ವಾಯುಭಾರ ಕುಸಿತ ಈ ವಾರ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ
ಬೆಂಗಳೂರು ಸೆಪ್ಟೆಂಬರ್ 23: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪ್ರಭಾವದಿಂದ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು , ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದ ವರೆಗೂ ಮಳೆಯಾಗಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸೋಮವಾರ ಬೆಳಗ್ಗೆಯೂ ಜಿಟಿಜಿಟಿ ಮಳೆ ಮುಂದುವರೆದಿದೆ.

ಸೆ.24ರವರೆಗೆ ರಾಜ್ಯದಲ್ಲಿ ಆರೆಂಜ್ ಅಲರ್ಟ್
ಸೆ.24ರ ಮಂಗಳವಾರ ಉತ್ತರ ಒಳನಾಡಿನ ಕಲಬುರಗಿ , ದಕ್ಷಿಣ ಒಳನಾಡಿನ ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 115 ಮಿ.ಮೀನಿಂದ 204 ಮಿ.ಮೀ ವರೆಗೆ ಮಳೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸೋಮವಾರ ಮೋಡಕವಿದ ವಾತಾವರಣ ಅಲ್ಲಲ್ಲಿ ಮಳೆ
ಸೋಮವಾರವೂ ಕೂಡ ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ, ಉತ್ತರ ಒಳನಾಡಿನ ವಿವಿಧ ಪ್ರದೇಶಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ರಾತ್ರಿಇಡೀ ಸುರಿದ ಮಳೆಗೆ ಟ್ರಾಫಿಕ್ ಜಾಮ್
ಭಾನುವಾರ ರಾತ್ರಿಯಿಂದ ಮಳೆ ಸುರಿಯುತ್ತಿದೆ. ಮಲ್ಲೇಶ್ವರಂ, ಮತ್ತಿಕೆರೆ, ಹೆಬ್ಬಾಳ, ಯಶವಂತಪುರ ರಾಜಾಜಿನಗರ, ವಿಜಯನಗರ, ಸ್ಯಾಟಲೈಟ್ ಹಾಗೂ ಜಾಲಹಳ್ಳಿ ಕ್ರಾಸ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಭಾನುವಾರವೂ ಬೆಳ್ಳಂಬೆಳಗ್ಗೆ ಮಳೆಯಾಗಿತ್ತು. ಇಂದು ಕೂಡ ಮುಂದುವರಿದಿದೆ. ಪರಿಣಾಮ ಬೆಳಗ್ಗೆ ಕೆಲಸಕ್ಕೆ ತೆರಳುವವರಿಗೆ ಕಿರಿಕಿರಿ ಉಂಟುಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಮಳೆಗೆ ಕಾರಣ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ನಾಳೆಯೂ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಮುನ್ಸೂಚನೆ ಪ್ರಕಾರ ಸೆ.24ರವರೆಗೂ ಇದೇ ರೀತಿ ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.












Click it and Unblock the Notifications