Lok Sabha Election 2024: ಚುನಾವಣೆಗೂ ಮುನ್ನ ಸೋಲೊಪ್ಪಿದರೇ ಸಿದ್ದರಾಮಯ್ಯ?
ಬೆಂಗಳೂರು, ಏಪ್ರಿಲ್ 13: ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ಗೆ ಈ ಬಾರಿಯ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಟಾರ್ಗೆಟ್ ನೀಡಿದೆ. ಹೈಕಮಾಂಡ್ ಕೊಟ್ಟ ಗುರು ತಲುಪಲು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಸಿದ್ದರಾಮಯ್ಯ ಚುನಾವಣೆಗೂ ಮುನ್ನವೇ ಸೋಲೋಪ್ಪಿದರೇ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಹೌದು, 2024ರ ಲೋಕಸಭೆ ಚುನಾವಣೆಗೂ ಮುನ್ನ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಇಂಡಿಯಾ ಒಕ್ಕೂಟ ಸಂಪೂರ್ಣ ಬಹುಮತ ಸಿಗದಿರಬಹುದು ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ. 'ಇಂಡಿಯಾ' ಮೈತ್ರಿಕೂಟಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಹುಮತ ಸಿಗದೇ ಇರಬಹುದು ಎಂದು ಅವರು 'ಪಿಟಿಐ' ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಈ ಮೂಲಕ ಚುನಾವಣೆಗೂ ಮುನ್ನವೇ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲೊಪ್ಪಿಕೊಂಡರೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ.

'ಇಂಡಿಯಾ' ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಪಡೆಯದಿರಬಹುದು. ಆದರೆ ಅದೇ ಎನ್ಡಿಎ ಮೈತ್ರಿಕೂಡ ಕೂಡ ಸಂಪೂರ್ಣ ಬಹುಮತವನ್ನು ಪಡೆಯುವುದಿಲ್ಲ. ಆದ್ದರಿಂದ, 'ಇಂಡಿಯಾ' (ಬಣ) ಮೈತ್ರಿಕೂಟವು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಒಡಿಶಾದ ಸಿಎಂ ನವೀನ್ ಪಟ್ನಾಯಕ್, ಸಿಪಿಐ (ಎಂ) ಮತ್ತು ಇತರ ರಾಜಕೀಯ ಪಕ್ಷಗಳನ್ನು ಅವಲಂಬಿಸಬೇಕಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಎನ್ಡಿಎ ಹೆಸರಿನಲ್ಲಿ ಬಿಜೆಪಿ ಕೂಡ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಬಿಜೆಪಿಯೊಂದೇ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ. ಬಿಜೆಪಿ ತನ್ನ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಿರಬಹುದು, ಆದರೆ ಅದರ ಅರ್ಥ ಬಿಜೆಪಿ ತಾನಾಗಿ ಅಧಿಕಾರಕ್ಕೆ ಬಂದಿದೆ ಎಂದಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಎರಡೂವರೆ ವರ್ಷಗಳ ನಂತರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡಬೇಕೇ ಎಂಬ ಊಹಾಪೋಹಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದರು. ಅದೆಲ್ಲಾ ಹೈಕಮಾಂಡ್ ನಿರ್ಧಾರವನ್ನು ಅವಲಂಬಿಸಿರುತ್ತದೆ. ಹೈಕಮಾಂಡ್ ನಿರ್ಧರಿಸಿದರೆ ನಾನೇ ಮುಂದುವರಿಯುತ್ತೇನೆ. ಇಲ್ಲವಾದಲ್ಲಿ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications