7th Pay Commission; ವೇತನ ಆಯೋಗದ ವರದಿ ಜಾರಿ, ಸರ್ಕಾರಿ ನೌಕರರ ಪರ ನಿಂತ ಪ್ರತಿಪಕ್ಷಗಳು
ಬೆಂಗಳೂರು, ಜುಲೈ 13: ಕರ್ನಾಟಕದ ಸರ್ಕಾರಿ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯ ಶಿಫಾರಸು ಜಾರಿಗೊಳಿಸಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಜುಲೈ 15ರಿಂದ ವಿಧಾನಸಭೆ ಮುಂಗಾರು ಅಧಿವೇಶನ ನಡೆಯಲಿದ್ದು, ಪ್ರತಿಪಕ್ಷಗಳಿಗೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಸ್ತ್ರವೊಂದು ಸಿಕ್ಕಿದೆ.
ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೊಳಿಸಲು ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಕರೆ ನೀಡಿದ್ದಾರೆ. ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಜನಪ್ರತಿನಿಧಿಗಳನ್ನು ಭೇಟಿ ಮಾಡಿ, ವರದಿ ಜಾರಿಗೆ ಸರ್ಕಾರವನ್ನು ಆಗ್ರಹಿಸಬೇಕು ಎಂದು ಮನವಿ ಸಲ್ಲಿಕೆ ಮಾಡುತ್ತಿದ್ದಾರೆ.

ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ. ಮುಡಾ ಹಗರಣ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಸೇರಿದಂತೆ ವಿವಿಧ ವಿಷಯಗಳು ಪ್ರತಿಪಕ್ಷಗಳ ಬತ್ತಳಿಕೆಯಲ್ಲಿದ್ದು, ಇದಕ್ಕೆ ಸರ್ಕಾರ ಸರ್ಕಾರಿ ನೌಕರರಿಗೆ ಮಾಡುತ್ತಿರುವ ಅನ್ಯಾಯದ ವಿಷಯವೂ ಸೇರಿಕೊಂಡಿದೆ.
ಈಗಾಗಲೇ ಬಿಜೆಪಿ ನಾಯಕ, ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ, "ರಾಜ್ಯ ಸರ್ಕಾರಿ ನೌಕರರು ತಮ್ಮ ನ್ಯಾಯೋಚಿತ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಕುರಿತಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು" ಎಂದು ಹೇಳಿದ್ದಾರೆ.
ಗ್ಯಾರಂಟಿಯಿಂದ ಖಜಾನೆ ಖಾಲಿ: ಈಗಾಗಲೇ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸುತ್ತಿವೆ. ಈಗ ಇದರಿಂದಾಗಿ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಲಿವೆ. ಈ ಮೂಲಕ ಪ್ರತಿಪಕ್ಷ ಸರ್ಕಾರಿ ನೌಕರರ ಜೊತೆ ನಿಲ್ಲಲಿದೆ.
ಸರ್ಕಾರ ಕಾಲ ಕಾಲಕ್ಕೆ ಸರ್ಕಾರಿ ನೌಕರರಿಗೆ ನೀಡುವ ವೇತನ, ಭತ್ಯೆಗಳನ್ನು ಪರಿಷ್ಕರಿಸಬೇಕು. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ನೌಕರರ ಪಾತ್ರ ಮಹತ್ವದ್ದಾಗಿದೆ ಎಂದು ಪ್ರತಿಪಕ್ಷದ ನಾಯಕರುಗಳು ಸರ್ಕಾರಿ ನೌಕರರ ಪರವಾಗಿ ಧ್ವನಿ ಎತ್ತಿದ್ದಾರೆ.
ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ವರದಿ ಸ್ವೀಕರಿಸಿದ್ದಾರೆ. ಆದರೆ ಅದನ್ನು ಇನ್ನೂ ಜಾರಿಗೊಳಿಸಿಲ್ಲ. ಸಚಿವ ಸಂಪುಟ ಸಭೆಯಲ್ಲಿ ವರದಿ ಜಾರಿ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆಗಳನ್ನು ನಡೆಸುವ ನಿರೀಕ್ಷೆ ಇದೆ.
ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಜುಲೈ ಅಂತ್ಯ ಅಥವ ಆಗಸ್ಟ್ ತಿಂಗಳಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರದ ಕರೆ ನೀಡಿದ್ದಾರೆ. ಒಂದು ವೇಳೆ ಸರ್ಕಾರಿ ನೌಕರರು ಮುಷ್ಕರ ಆರಂಭ ಮಾಡಿದರೆ ಸರ್ಕಾರ ಮುಜುಗರಕ್ಕೆ ಒಳಗಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ವರದಿಯನ್ನು ಹಣಕಾಸು ಇಲಾಖೆಗೆ ಸಲ್ಲಿಕೆ ಮಾಡಿದ್ದರು. ವರದಿ ಶಿಫಾರಸುಗಳನ್ನು ಹೇಗೆ ಜಾರಿಗೊಳಿಸಬಹುದು? ಎಂದು ಅಧಿಕಾರಿಗಳು ಸಿದ್ದರಾಮಯ್ಯಗೆ ವರದಿ ನೀಡಿದ್ದಾರೆ.
ಜುಲೈ 15ರಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಈ ವರದಿಯನ್ನು ಸಿದ್ದರಾಮಯ್ಯ ಸಚಿವರಿಗೆ ವಿವರಿಸಿ, ವರದಿ ಜಾರಿಗೆ ಸಚಿವರ ಅನುಮೋದನೆ ಪಡೆಯಲಿದ್ದಾರೆ. ಕಳೆದ ಎರಡು ಸಚಿವ ಸಂಪುಟ ಸಭೆಯಲ್ಲಿ ವರದಿ ಕುರಿತು ಸಚಿವರ ಮೌಖಿಕ ಅಭಿಪ್ರಾಯವನ್ನು ಸಿದ್ದರಾಮಯ್ಯ ಸಂಗ್ರಹ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಿ ಸರ್ಕಾರಕ್ಕೆ ಆಗುವ ಮುಜುಗರ ತಪ್ಪಿಸಿಕೊಳ್ಳಲು ಆಗಸ್ಟ್ನಲ್ಲಿ 7ನೇ ವೇತನ ಆಯೋಗದ ವರದಿ ಜಾರಿಗೊಳಿಸಲಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಆದರೆ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮೊದಲು ತೀರ್ಮಾನ ಕೈಗೊಳ್ಳಬೇಕಿದೆ.












Click it and Unblock the Notifications