ಕುತೂಹಲ ಮೂಡಿಸಿದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ-ಸಿ.ಎಂ. ಇಬ್ರಾಹಿಂ ಭೇಟಿ!
ಬೆಂಗಳೂರು, ಫೆ. 19: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಬ್ರಾಹಿಂ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಬೆಂಗಳೂರಿನ ಬೆನ್ಸನ್ಟೌನ್ನಲ್ಲಿರುವ ಇಬ್ರಾಹಿಂ ಅವರ ಮನೆಗೆ ಬೇಟಿ ನೀಡಿದ್ದ ರಣದೀಪ್ ಸುರ್ಜೆವಾಲಾ ಅವರು, ಪಕ್ಷ ತೊರೆಯದಂತೆ ಇಬ್ರಾಹಿಂ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುವುದಿಲ್ಲ. ಹೀಗಾಗಿ ಯಾವುದೇ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷದಿಂದ ಹೊರಗೆ ಹೋಗುವ ನಿರ್ಧಾರ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಇಬ್ರಾಹಿಂ ಅವರೊಂದಿಗೆ ಭೋಜನ ಸವಿದು ಅವರ ಮನವೊಲಿಸುವ ಪ್ರಯತ್ನವನ್ನು ಮಾಡಿದ್ದಾರೆ.
ಭೇಟಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಣದೀಪ್ ಸುರ್ಜೆವಾಲಾ ಅವರು, ನಮ್ಮ ಪಕ್ಷದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಅವರು ಊಟಕ್ಕೆ ಕರೆದಿದ್ದರು, ಅದಕ್ಕೆ ಬಂದಿದ್ದೆ. ನಾನು ಶುದ್ಧ ಶಾಖಾಹಾರಿ, ಹೀಗಾಗಿ ಒಳ್ಳೆಯ ಶಾಖಾಹಾರಿ ಊಟ ಮಾಡಿಸಿದ್ದರು. ಯಾವುದೇ ರಾಜಕೀಯ ಚರ್ಚೆಯನ್ನು ನಾವು ಮಾಡಿಲ್ಲ. ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಬಿಡುವುದಿಲ್ಲ. ನಮ್ಮ ತಂದೆಯೊಂದಿಗೆ ಅತ್ಯುತ್ತಮ ಬಾಂಧವ್ಯ ಹೊಂದಿದ್ದರು. ಹೀಗಾಗಿ ಇಬ್ರಾಹಿಂ ಚಾಚಾರನ್ನು ಭೇಟಿ ಮಾಡಿದ್ದೇನೆ ಎಂದು ಸುರ್ಜೆವಾಲಾ ಹೇಳಿದ್ದಾರೆ.
ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ನಿವಾಸಕ್ಕೆ ಭೇಟಿ ಕೊಟ್ಟ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರೊಂದಿಗೆ ಮಧ್ಯಾಹ್ನದ ಭೋಜನ ಸವಿದಿದ್ದಾರೆ. ಇಬ್ರಾಹಿಂ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಭೇಟಿ ಕುತೂಹಲ ಮೂಡಿಸಿದೆ. ಬೇಟಿ ಬಳಿಕ ಸುರ್ಜೆವಾಲಾ ಏನು ಹೇಳಿದ್ದಾರೆ? ಇಲ್ಲಿದೆ! pic.twitter.com/h0dbTBCCOS
— oneindiakannada (@OneindiaKannada) February 18, 2021
Recommended Video
ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿಗೆ ಮುಸ್ಲಿಂ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಇಬ್ರಾಹಿಂ ಬಹಿರಂಗವಾಗಿಯೇ ಆರೋಪಿಸಿದ್ದರು. ಜೊತೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿದ್ದರು. ಜೆಡಿಎಸ್ ಸೇರುವ ಬಗ್ಗೆ ಇಬ್ರಾಹಿಂ ಅವರು ಚರ್ಚೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳಿಂದ ತಿಳಿದು ಬಂದಿತ್ತು.