ಜ.29 ರಂದು 300 ಹಾಸಿಗೆಗಳ ಹೈಟೆಕ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ
ಬೆಂಗಳೂರು, ಜನವರಿ 10: ಜನವರಿ 29 ರಂದು ದಾಸರಹಳ್ಳಿ ವಾರ್ಡ್ ವ್ಯಾಪ್ತಿಯ ಎಂ.ಸಿ.ಬಡಾವಣೆಯಲ್ಲಿ ನಿರ್ಮಾಣವಾಗಿರುವ 300 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಈ ಕುರಿತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯ ನೇತೃತ್ವ ವಹಿಸಿದ್ದ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ.ಸೋಮಣ್ಣ ರವರು, ಮಾಗಡಿ ರಸ್ತೆ ಪೊಲೀಸ್ ಠಾಣೆಯ ನೂತನ ಕಟ್ಟಡ, ಮಾಗಡಿ ರಸ್ತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ, ಪಶ್ಚಿಮ ಕಾರ್ಡ್ ರಸ್ತೆಯ ಮೇಲ್ಸೇತುವೆ, ಡಾ ಬಿ.ಆರ್.ಅಂಬೇಡ್ಕರ್ ನವೀಕೃತ ಕ್ರೀಡಾಂಗಣ ಹಾಗೂ ಅಗ್ರಹಾರ ದಾಸರಹಳ್ಳಿ ವಾರ್ಡ್ ವ್ಯಾಪ್ತಿಯ ಎಂ.ಸಿ.ಬಡಾವಣೆಯಲ್ಲಿ ನಿರ್ಮಾಣವಾಗಿರುವ 300 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಜನಸೇವೆಯ ಬಗ್ಗೆ ಕಾಳಜಿ ಇರಲಿ ಎಂದು ಅಧಿಕಾರಿಗಳಿಗೆ ವಿ.ಸೋಮಣ್ಣ ಸಲಹೆ
ಅಧಿಕಾರಿಗಳನ್ನು ಉದ್ದೇಶಿಸಿ ವಿ ಸೋಮಣ್ಣ ಮಾತನಾಡಿ, ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಅತ್ಯಾಧುನಿಕ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿದ್ದೆವು. ಹೈಟೆಕ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜಾಗಿದ್ದು, ಜನವರಿ 29 ರಂದು ಲೋಕಾರ್ಪಣೆಗೊಳ್ಳಲಿದ್ದು ಜನಸೇವೆಗೆ ಸಮರ್ಪಣೆಗೊಳ್ಳಲಿದೆ. ಇಂತಹ ಸಂದರ್ಭದಲ್ಲಿ ಅಧಿಕಾರಿ ವರ್ಗದವರೂ ಸಹ ಕಾರ್ಯಪ್ರವೃತ್ತರಾಗಿ ಶೀಘ್ರವೇ ತಮ್ಮತಮ್ಮ ಜವಾಬ್ದಾರಿಗಳನ್ನು ಪೂರ್ಣಗೊಳಿಸಿದರೆ ಜನರಿಗೂ ಅನುಕೂಲವಾಗುತ್ತದೆ, ಜನಪ್ರತಿನಿಧಿಗಳು ಕೈಗೊಂಡ ಕಾರ್ಯಗಳು ಸಾರ್ಥಕವೆನಿಸುತ್ತದೆ ಎಂದು ಸಲಹೆ ನೀಡಿದರು. ಇದೇ ವೇಳೆ ಪಶ್ಚಿಮ ಕಾರ್ಡ್ ರಸ್ತೆಯ ಮೇಲ್ಸೇತುವೆ ವಿಚಾರ ಪ್ರಸ್ತಾಪಿಸಿದ ಸಚಿವರು ಸೇತುವೆ ಅಡಿಯಲ್ಲಿ ಸ್ವಚ್ಛತಾಕಾರ್ಯವನ್ನು ಕೈಗೊಂಡು ಅನುಕೂಲಕರ ವಾತಾವರಣ ನಿರ್ಮಾಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ರಾಕೇಶ್ ಸಿಂಗ್, ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶ್ರೀ ರವಿಶಂಕರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications