ವಾಯುಭಾರ ಕುಸಿತ,ಫೆ. 23ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು,ಫೆಬ್ರವರಿ 21:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯಾದ್ಯಂತ ಫೆಬ್ರವರಿ 23ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ಹಲವೆಡೆ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಿದೆ.
ಮೆಜೆಸ್ಟಿಕ್, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ ಹಾಗೂ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.
ಸಂಜೆಯ ನಂತರ ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಹಲವೆಡೆ ಜಿಟಿ ಜಿಟಿ ಮಳೆ ಆರಂಭವಾಗಿ ಕೆಲವು ನಿಮಿಷಗಳಲ್ಲಿ ಜೋರಾಗಿ ಸುರಿಯಿತು. ರಸ್ತೆಗಳಲ್ಲಿ ನೀರು ಉಕ್ಕಿ ಹರಿಯಿತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.
ಪ್ರಮುಖ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು ವಾಹನಗಳು ನೀರಿನಲ್ಲೇ ಚಲಿಸುತ್ತಿದ್ದವು. ಏಕಾಏಕಿ ಮಳೆ ಸುರಿದಿದ್ದರಿಂದ ಕೆಲಸ ಮುಗಿಸಿ ಮನೆಗೆ ಹೊರಟಿದ್ದವರು ಪರದಾಡುವಂತಾಯಿತು.
ಕೊಡಗು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಶನಿವಾರಸಂತೆ ಸುತ್ತಮುತ್ತ ಆಲಿಕಲ್ಲು ಮಳೆ ಸುರಿದಿದ್ದು, ಕಾಫಿ, ಹಸಿ ಮೆಣಸಿನ ಫಲಸು ಆಲಿಕಲ್ಲು ಹೊಡೆತಕ್ಕೆ ಸಂಪೂರ್ಣವಾಗಿ ನಾಶವಾಗಿದೆ.
ಕರ್ನಾಟಕ ಮಾತ್ರವಲ್ಲದೆ ತೆಲಂಗಾಣ, ತಮಿಳುನಾಡು, ಕೇರಳ, ಛತ್ತೀಸ್ಗಢದಲ್ಲೂ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ತುಮಕೂರು, ಮಲೆನಾಡು, ಕೊಡಗಿನಲ್ಲಿ ನಾಳೆಯವರೆಗೆ (ಫೆ. 23) ಮಳೆಯಾಗುವ ಸಾಧ್ಯತೆಯಿದೆ

ಕೇರಳದಿಂದ ಮಹಾರಾಷ್ಟ್ರದವರೆಗೆ ಮೋಡಕವಿದ ವಾತಾವರಣ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕೇರಳದಿಂದ ಮಹಾರಾಷ್ಟ್ರದ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಶನಿವಾರ ತುಮಕೂರು, ಉತ್ತರ ಕನ್ನಡ,ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಭದ್ರಾವತಿ, ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಿದೆ.

ಫೆಬ್ರವರಿ 21ರಂದು ಭಾರಿ ಮಳೆಯ ಮುನ್ಸೂಚನೆ
ಭಾನುವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ಸೃಷ್ಟಿಯಾಗಿದ್ದು, ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹಳಿಯಾಳ, ಶಿರಸಿ ಮಹಾರಾಷ್ಟ್ರದ ಗಡಿಭಾಗದ ರಾಜ್ಯದ ಜಿಲ್ಲೆಗಳಾದ, ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಾಪುರ ಸೇರಿದಂತೆ ರಾಜ್ಯಾದ್ಯಂತ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಸಂಭವ ಇದೇ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ
ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ,ಕಲಬುರಗಿ,ಕೊಪ್ಪಳ,ರಾಯಚೂರು,ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ,ಕೊಡಗು,ಹಾಸನ, ಕೋಲಾರ, ಮಂಡ್ಯ,ರಾಮನಗರ,ಮೈಸೂರು,ಶಿವಮೊಗ್ಗ,ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿಮಾಣವಾಗಿದೆ. ಸಂಜೆ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ದಾವರಣಗೆರೆ ಹಾಗೂ ಬೀದರ್ನಲ್ಲಿ ಅತಿ ಕನಿಷ್ಠ ಉಷ್ಣಾಂಶ ಅಂದರೆ 12.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.












Click it and Unblock the Notifications