ಚಿತ್ರಗಳು : ಆಮ್ನೆಸ್ಟಿ ಇಂಟರ್ ನ್ಯಾಷನಲ್ ವಿರುದ್ಧ ಬಿಜೆಪಿ ಹೋರಾಟ
ಬೆಂಗಳೂರು, ಆಗಸ್ಟ್ 24 : ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯ ವಿರುದ್ಧ ಕರ್ನಾಟಕ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದರು.
ಬೆಂಗಳೂರಿನ ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ಆಗಸ್ಟ್ 13ರಂದು 'ಬ್ರೋಕನ್ ಫ್ಯಾಮಿಲೀಸ್' ಹೆಸರಿನಲ್ಲಿ ಕಾರ್ಯಾಗಾರ ಆಯೋಜಿಸಿತ್ತು.[ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]
ಈ ಕಾರ್ಯಗಾರದಲ್ಲಿ ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬುದು ಆರೋಪವಾಗಿದೆ. ಆದ್ದರಿಂದ, ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಬಿಜೆಪಿ ಹೋರಾಟ ನಡೆಸುತ್ತಿವೆ.[ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್]
ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಎಬಿವಿಪಿ ನಡೆಸಿದ 48 ಗಂಟೆಗಳ ಪ್ರತಿಭಟನೆಗೆ ಬಿಜೆಪಿ ಬೆಂಬಲ ಕೊಟ್ಟಿತ್ತು. ಇಂದು ಪಕ್ಷದ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಆಮ್ನೆಸ್ಟಿ ಇಂಟರ್ ನ್ಯಾಷನಲ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು...['ಎಬಿವಿಪಿ ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡವಿದೆ']
ದೇಶದ್ರೋಹಿಗಳನ್ನು ಬಂಧಿಸಿ
ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆಗಳನ್ನು ಕೂಗಲಾಗಿದೆ. ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ, ಅವರನ್ನು ಇನ್ನೂ ಬಂಧಿಸಿಲ್ಲ. ಆರೋಪಿಗಳನ್ನು ತಕ್ಷಣ ಬಂಧಿಸಿ ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.
ತನಿಖೆಯನ್ನು ಎನ್ಐಗೆ ವಹಿಸಿ
ಆಗಸ್ಟ್ 13ರಂದು 'ಬ್ರೋಕನ್ ಫ್ಯಾಮಿಲೀಸ್' ಹೆಸರಿನಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ದೇಶ ವಿರೋಧಿ ಘೋಷಣೆ ಕೂಗಲಾಗಿದೆ. ಬೆಂಗಳೂರಿನ ಜೆ.ಸಿ.ನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಒತ್ತಾಯಿಸಿತು.
ಪೊಲೀಸರನ್ನು ಅಮಾನತು ಮಾಡಿ
ಆಮ್ನೆಸ್ಟಿ ಇಂಟರ್ ನ್ಯಾಷನಲ್ ವಿರುದ್ಧ ಹೋರಾಟ ನಡೆಸಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ. ಲಾಠಿ ಪ್ರಹಾರ ನಡೆಸಿರುವ ಪೋಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.
20 ದೇಶಗಳಲ್ಲಿ ನಿಷೇಧಿಸಿದ್ದಾರೆ
ಪ್ರತಿಭಟನೆ ಉದ್ದೇಶಿಸಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, '20 ದೇಶಗಳಲ್ಲಿ ಆಮ್ನೆಸ್ಟಿ ಸಂಸ್ಥೆಯನ್ನು ನಿಷೇಧಿಸಿದ್ದಾರೆ. ಕರ್ನಾಟಕದಲ್ಲಿಯೂ ಸಂಘಟನೆ ನಿಷೇಧಿಸಿ' ಎಂದು ಒತ್ತಾಯಿಸಿದರು.