SC, ST ಮೀಸಲಾತಿ ಏರಿಕೆ: ಸ್ವಾಗತಿಸಿದ ಕಾಂಗ್ರೆಸ್ ಮುಖಂಡ ಡಾ. ಮಹದೇವಪ್ಪ
ಮೈಸೂರು, ಅ 8: ನ್ಯಾ| ನಾಗಮೋಹನ್ ದಾಸ್ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಬೊಮ್ಮಾಯಿ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಏರಿಕೆ ಮಾಡಬೇಕೆಂಬ ನಿರ್ಧಾರಕ್ಕೆ ಸರಕಾರಕ್ಕೆ ಬಂದಿದೆ.
ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಏರಿಸಲು ಸರಕಾರ ತೀರ್ಮಾನಿಸಿದೆ. ಸರಕಾರದ ಈ ಮಹತ್ವದ ನಿರ್ಧಾರದ ಬಗ್ಗೆ ಮಾಜಿ ಸಚಿವ ಮತ್ತು ಹಿರಿಯ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
"SC ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 15 ರಿಂದ ಶೇ 17ಕ್ಕೆ ಹಾಗೂ ST ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಿರುವ ಸರ್ವಪಕ್ಷ ಸಭೆಯ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ" ಎಂದು ಮಹದೇವಪ್ಪ ಹೇಳಿದ್ದಾರೆ.

"ಈ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹಿಂದೆ ಮೈಸೂರಿನಲ್ಲಿ ಸಿದ್ದರಾಮಯ್ಯನವರು ಮತ್ತು ನಾನು ಬಹಳಷ್ಟು ಹೊತ್ತು ಚರ್ಚೆ ಮಾಡಿದ್ದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ".
"ಇನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ SC/ST ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂಬ ಕಾರಣಕ್ಕಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ terms of reference ಅನ್ನು ಹಾಕಿದ ಮೇಲೆ ಜಸ್ಟೀಸ್ ನಾಗಮೋಹನ್ ದಾಸ್ ಅವರು ಇಡೀ ರಾಜ್ಯವನ್ನು ಪ್ರವಾಸ ಮಾಡಿ, ವಸ್ತು ನಿಷ್ಠವಾದ ವರದಿಯನ್ನು ಸಿದ್ದಪಡಿಸಿ ಅದನ್ನು ಸರ್ಕಾರಕ್ಕೆ ಸಲ್ಲಿಸಿದರು" ಎಂದು ಮಹದೇವಪ್ಪ ಹೇಳಿದ್ದಾರೆ.

"ಇದಾದ ನಂತರ ಈ ವರದಿಯನ್ನು ಮತ್ತೊಮ್ಮೆ ಕೂಲಂಕಷವಾಗಿ ವಿಶ್ಲೇಷಣೆ ಮಾಡಿ ಅದನ್ನು ಜಾರಿಗೊಳಿಸುವ ಹೊತ್ತಿಗೆ ಸರ್ಕಾರ ಬದಲಾಯಿತು. ಆದರೆ ಇದೀಗ ನಮ್ಮ ಸರ್ಕಾರದ ಅವಧಿಯಲ್ಲಿ ಬಹಳಷ್ಟು ಕಾಳಜಿ ವಹಿಸಿ ಸಿದ್ದಪಡಿಸಲಾದ ನಾಗಮೋಹನ್ ದಾಸ್ ಅವರ ವರದಿಯನ್ನು ಆಧರಿಸಿ SC/ ST ಮೀಸಲಾತಿಯನ್ನು ಹೆಚ್ಚಳ ಮಾಡುವುದಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಸಮ್ಮತಿ ದೊರೆತಿರುವುದು ನಿಜಕ್ಕೂ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದ ನಮ್ಮ ಕಾಂಗ್ರೆಸ್ ಸರ್ಕಾರದ ಬದ್ಧತೆಗೆ ಸಲ್ಲುವಂತಹ ಶ್ರೇಯವಾಗಿದೆ" ಎಂದು ಒನ್ ಇಂಡಿಯಾ ಜೊತೆ ಡಾ.ಮಹದೇವಪ್ಪ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ.
"ಇದರ ಜೊತೆಗೆ ಜಾತಿಗಣತಿಯ ವರದಿಯನ್ನೂ ಕೂಡಾ ಜಾರಿಗೊಳಿಸಿದರೆ ಯಾವ ಯಾವ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಪರಿಸ್ಥಿತಿ ಏನಾಗಿದೆ ಎಂಬ ಚಿತ್ರಣವೂ ಕೂಡ ನಮಗೆ ಸ್ಪಷ್ಟವಾಗಿ ದೊರೆಯಲಿದ್ದು ಈ ಹಿನ್ನಲೆಯಲ್ಲಿ ಜಾತಿ ಗಣತಿಯನ್ನು ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ" ಎಂದು ಎಚ್.ಸಿ.ಮಹದೇವಪ್ಪ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.












Click it and Unblock the Notifications