ಒಕ್ಕಲಿಗರ ಮೀಸಲಾತಿ; ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದ ಮುಖಂಡರು
ಬೆಳಗಾವಿ,ಡಿಸೆಂಬರ್ 23: ಒಕ್ಕಲಿಗ ಸಮುದಾಯಕ್ಕೆ ಪ್ರವರ್ಗ 3ಎ ಅಡಿ ಮೀಸಲಾತಿ ಪ್ರಮಾಣವನ್ನು ಶೇಕಡಾ 12ಕ್ಕೆ ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರದಲ್ಲಿರುವ ಸಮುದಾಯಕ್ಕೆ ಸೇರಿದ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಒತ್ತಾಯಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾದ ಮುಖಂಡರು, ಈ ಮನವಿ ಸಲ್ಲಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಒಕ್ಕಲಿಗರ ಬೇಡಿಕೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು. ಹಿಂದೆ ಈ ಸಂಬಂಧ ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರು ಕೂಡ ಮನವಿ ಕೊಟ್ಟಿದ್ದಾರೆ. ಹಾಗೆಯೇ ಈಗಲೂ ಒಕ್ಕಲಿಗ ಸಚಿವರು, ಶಾಸಕರು ಮನವಿ ಮಾಡಿದ್ದಾರೆ. ಈ ಎಲ್ಲ ಮನವಿಗಳನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು
ರಾಜ್ಯದ ಜನಸಂಖ್ಯೆಯಲ್ಲಿ ಶೇಕಡ 16ರಷ್ಟಿರುವ ಹಾಗೂ ವಿವಿಧ ಯೋಜನೆಗಳಿಂದಾಗಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ಒಕ್ಕಲಿಗ ಸಮುದಾಯಕ್ಕೆ ಪ್ರವರ್ಗ 3ಎ ಅಡಿ ಮೀಸಲಾತಿಯನ್ನು ಶೇಕಡ 12ಕ್ಕೆ ಹೆಚ್ಚಿಸಬೇಕು ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿ, ನಗರೀಕರಣ ಹಾಗೂ ಕೈಗಾರಿಕೀಕರಣಕ್ಕಾಗಿ ಕೃಷಿಯನ್ನು ನೆಚ್ಚಿಕೊಂಡ ಒಕ್ಕಲಿಗರು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕರ್ನಾಟಕದಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ಒಕ್ಕಲಿಗರ ಸಂಖ್ಯೆ ಹೆಚ್ಚುತ್ತಿದೆ. ಈಗಿರುವ 3ಎ ಪ್ರವರ್ಗವು ಶೇಕಡ 20ರಷ್ಟು ಜನಸಂಖ್ಯೆ ಇರುವ ಸಮುದಾಯವನ್ನು ಪ್ರತಿನಿಧಿಸುತ್ತಿದೆ. ಆದರೆ ಇದಕ್ಕೆ ನಿಗದಿಗಾಗಿರುವುದು ಶೇಕಡ 4ರಷ್ಟು ಮೀಸಲಾತಿ ಮಾತ್ರ. ಇದರಲ್ಲಿ ಒಕ್ಕಲಿಗರಿಗೆ ಸಿಗುತ್ತಿರುವುದು ಶೇಕಡ 3ರಷ್ಟು ಮಾತ್ರ ಎಂಬ ಬಗ್ಗೆ ಗಮನ ಸೆಳೆದರು.
ಇನ್ನೂ ಕಂದಾಯ ಸಚಿವರಾದ ಆರ್. ಅಶೋಕ್ ಮಾತನಾಡಿ, ಒಕ್ಕಲಿಗ ಸಮುದಾಯದ ಉಪಜಾತಿಗಳಾದ ಬಂಟರು, ರೆಡ್ಡಿಗಳು ಮತ್ತು ಕೊಂಚಟ್ಟಿಗರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಲ್ಲ. ಇದರಿಂದ ಈ ಸಮುದಾಯಗಳಿಗೆ ಅನ್ಯಾಯವಾಗಿದೆ. ತಕ್ಷಣವೇ ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಒಕ್ಕಲಿಗ ಸಮುದಾಯದ ನ್ಯಾಯಯುತ ಬೇಡಿಕೆ ಇದಾಗಿದೆ. ಜನಸಂಖ್ಯೆ ಆಧಾರದಲ್ಲಿ ನಾವೂ ರಾಜ್ಯದಲ್ಲಿ 16% ಇದ್ದೇವೆ ನಮ್ಮಲ್ಲೂ ತುಂಬಾ ಬಡವರಿದ್ದಾರೆ ಅಲ್ಲದೇ ಜಮೀನುಗಳನ್ನು ಕಳೆದುಕೊಂಡವರಿದ್ದಾರೆ. ನಮ್ಮ ಸಮುದಾಯದ ಮೀಸಲಾತಿಯನ್ನ 4 ರಿಂದ 12 ಪರ್ಸೆಂಟ್ ಗೆ ಹೆಚ್ಚಿಸಬೇಕು ಎಂಬುದು ನಮ್ಮ ನ್ಯಾಯಯುತವಾದ ಬೇಡಿಕೆ ಎಂದರು.
