ಕಾನೂನು ತಂದ ಕೂಡಲೇ ಮೀಸಲಾತಿ ಹೆಚ್ಚಳ ಸಂವಿಧಾನಬದ್ಧವಾಗಲ್ಲ: ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 26: ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳದ ಬೇಡಿಕೆಗೆ ಒಟ್ಟು ಮೀಸಲಾತಿ ಪ್ರಮಾಣ ಹೆಚ್ಚಳವೊಂದೇ ಪರಿಹಾರ. ಇದಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂಬುದಕ್ಕೆ ನಾವು ಬದ್ಧರಾಗಿದ್ದೇವೆ. ಇದೇ ಕಾರಣಕ್ಕೆ ನಾವು ನ್ಯಾ. ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಮಾಡಿದ್ದೆವು ಎಂದು ಹೇಳಿದ್ದಾರೆ.
ಮೀಸಲಾತಿ ಹೆಚ್ಚಳಕ್ಕೆ ಕೇಂದ್ರ @BJP4India ಸರ್ಕಾರ ಒಪ್ಪದಿದ್ದರೆ ಸರ್ವ ಪಕ್ಷಗಳ ನಿಯೋಗದಲ್ಲಿ ನಾವೂ ಬರುತ್ತೇವೆ. ಈ ಅಧಿವೇಶನದ ಅವಧಿಯಲ್ಲಿಯೇ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವ ಕೆಲಸ ಆಗಲಿ @BJP4Karnataka.
— Siddaramaiah (@siddaramaiah) December 26, 2022
12/12#SocialJustice
'ಈಗಿನ ಸ್ಥಿತಿಯಲ್ಲಿ ಮೀಸಲಾತಿ ಹೆಚ್ಚಿಸಿದರೆ ಸುಪ್ರೀಂ ಕೋರ್ಟ್ ನ ತೀರ್ಪಿನ ಉಲ್ಲಂಘನೆಯಾಗುತ್ತದೆ. ಮೀಸಲಾತಿ ಹೆಚ್ಚಳ ಊರ್ಜಿತವಾಗಬೇಕಾದರೆ ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಮಾಡಿ ಸಂವಿಧಾನದ 9ನೇ ಶೇಡ್ಯೂಲ್ ಗೆ ಸೇರಿಸಬೇಕಾಗುತ್ತದೆ' ಎಂದು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮಾಡಿದ ಕೂಡಲೇ, ಕಾನೂನು ತಂದ ಕೂಡಲೇ ಮೀಸಲಾತಿ ಹೆಚ್ಚಳವು ಸಂವಿಧಾನಬದ್ಧವಾಗಲ್ಲ. ಇದು ಜನರ ಮೂಗಿಗೆ ತುಪ್ಪ ಹಚ್ಚುವ ಕುತಂತ್ರ ಎಂದು ಟೀಕಿಸಿದ್ದಾರೆ.
ನಮ್ಮದು ಡಬ್ಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತೀರ, ನಾವು ನಿಮ್ಮೊಂದಿಗೆ ದೆಹಲಿಗೆ ಬರುತ್ತೇವೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವಂತೆ ಒತ್ತಾಯ ಮಾಡೋಣ ಎಂದು ಟ್ವೀಟ್ ಮಾಡಿದ್ದಾರೆ.
'ರಾಜ್ಯಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ರಾಜ್ಯ ಸಚಿವರಾದ ಪ್ರತಿಮಾ ಪೌಲಿಕ್ ಅವರು ಮೀಸಲಾತಿಯನ್ನು 50% ಗಿಂತ ಹೆಚ್ಚು ಮಾಡುವ ಪ್ರಸ್ತಾವ ನಮ್ಮ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಇಲ್ಲಿ ಯಾರು ಯಾರ ಹಾದಿ ತಪ್ಪಿಸುತ್ತಿದ್ದಾರೆ' ಎಂದು ಪ್ರಶ್ನಿಸಿದ್ದಾರೆ.
ಲೋಕಸಭಾ ಸದಸ್ಯರಾದ ಎಸ್, ಮುನಿಸ್ವಾಮಿ ಪ್ರಶ್ನೆಗೆ ಉತ್ತರ ನೀಡಿದ್ದ ಸಚಿವ ಎ.ನಾರಾಯಣಸ್ವಾಮಿ ಅವರು, ಮೀಸಲಾತಿ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದಿದ್ದಾರೆ. ಅಂದರೆ ಸರ್ಕಾರ ಇವತ್ತಿನವರೆಗೆ ಮಸೂದೆಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿಲ್ಲ ಎಂದು ಆರೋಪಿಸಿದ್ದಾರೆ.
ಮೀಸಲಾತಿ ಹೆಚ್ಚಳಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆಯಾ? ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಎಂದು ಒತ್ತಡ ಹಾಕಿದೆಯಾ? ರಾಜ್ಯದಿಂದ ಯಾರಾದರೂ ಕೇಂದ್ರದ ಸಮಾಜ ಕಲ್ಯಾಣ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್ ಪಕ್ಷದ ಪೂರ್ಣ ಬೆಂಬಲ ಇದೆ. ನೀವು ಸರ್ವಪಕ್ಷ ಸಭೆ ಕರೆದು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗುವುದಾದರೆ ನಾವು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೀಸಲಾತಿ ಹೆಚ್ಚಳ ಆಗಬೇಕು ಎಂಬುದು ನಮ್ಮ ಕಳಕಳಿ. ನಾವು ಮೀಸಲಾತಿ ಪರವಾಗಿದ್ದೇವೆ ಎಂಬುದನ್ನು ಮತ್ತೊಮ್ಮೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.
ಸಂಸತ್ ಅಧಿವೇಶನ ನಡೆಯುತ್ತಿದ್ದಾಗಲೇ ಸಂವಿಧಾನ ತಿದ್ದುಪಡಿ ಮಸೂದೆಗೆ ಮಂಜೂರಾತಿ ಪಡೆಯಬಹುದಿತ್ತು. ಇದನ್ನು ಮಾಡದೆ ಹೋದರೆ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಮೀಸಲಾತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಒಪ್ಪದಿದ್ದರೆ ಸರ್ವ ಪಕ್ಷಗಳ ನಿಯೋಗದಲ್ಲಿ ನಾವೂ ಬರುತ್ತೇವೆ. ಈ ಅಧಿವೇಶನದ ಅವಧಿಯಲ್ಲಿಯೇ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವ ಕೆಲಸ ಆಗಲಿ ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications