Government Employees: ಆ್ಯಕ್ಸಿಡೆಂಟಲ್ & ಟರ್ಮ್ ಇನ್ಸೂರೆನ್ಸ್ ಯೋಜನೆ ನೋಂದಣಿ ಬಗ್ಗೆ ಸರ್ಕಾರ ಆದೇಶ
ಕೊಪ್ಪಳ ಏಪ್ರಿಲ್ 04 : ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ತಮ್ಮ ಸ್ಯಾಲರಿ ಅಕೌಂಟ್ ಅನ್ನು ಸ್ಯಾಲರಿ ಪ್ಯಾಕೇಜ್ ಅಕೌಂಟ್ ಆಗಿ ಪರಿವರ್ತಿಸಬೇಕು ಹಾಗೂ ಆ್ಯಕ್ಸಿಡೆಂಟಲ್ ಮತ್ತು ಟರ್ಮ್ ಇನ್ಸೂರೆನ್ಸ್ ಯೋಜನೆಗಳ ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಕೆಲ ಅಂಶಗಳಲ್ಲಿ ಆದೇಶಿಸಲಾಗಿದ್ದು, ವಿವಿಧ ಬ್ಯಾಂಕುಗಳು ಒದಗಿಸುವ "ಸಂಬಳ ಪ್ಯಾಕೇಜ್ಗಳ" ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೆ (ಸರ್ಕಾರಿ, ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಈ ಆದೇಶದಲ್ಲಿ ಕಡ್ಡಾಯಗೊಳಿಸಿದೆ.

ಅಧಿಕಾರಿ ಮತ್ತು ನೌಕರರ ಸಾಮಾಜಿಕ ಭದ್ರತೆ ಹಿತದೃಷ್ಠಿಯಿಂದ ಬ್ಯಾಂಕ್ಗಳು, ಅಂಚೆ ಕಚೇರಿಗಳು ನೀಡುವ ಪಿ.ಎಂ.ಜೆ.ಜೆ.ಬಿ.ವೈ ಮತ್ತು ಪಿ.ಎಂ.ಎಸ್.ಬಿ.ವೈ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿ, ನೌಕರರನ್ನು ಸಂಬಂಧಪಟ್ಟ ಇಲಾಖೆ ಪ್ರೋತ್ಸಾಹಿಸಬೇಕು. ಬ್ಯಾಂಕ್ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿ, ನೌಕರರನ್ನು ಸಂಬಂಧಪಟ್ಟ ಇಲಾಖೆ ಪ್ರೋತ್ಸಾಹಿಸಬೇಕು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಸರ್ಕಾರದ ಆದೇಶದನ್ವಯ ಜಿಲ್ಲಾ ಸಂಸ್ಥೆಗಳು ಮತ್ತು ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ತಮ್ಮ ಸ್ಯಾಲರಿ ಅಕೌಂಟ್ (Salary Account) ಅನ್ನು ಸ್ಯಾಲರಿ ಪ್ಯಾಕೇಜ್ ಅಕೌಂಟ್ (Salary Package Account) ಗೆ ಪರಿವರ್ತಿಸಲು ಮತ್ತು ತಮ್ಮ ಸಂಬಳ ಖಾತೆಯ ಬ್ಯಾಂಕ್ಗಳ ಮೂಲಕ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುವ ಆ್ಯಕ್ಸಿಡೆಂಟಲ್ (Accidental) ಮತ್ತು ಟರ್ಮ್ ಇನ್ಸೂರೆನ್ಸ್ (Term Insurance) ಯೋಜನೆಯಡಿ ನೊಂದಾಯಿಸಲು ಪ್ರೇರೇಪಿಸಲು ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ನಿರ್ದೇಶಿಸಿರುತ್ತಾರೆ.
