ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ಗೆ ಶ್ರೀಲಂಕಾದಲ್ಲಿ ಹೃದಯಾಘಾತ: ಬೆಂಗಳೂರಿಗೆ ಏರ್ಲಿಫ್ಟ್ ಮಾಡಲು ಕ್ರಮ
ಬೆಂಗಳೂರು, ಜುಲೈ 10: ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಕಸ್ತೂರಿ ರಂಗನ್ಗೆ ಶ್ರೀಲಂಕಾದಲ್ಲಿ ಹೃದಯಾಘಾತವಾಗಿರುವ ಮಾಹಿತಿ ಲಭ್ಯವಾಗಿದೆ. ಅವರನ್ನು ಶ್ರೀಲಂಕಾದಿಂದ ಏರ್ಲಿಫ್ಟ್ ಮಾಡುವ ಮೂಲಕ ಬೆಂಗಳೂರಿಗೆ ತರಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸೋಮವಾರ ಸಂಜೆ ಅವರನ್ನು ಬೆಂಗಳೂರಿಗೆ ಕರೆತರಲಾಗುವುದು. ಆ ನಂತರ ಅವರನ್ನು ನಾರಾಯಣ ಹೃದಯಾಲಯ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂಬ ಮಾಹಿತಿ ಸಿಕ್ಕಿದೆ.
ಖ್ಯಾತ ಹೃದ್ರೋಗ ತಜ್ಞ, ನಾರಾಯಣ ಹೃದಯಾಲದ ಮುಖ್ಯಸ್ಥ ಡಾ. ದೇವಿ ಶೆಟ್ಟಿ ಅವರು ಕಸ್ತೂರಿ ರಂಗನ್ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

83 ವರ್ಷ ವಯಸ್ಸಿನ ಕಸ್ತೂರಿ ರಂಗನ್ ಭಾರತದ ಹೆಸರಾಂತ ವಿಜ್ಞಾನಿ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಿ ಅವರನ್ನು ಗೌರವಿಸಲಾಗಿದೆ.
ಕಸ್ತೂರಿರಂಗನ್ ಅವರ ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಸೂಕ್ಷ್ಮವಾಗಿ ಗಮನಿಸುತ್ತಿವೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಡಾ ಕಸ್ತೂರಿ ರಂಗನ್ ಅವರು ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಎನ್ಐಐಟಿ ವಿಶ್ವವಿದ್ಯಾಲಯ ಎರಡರಲ್ಲೂ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿ ಅವರು ಕೆಲಸ ಮಾಡಿದ್ದಾರೆ.

ಅವರು 2003 ರಿಂದ 2009 ರ ವರೆಗೆ ರಾಜ್ಯಸಭೆಯ ವಿಶಿಷ್ಟ ಸದಸ್ಯರಾಗಿ ಸೇವೆ ಸಲ್ಲಿಸಿದರು. ಭಾರತದ ಯೋಜನಾ ