ಬೆಂಗಳೂರು ಬಣಬಣ; ಹಾನಗಲ್, ಸಿಂದಗಿಯಲ್ಲಿ ರಾಜಕೀಯ ನಾಯಕರ ಮಿಂಚಿನ ಸಂಚಾರ!
ಬೆಂಗಳೂರು, ಅ. 23: ಉಪ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕಕ್ಕೆ ಅಧಿಕಾರ ವಿಕೇಂದ್ರಿಕರಣವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರುದಂತೆ ಘಟಾನುಘಟಿ ನಾಯಕರೆಲ್ಲರೂ ಬೆಂಗಳೂರು ತೊರೆದು ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದಾರೆ.
ಜೊತೆಗೆ ಅನೇಕ ಮಂತ್ರಿಗಳು ಕೂಡ ಬೆಂಗಳೂರಿನಿಂದ ಹಾವೇರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿದ್ದಾರೆ. ಹೀಗಾಗಿ ವಿಧಾನಸೌಧ ಭಣಗುಡುತ್ತಿದೆ. ಹಾನಗಲ್ ಹಾಗೂ ಸಿಂದಗಿ ತಾಲೂಕುಗಳಲ್ಲಿ ರಾಜಕೀಯ ನಾಯಕರ ಪ್ರಚಾರದ ಭರಾಟೆ ತಾರಕಕ್ಕೇರಿದೆ. ಅದರಲ್ಲಿಯೂ ಉಪ ಸಮರದ ಅಖಾಡಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಳಿಯುತ್ತಿದ್ದಂತೆಯೆ ವಿರೋಧ ಪಕ್ಷಗಳ ನಾಯಕರೂ ಕೂಡ ಬೆಂಗಳೂರು ತೊರೆದು ಹುಬ್ಬಳ್ಳಿ ಹಾಗೂ ವಿಜಯಪುರದಲ್ಲಿ ವಾಸ್ತವ್ಯ ಹೂಡಿದ್ದಾರೆ.
Explained: ಹಾನಗಲ್ ಉಪ ಚುನಾವಣೆಗೆ ಬಿಜೆಪಿ ಘೋಷಿಸಿದ ಪ್ರಣಾಳಿಕೆಯಲ್ಲಿ ಏನಿದೆ?
ಯಾವ ನಾಯಕರು? ಎಲ್ಲಿ ವಾಸ್ತವ್ಯ ಮಾಡಿದ್ದಾರೆ? ಜೊತೆಗೆ ಚುನಾವಣಾ ಪ್ರಚಾರದ ಭರಾಟೆ ಹೇಗಿದೆ ಎಂಬುದರ ಸಂಪೂರ್ಣ ವಿವರ ಮುಂದಿದೆ.
ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಾಸ್ತವ್ಯ!
ಕಳೆದ ಮೂರು ದಿನಗಳಿಂದ ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಧಿಕಾರ ಹೋದ ಬಳಿಕ ತಮ್ಮ ಖದರ್ ಮತ್ತೆ ಪಡೆಯಲು ಪ್ರಯತ್ನಿಸುತ್ತಿರುವ ಯಡಿಯೂರಪ್ಪ ಅವರು, ಸಿಂದಗಿಯಲ್ಲಿ ಎರಡು ದಿನಗಳ ಕಾಲ ಭರ್ಜರಿ ಪ್ರಚಾರದ ಬಳಿಕ ನಿನ್ನೆ (ಶುಕ್ರವಾರ)ಯಿಂದ ಹಾನಗಲ್ನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಹಾನಗಲ್ಗೆ ಶಿಕಾರಿಪುರ ಹತ್ತಿರವಾಗುವುದರಿಂದ ಶಿಕಾರಪುರದಲ್ಲಿ ವಾಸ್ತವ್ಯ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಉಳಿದುಕೊಂಡಿರುವ ಸಿಎಂ ಬೊಮ್ಮಾಯಿ!
ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ್ದಾರೆ. ಕಳೆದ ಒಂದು ವಾರದಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವ ಅವರು, ಸಿಂದಗಿ ಬಳಿಕ ಹಾನಗಲ್ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಒಂದರ್ಥದಲ್ಲಿ ಸಿಎಂ ಬೊಮ್ಮಾಯಿ ಅವರಿಗೆ ಸಿಂದಗಿ ಕ್ಷೇತ್ರಕ್ಕಿಂತ ಹಾನಗಲ್ ಉಪ ಚುನಾವಣೆ ಗೆಲ್ಲುವುದು ಪ್ರತಿಷ್ಠೆಯಾಗಿದೆ. ಸಿಎಂ ಪ್ರತಿನಿಧಿಸುವ ಶಿಗ್ಗಾವಿ-ಸವಣೂರು ಕ್ಷೇತ್ರಕ್ಕೆ ಹಾನಗಲ್ ವಿಧಾನಸಭಾ ಕ್ಷೇತ್ರ ಗಡಿ ಹಂಚಿಕೊಂಡಿದೆ. ಜೊತೆಗೆ ಸಿ.ಎಂ. ಉದಾಸಿ ಅವರು ಇರುವವರೆಗೆ ಬಿಜೆಪಿ ಭದ್ರಕೋಟೆಯಾಗಿದ್ದ ಹಾನಗಲ್ ಕ್ಷೇತ್ರದಲ್ಲಿ ಗೆಲವು ಸಾಧಿಸಬೇಕಾದ ಅನಿವಾರ್ಯತೆ ಅವರಿಗಿದೆ. ಹೀಗಾಗಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿರುವ ಸಿಎಂ ಅಲ್ಲಿಂದ ಹಾನಗಲ್ಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.
ಕುಬಟೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಸ್ತವ್ಯ!
ಇನ್ನು ಕಾಂಗ್ರೆಸ್ ನಾಯಕರು ಕೂಡ ಹುಬ್ಬಳ್ಳಿ ಹಾಗೂ ವಿಜಯಪುರದಲ್ಲಿ ವಾಸ್ತವ್ಯ ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳಿಂದ ಹಾನಗಲ್ ಕ್ಷೇತ್ರದಲ್ಲಿ ತಮ್ಮ ಆಪ್ತ, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರವಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ್ದ ಸಿದ್ದರಾಮಯ್ಯ ಅವರು, ನಿನ್ನೆ ಶುಕ್ರವಾರ ಸೊರಬ ತಾಲೂಕು ಕುಬಟೂರಿನ ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಹಿರಂಗ ಪ್ರಚಾರ ಅಂತ್ಯವಾದ ಬಳಿಕವೇ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ ಸರ್ಕಾರದ ಜೊತೆಗೆ ವಿರೋಧ ಪಕ್ಷವೂ ಉಪ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಂತಾಗಿದೆ.
ವಿಜಯಪುರದಲ್ಲಿದ್ದಾರೆ ಮಾಜಿ ಪ್ರಧಾನಿ ದೇವೇಗೌಡರು!
ಇನ್ನು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೂ ಕಳೆದ ಒಂದು ವಾರದಿಂದ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿದ್ದಾರೆ. ಜೆಡಿಎಸ್ ನಾಯಕರು ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರ ಪ್ರಚಾರಕ್ಕೆ ತಮ್ಮದೇ ಆದ ರೀತಿಯಲ್ಲಿ ಎದಿರೇಟು ಕೊಡುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪಡೆಯುವ ಮತಗಳು ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ಆತಂಕವನ್ನುಂಟು ಮಾಡುತ್ತಿವೆ ಎಂದರೂ ತಪ್ಪಾಗಲಿಕ್ಕಿಲ್ಲ. ಜೊತೆಗೆ ಸಿಂದಗಿಯಲ್ಲಿ ತ್ರೀಕೋನ ಸ್ಪರ್ಧೆ ಎದುರಾಗಿದ್ದರೆ, ಹಾನಗಲ್ನಲ್ಲಿ ಜೆಡಿಎಸ್ ಅಭ್ಯರ್ಥಿ ಪಡೆಯುವ ಮತಗಳು ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿನ ಮೇಲೆ ಪರಿಣಾಮ ಬೀರುವುದು ಖಚಿತ ಎಂಬಂತಾಗಿದೆ. ಹೀಗಾಗಿ ಜೆಡಿಎಸ್ ನಾಯಕರು ಹುಬ್ಬಳ್ಳಿ ಹಾಗೂ ವಿಜಯಪುರದಲ್ಲಿ ವಾಸ್ತವ್ಯ ಮಾಡಿ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿರುವ ಡಿಕೆಶಿ!
ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೂ ಕಳೆದೊಂದು ವಾರದಿಂದ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿರುವ ಡಿಕೆಶಿ ಅವರು ಬಹಿರಂಗ ಪ್ರಚಾರ ಅಂತ್ಯವಾದ ಬಳಿಕವೇ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂಬ ಮಾಹಿತಿಯಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಪ್ರಬಲರಾಗಿರುವುದರಿಂದ ಹಾನಗಲ್ ಕ್ಷೇತ್ರದ ಕಡೆಗೆ ಡಿಕೆಶಿ ಹೆಚ್ಚಿನ ಗಮನವನ್ನು ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ನಾಯಕರಿಗೆ ಆತಂಕ ಶುರುವಾಗಿದೆ ಎನ್ನಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರು ಸದ್ಯ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ್ದು ಅಲ್ಲಿಂದ ಹಾಗನಲ್ ಕ್ಷೇತ್ರಕ್ಕೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.
ಮಂತ್ರಿಗಳಿಲ್ಲದೆ ಬಣಗುಡುತ್ತಿದೆ ವಿಧಾನಸೌಧ!
ಜೊತೆಗೆ ಸಿಎಂ ಬೊಮ್ಮಾಯಿ ಮಂತ್ರಿಮಂಡಲದ ಸದಸ್ಯರೂ ಕೂಡ ಉಭಯ ಕ್ಷೇತ್ರಗಳಲ್ಲಿ ಸಂಚಾರ ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಹಾಗೂ ಹುಬ್ಬಳ್ಳಿ ಹಾಗೂ ವಿಜಯಪುರಗಳಲ್ಲಿ ವಾಸ್ತವ್ಯ ಮಾಡಿದ್ದಾರೆ. ಹೀಗಾಗಿ ವಿಧಾನಸೌಧದಲ್ಲಿ ಸಚಿವರ ಕೊಠಡಿಗಳಲ್ಲಿ ಕಚೇರಿ ಸಿಬ್ಬಂದಿ ಮಾತ್ರ ಇದ್ದಾರೆ. ಒಟ್ಟಾರೆ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಾಯಕರು ಉತ್ತರ ಕರ್ನಾಟಕದಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಉಳಿಯಲಿದ್ದಾರೆ ಎಂಬ ಮಾಹಿತಿಯಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಕೊರೊನಾ ಕಾರಣ ಹೇಳುವ ಸರ್ಕಾರ ಉಪ ಚುನಾವಣೆಗೆ ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿರುವುದು ಜನರ ಕೋಪಕ್ಕೆ ಕಾರಣವಾಗಿದೆ.
{document1}