ಆದ್ದರಿಂದ ಎಲ್ಲಾ ಇಲಾಖೆಗಳ ಮುಖ್ಯಸ್ಥರು ತಮ್ಮ ಕಚೇರಿ ಹಾಗೂ ತಮ್ಮ ಅಧೀನ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಸ್ಯಾಲರಿ ಅಕೌಂಟ್ ಅನ್ನು ಸ್ಯಾಲರಿ ಪ್ಯಾಕೇಜ್ ಅಕೌಂಟ್ ಗೆ ಪರಿವರ್ತಿಸಲು ಕ್ರಮಕೈಗೊಳ್ಳಲು ಮತ್ತು ಸಂಬಳ ಖಾತೆಯ ಬ್ಯಾಂಕ್ಗಳ ಮೂಲಕ ಸರ್ಕಾರದ ಆದೇಶದಲ್ಲಿ ತಿಳಿಸಿರುವ ಹಾಗೂ ಆ್ಯಕ್ಸಿಡೆಂಟಲ್ ಮತ್ತು ಟರ್ಮ್ ಇನ್ಸೂರೆನ್ಸ್ ಯೋಜನೆಯಡಿ ನೋಂದಾಯಿಸಿಕೊಳ್ಳಲು ಪ್ರೇರೇಪಿಸಬೇಕು. ಈ ವಿಷಯವನ್ನು ಅತ್ಯಂತ ಜರೂರು ಎಂದು ಪರಿಗಣಿಸಿ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ
ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರು ಸಲುವಾಗಿ ಕೊಪ್ಪಳ ಜಿಲ್ಲಾಡಳಿತವು ಎಲ್ಲಾ ರೀತಿಯಿಂದ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ ಪಂಚಾಯತಿಗಳಿದ್ದು, 722 ಗ್ರಾಮಗಳಿರುತ್ತವೆ. ಈ ಗ್ರಾಮಗಳಲ್ಲಿ 430 ಗ್ರಾಮಗಳಿಗೆ ಡಿಬಿಓಟಿ, ಎಂವಿಎಸ್ ಯೋಜನೆ ಮುಖಾಂತರ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ ಗ್ರಾಮೀಣ ಮಟ್ಟದಲ್ಲಿ ಅತೀಯಾಗಿ ಕುಡಿಯುವ ನೀರಿನ ಸಮಸ್ಯೆಯಾದರೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ. ಜಿಲ್ಲೆಯ ಏಳು ತಾಲೂಕಿನ ತಹಶೀಲ್ದಾರರ ಪಿ.ಡಿ ಖಾತೆಯಲ್ಲಿ ಸಹ ತುರ್ತು ಕುಡಿಯುವ ನೀರಿನ ಸರಬರಾಜು ಸಲುವಾಗಿ ಅನುದಾನ ಲಭ್ಯವಿರುತ್ತದೆ.
ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವದಿಲ್ಲ ಎಂದು ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ತಿಳಿಸಿರುತ್ತಾರೆ. ಹೀಗಾಗಿ ಜಿಲ್ಲಾಡಳಿತದಿಂದ ಕುಡಿಯುವ ನೀರು ಸಲುವಾಗಿ ಎಲ್ಲಾ ರೀತಿಯಿಂದ ಮುಂಜಾಗೃತ ಕ್ರಮ ಕೈಗೊಳ್ಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ರೂ.20 ಕೋಟಿ ಅನುದಾನ ಲಭ್ಯವಿರುತ್ತದೆ. ಮುಂದಿನ 90 ದಿನಗಳಿಗೆ ತುಂಗಭದ್ರಾ ಜಲಾಶಯ, ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ, ತುಂಗಭದ್ರಾ ನದಿ, ಕೃಷ್ಣಾ ಜಲಾಶಯ ಹಾಗೂ ಕೃಷ್ಣಾ ನದಿ ಕಾಲುವೆ ಮೂಲಕ ಜಲಾಶಯದಿಂದ ಅವಶ್ಯಕತೆ ಇರುವ ನೀರಿನ ನಿರ್ವಹಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ.
