ಬಿಎಸ್ವೈಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ ಬಿಎಲ್ ಸಂತೋಷ್
ಬೆಂಗಳೂರು, ಆಗಸ್ಟ್ 31: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಿಜೆಪಿ ಶಾಸಕರೆಲ್ಲ ಬಿಎಸ್ ಯಡಿಯೂರಪ್ಪ ಅವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ' ಎಂದು ಹೇಳಿದೆ.

'ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು. ಈಗ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ' ಎಂದು ತಿಳಿಸಿದೆ.
ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
'ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ. ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು' ಎಂದು ಕಾಂಗ್ರೆಸ್ ಟೀಕಿಸಿದೆ.

ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ ಎಂದು ಟ್ವೀಟ್ ಮಾಡಿದೆ.
ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು. ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ. ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿಎಲ್ ಸಂತೋಷ್ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಂಡಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.












Click it and Unblock the Notifications