Budget 2024: ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ಬೀದಿಗಿಳಿಯಲಿದೆ ಕರ್ನಾಟಕ ಕಾಂಗ್ರೆಸ್
ಬೆಂಗಳೂರು, ಫೆಬ್ರವರಿ. 04: ಈ ಬಾರಿಯ ಮಧ್ಯಂತರ ಬಜೆಟ್ನಲ್ಲಿ ರಾಜ್ಯಕ್ಕೆ ಸರಿಯಾಗಿ ಹಣ ಮಂಜೂರು ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ರೊಚ್ಚಿಗೆದ್ದಿದ್ದು, ಬೀದಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ನರೇಂದ್ರ ಮೋದಿ ಸರ್ಕಾರ ವಿರುದ್ಧ ಎಲ್ಲಾ ಕಾಂಗ್ರೆಸ್ ಶಾಸಕರು, ಎಂಎಲ್ಸಿಗಳು ಮತ್ತು ಸಂಸದರು ಸೇರಿದಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆಗೆ ಕಿಡಿ
ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ''ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ನಲ್ಲಿ ಕರ್ನಾಟಕವನ್ನು ಕಡೆಗಣಿಸಿ ಅನ್ಯಾಯ ಮಾಡಿದೆ. ನಾವು ಇದರ ವಿರುದ್ಧ ಪ್ರತಿಭಟಿಸಲು ನಿರ್ಧರಿಸಿದ್ದೇವೆ. ಎಲ್ಲಾ ಶಾಸಕರು, ಸಂಸದರು ಮತ್ತು ಎಂಎಲ್ಸಿಗಳು ಫೆಬ್ರವರಿ 6 ರಂದು ನವದೆಹಲಿಗೆ ಹೋಗುತ್ತೇವೆ. ಫೆಬ್ರವರಿ 7 ರಂದು ಅಲ್ಲಿ ಪ್ರತಿಭಟನೆ ನಡೆಸುತ್ತೇವೆ" ಎಂದು ಹೇಳಿದ್ದಾರೆ.
"ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕರ್ನಾಟಕವನ್ನು ಕೇಂದ್ರ ನಿರ್ಲಕ್ಷಿಸಿದೆ. ಕಳೆದ ಐದು ವರ್ಷಗಳಿಂದ ಕರ್ನಾಟಕಕ್ಕೆ ಇನ್ನೂ ನ್ಯಾಯಯುತ ಪಾಲು ಬಂದಿಲ್ಲ. ದೇಶದಲ್ಲಿ ಕರ್ನಾಟಕ ಎರಡನೇ ಅತಿ ಹೆಚ್ಚು ತೆರಿಗೆಯನ್ನು ಕಟ್ಟುವ ರಾಜ್ಯವಾಗಿದ್ದು, ನಮ್ಮ ರಾಜ್ಯಕ್ಕೆ ಪ್ರತಿ ಬಾರಿಯೂ ಹಿನ್ನಡೆಯಾಗುತ್ತಿರುವುದು ದುಃಖಕರ ವಿಷಯ" ಎಂದು ಕಿಡಿಕಾರಿದ್ದಾರೆ.

"ಕಳೆದ ಐದು ವರ್ಷಗಳಿಂದ ಬಿಜೆಪಿ ಸರ್ಕಾರ ಕರ್ನಾಟಕವನ್ನು ಕಡೆಗಣಿಸುತ್ತಿದೆ. ಇದು ಅನ್ಯಾಯ" ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಪ್ರತಿಭಟನೆಯ ನೇತೃತ್ವವನ್ನು ಸಿಎಂ ಸಿದ್ದರಾಮಯ್ಯ ವಹಿಸಲಿದ್ದು, ಈಗಾಗಲೇ ವಿರೋಧ ಪಕ್ಷದ ನಾಯಕರನ್ನು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.
ಡಿ.ಕೆ.ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ
ಸಂಸದ ಡಿಕೆ ಸುರೇಶ್ ಅವರ 'ಪ್ರತ್ಯೇಕ ರಾಷ್ಟ್ರ' ಹೇಳಿಕೆ ಕುರಿತು ಮಾತನಾಡಿರುವ ಸಹೋದರ ಡಿ.ಕೆ.ಶಿವಕುಮಾರ್ ಅವರು, 'ದೇಶ ಒಗ್ಗಟ್ಟಾಗಿದೆ, ಒಗ್ಗಟ್ಟಾಗಿರುತ್ತದೆ' ಎಂದು ಹೇಳಿದ್ದಾರೆ. ಬಜೆಟ್ ದಿನದಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿ, ''ಕೇಂದ್ರ ಸರ್ಕಾರ ಹಣ ಮಂಜೂರು ಮಾಡುವಾಗ ದಕ್ಷಿಣ ಭಾರತವನ್ನು ಕಡೆಗಣಿಸುತ್ತಿದೆ. ಅವರು ಹೆಚ್ಚಿನ ಹಣವನ್ನು ಉತ್ತರ ಭಾರತಕ್ಕೆ, ವಿಶೇಷವಾಗಿ ಹಿಂದಿಭಾಗಕ್ಕೆ ಮೀಸಲಿಡುತ್ತಾರೆ. ಇದು ಬದಲಾಗುವುದಿಲ್ಲ ಮತ್ತು ಇದು ಮುಂದುವರಿದರೆ, ಇದು ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ಹೆಚ್ಚಿಸುತ್ತದೆ" ಎಂದು ಹೇಳಿದ್ದರು.












Click it and Unblock the Notifications