಮಾಡಿದ್ದಾರೆ. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ಸರ್ಕಾರಕ್ಕೆ ಸವಾಲುಗಳು: ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ ಜಾರಿಗೊಳಿಸಲು ಸರ್ಕಾರಕ್ಕೆ ಅನೇಕ ಸವಾಲುಗಳಿವೆ. ಪ್ರಮುಖವಾಗಿ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿ ಹೆಚ್ಚಳವಾಗಲಿದ್ದು, ಅದಕ್ಕೆ ಸರ್ಕಾರ ಹಣ ಹೊಂದಿಸಬೇಕಾದಿದೆ.
ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ. 17,000 ದಿಂದ ರೂ. 27,000ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ಸಿದ್ದರಾಮಯ್ಯ ನೀಡಿದ್ದರು. ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತಮ್ಮ ತೀರ್ಮಾನ ಪ್ರಕಟಿಸಲಿದೆ.
ಸರ್ಕಾರಿ ಉದ್ಯೋಗಿಗಳ ಮೂಲ ವೇತನ ಹೆಚ್ಚಳವಾದರೆ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 17,440 ಕೋಟಿ ರೂ. ಹೊರೆಯಾಗಲಿದೆ. 2024-25ನೇ ಸಾಲಿನ ಬಜೆಟ್ನಲ್ಲಿ ಇದಕ್ಕಾಗಿಯೇ ಸರ್ಕಾರ 15 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ವಿವಿಧ ಭತ್ಯೆಗಳು ಹೆಚ್ಚಳವಾಗಲಿದ್ದು, 3,791 ಕೋಟಿ ರೂ. ವೆಚ್ಚವಾಗಲಿದೆ.
ವರದಿಯನ್ನು ಏಪ್ರಿಲ್ 2024ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕಿದೆ. ಆದ್ದರಿಂದ ಸರ್ಕಾರಕ್ಕೆ 2800 ಕೋಟಿ ಹೆಚ್ಚುವರಿ ಹೊಣೆಯಾಗಲಿದೆ. ಪಿಎಫ್ ವಂತಿಗೆ ಮೊತ್ತ 530.45 ಕೋಟಿ, ಮರಣ, ನಿವೃತ್ತಿ ಉಪದಾನ 1083 ಕೋಟಿ ರೂ. ಆಗಲಿದೆ. ಆದ್ದರಿಂದ ಸರ್ಕಾರ ಆಯೋಗದ ವರದಿ ಶಿಫಾರಸು ಜಾರಿಯಲ್ಲಿ ಎಚ್ಚರಿಕೆ ಹೆಜ್ಜೆ ಇಡಬೇಕಿದೆ.
ಸರ್ಕಾರ ಇಂದಿನ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಸರ್ಕಾರಿ ನೌಕರರು ಬೇಡಿಕೆ ಇಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಮಾತನಾಡಿ, "7ನೇ ವೇತನ ಆಯೋಗದ ವರದಿ ಜಾರಿ ಬೇಡಿಕೆ ಮುಂದಿಡಲಾಗಿದೆ. ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇಲ್ಲವಾದರೆ ಜುಲೈ 7ರಂದು ನೌಕರರ ಸಂಘದ ಕಾರ್ಯಕಾರಣಿ ಸಭೆ ಕರೆದಿದ್ದು, ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದೇವೆ" ಎಂದು ಹೇಳಿದ್ದಾರೆ.
ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ವಿಷಯ ಪ್ರಸ್ತಾಪವಾಯಿತು. ಅನೌಪಚಾರಿಕವಾಗಿ ನಡೆದ ಚರ್ಚೆಯಲ್ಲಿ ಸಚಿವರು ಬೇರೆ-ಬೇರೆ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲವನ್ನೂ ಆಲಿಸಿದರು. ವರದಿಯನ್ನು ಯಥಾವತ್ ಜಾರಿಗೊಳಿಸಲು ಸಚಿವರ ಅಪಸ್ವರವಿದೆ.
ಮುಖ್ಯಮಂತ್ರಿಗಳು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಿದ್ದಾರೆ. ಇಲಾಖೆ ವರದಿಯನ್ನು ಹೇಗೆ ಜಾರಿಗೊಳಿಸಬೇಕು? ಎಂದು ರೂಪುರೇಷೆ ರೂಪಿಸುತ್ತಿದೆ. ಇದರ ಅನ್ವಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.












Click it and Unblock the Notifications