ಒಕ್ಕಲಿಗ ಸಮುದಾಯವನ್ನ ಭಾಗ ಮಾಡಿ ಒಡೆದಿದ್ದಾರೆ. ಹೀಗಾಗಿ ಭಂಟರು, ರೆಡ್ಡಿ, ಕುಂಚಿಟಗರು ಸೇರಿದಂತೆ ಕೇಂದ್ರ ಓಬಿಸಿ ರಿಸರ್ವೇಶನ್ ನಲ್ಲಿ ಸೇರಿಸಬೇಕು. ಒಕ್ಕಲಿಗ ಸಮುದಾಯಕ್ಕೆ ಅಭದ್ರತೆ ಕಾಡಬಾರದು. ಇಡೀ ಒಕ್ಕಲಿಗ ಸಮುದಾಯವನ್ನ ಒಟ್ಟಿಗೆ ಸೇರಿಸಬೇಕು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ, ಹೀಗಾಗಿ ನಮಗೆ ನಂಬಿಕೆ ಇದೆ. ನಮ್ಮ ಬೇಡಿಕೆಯನ್ನ ಗೌರವಿಸಿ ಪರಿಹಾರ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ ಎನ್ನುವುದಾಗಿ ಸರಳ ಮುಖ್ಯಮಂತ್ರಿ ಬೊಮ್ಮಾಯಿಯವರು ಹೇಳಿದ್ದಾರೆ. ನಾವೂ ಗಲಾಟೆ, ಧಮ್ಕಿ ಮಾಡಲ್ಲ. ಶಾಂತಿಯುತವಾಗಿ ಎಲ್ಲರೂ ಸೇರಿ ಮನವಿ ಮಾಡುತ್ತಿದ್ದೇವೆ. ನಮ್ಮ ಸಮುದಾಯದ ಸ್ವಾಮೀಜಿಗಳನ್ನು ಜನವರಿ ೪ ರಂದು ಭೇಟಿ ಮಾಡುತ್ತೇವೆ ನಾವೆಲ್ಲರೂ ಒಟ್ಟಿಗೆ ಹೆಜ್ಜೆ ಹಾಕಿ, ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಆರ್. ಅಶೋಕ್ ಹೇಳಿದರು.

ಸಚಿವ ಗೋಪಾಲಯ್ಯ ಮಾತನಾಡಿ, ಒಕ್ಕಲಿಗ ಸಮುದಾಯವು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ಹೀಗಾಗಿ ಸಮುದಾಯಕ್ಕೆ ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ಹೆಚ್ಚಿನ ಪ್ರಮಾಣದಲ್ಲಿ ಸಿಗಬೇಕು ಎಂದರು.
ಸಚಿವರಾದ ಅರಗ ಜ್ಞಾನೇಂದ್ರ, ಡಾ.ಸುಧಾಕರ, ಎಸ್ ಟಿ ಸೋಮಶೇಖರ್, ನಾರಾಯಣಗೌಡ, ಶಾಸಕರಾದ ಕೃಷ್ಣಪ್ಪ, ಕೆ.ಜೆ.ಭೋಪಯ್ಯ, ಸುಕುಮಾರ ಶೆಟ್ಟಿ, ಡಾ.ರಾಜೇಶ ಗೌಡ, ಮಸಾಲೆ ಜಯರಾಂ, ರಾಜೇಶ ನಾಯ್ಕ, ತುಳಸಿ ಮುನಿರಾಜು, ಸತೀಶ ರೆಡ್ಡಿ, ಪ್ರಾಣೇಶ್, ವೈ.ಎ. ನಾರಾಯಣಸ್ವಾಮಿ, ಸೋಮಶೇಖರ ರೆಡ್ಡಿ, ಸಂಜೀವ ಮಟಂದೂರು, ಎಲ್ ನಾಗೇಂದ್ರ, ಭಾರತಿ ಶೆಟ್ಟಿ, ಅ.ದೇವೇಗೌಡ, ಪುಟ್ಟಣ್ಣ, ಚಿದಾನಂದ ಗೌಡ, ಎಸ್ ಆರ್ ವಿಶ್ವನಾಥ ಮತ್ತಿತರರು ಸಭೆಯಲ್ಲಿ ಇದ್ದರು.












Click it and Unblock the Notifications