ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪಕ್ಷೇತರ ಶಾಸಕರ ಸಭೆ!
ಬೆಂಗಳೂರು, ಮೇ 29 : ಕರ್ನಾಟಕದ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿರುವ ಇಬ್ಬರು ಪಕ್ಷೇತರ ಶಾಸಕರು ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಮತ್ತೊಂದು ಕಡೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಬುಧವಾರ ಪಕ್ಷೇತರ ಶಾಸಕರಾದ ಎಚ್.ಮಹೇಶ್ (ಮುಳುಬಾಗಿಲು), ಆರ್.ಶಂಕರ್ (ರಾಣೆಬೆನ್ನೂರು) ಬೆಂಗಳೂರಿನ ಸವೆನ್ ಮಿನಿಸ್ಟರ್ಸ್ ಕ್ವಾಟ್ರರ್ಸ್ನ ನಿವಾಸದಲ್ಲಿ ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದರು.
ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರ ಜೊತೆ ಆಗಮಿಸಿದ ಶಾಸಕರು ಕೆಲವು ಹೊತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಮಾತುಕತೆ ನಡೆಸಿದರು. ರಾಜ್ಯ ರಾಜಕೀಯದಲ್ಲಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸಿದ್ದು ಅತೃಪ್ತ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಅದಕ್ಕೂ ಮೊದಲು ಪಕ್ಷೇತರ ಶಾಸಕರು ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದು ಏಕೆ? ಎಂಬ ಪ್ರಶ್ನೆ ಹುಟ್ಟುಕೊಂಡಿದೆ....

ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದರು
ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮಂಗಳವಾರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದರು. ಬಳಿಕ ಮಾತನಾಡಿದ್ದ ಅವರು, 'ಈ ಬಾರಿ ನನಗೆ ನಿಗಮ ಮಂಡಳಿ ಸ್ಥಾನ ಬೇಕಿಲ್ಲ ಸಚಿವ ಸ್ಥಾನವೇ ಬೇಕು. ಕಳೆದ ಬಾರಿಯೂ ಸಂಪುಟ ವಿಸ್ತರಣೆ ವೇಲೆ ಸಚಿವ ಸ್ಥಾನ ತಪ್ಪಿ ಹೋಗಿತ್ತು. ಈ ಬಾರಿ ಮೋಸವಾಗುವುದಿಲ್ಲವೆಂಬ ವಿಶ್ವಾಸವಿದೆ' ಎಂದು ಹೇಳಿದ್ದರು.

ಸಿದ್ದರಾಮಯ್ಯ ಭೇಟಿಯಾಗಿದ್ದರು
ಕಳೆದ ವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದಾಗ ಆರ್.ಶಂಕರ್ ಅವರು ಸಿದ್ದರಾಮಯ್ಯ ಜೊತೆ ಕಾಣಿಸಿಕೊಂಡಿದ್ದರು. ಆದರೆ, ಇಂದು ಅವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆ
ಕಾಂಗ್ರೆಸ್-ಜೆಡಿಎಸ್ ನಾಯಕರು ಮಂಗಳವಾರ ಸಂಜೆಯಿಂದ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿಗೆ ಬಂದಿದ್ದು, ಬೆಳಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ಜೊತೆ ಸಭೆ ನಡೆಸಿದ್ದಾರೆ.

ಶಾಸಕರ ಜೊತೆ ವೇಣುಗೋಪಾಲ್ ಸಭೆ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಸಂಜೆ ಅತೃಪ್ತ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಅದಕ್ಕೂ ಮೊದಲು ಪಕ್ಷೇತರ ಶಾಸಕರು ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.












Click it and Unblock the Notifications