ಜಿಲ್ಲೆಯಲ್ಲಿ ಸದ್ಯಕ್ಕೆ ಮೇವಿನ ಸಮಸ್ಯೆ ಇರುವುದಿಲ್ಲ. ಜಿಲ್ಲೆಯಲ್ಲಿ 10,46,359 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, ಇನ್ನೂ 69 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿರುತ್ತದೆ. ಸದ್ಯಕ್ಕೆ ಮೇವಿನ ಸಮಸ್ಯೆ ಇರುವುದಿಲ್ಲ. ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ನಿಯಮಾನುಸಾರ ಪರೀಕ್ಷೆಗೊಳಪಡಿಸಿ ಶುದ್ಧತೆಯನ್ನು ಖಚಿತಪಡಿಸಿಕೊಂಡು ಅಗತ್ಯಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ. ಓ.ಹೆಚ್.ಟಿ., ಸಂಪು, ಮಿನಿ ವಾಟರ್ ಟ್ಯಾಂಕ್, ಜಿ.ಎಲ್.ಎಸ್.ಆರ್. ಹಾಗೂ ನೀರು ಸಂಗ್ರಾಹಕಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿ, ಶುದ್ಧಿಕರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ.
ಕೊಪ್ಪಳ ಜಿಲ್ಲೆಯ 7 ತಾಲೂಕುಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಮತ್ತು ಮೇವಿನ ಸಮಸ್ಯೆ ಉಧ್ಭವಿಸಿದರೆ ತಕ್ಷಣ ಸ್ಪಂದಿಸಲು ತಹಶೀಲ್ದಾರ ಮತ್ತು ಆಯಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಗ್ರಾಮ ಮಟ್ಟದ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ನಲ್ಲಿ ಸಮಿತಿಯನ್ನು ರಚನೆ ಮಾಡಿಕೊಳ್ಳಲಾಗಿದೆ ಹಾಗೂ ಸದ್ಯಕ್ಕೆ ಜಿಲ್ಲೆಯಲ್ಲಿ ಬರಗಾಲ ನಿರ್ವಹಣೆಗಾಗಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಅನುದಾನದ ಕೊರತೆ ಇರುವುದಿಲ್ಲ.
ಕೊಪ್ಪಳ ಜಿಲ್ಲಾ ವ್ಯಾಪ್ತಿಯ 7 ತಾಲ್ಲೂಕುಗಳಲ್ಲಿ ಗ್ರಾಮೀಣ ಜನವಸತಿ ಪ್ರದೆಶಗಳಲ್ಲಿ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಈಗಾಗಲೇ ಎಲ್ಲಾ ತಹಶೀಲ್ದಾರ ಕಾರ್ಯಾಲಯಗಳಲ್ಲಿ, ಎಲ್ಲಾ ತಾಲೂಕು ಪಂಚಾಯತಿಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ತೆರೆಯಲು ಸೂಚಿಸಲಾಗಿರುತ್ತದೆ. ಅದರಂತೆ ಜಿಲ್ಲಾ ಪಂಚಾಯತ ಮಟ್ಟದಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕುಡಿಯುವ ನೀರಿನ ಸಹಾಯವಾಣಿ ತೆರೆಯಲಾಗಿದ್ದು, ಜಿಲ್ಲಾ ಪಂಚಾಯತ ಸ.ಸಂ: 08539-221207 ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸ.ಸಂ: 7676732001 ಆಗಿರುತ್ತದೆ.
ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಮತ್ತು ಬುದುವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕಾ ಮಟ್ಟದ ಕಾರ್ಯಪಡೆ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿ ಶುಕ್ರವಾರ (ಜೂಮ್ ವಿ.ಸಿ ಮೂಲಕ) ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಪಶು ಸಖಿ, ಕೃಷಿ ಸಖಿ ಮತ್ತು ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಾಪ್ತಾಹಿಕ ಸಭೆಗಳನ್ನು ನಡೆಸಲಾಗುತ್ತಿದೆ ಮತ್ತು ಅದರ ನಡಾವಳಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.












Click it and Unblock the Notifications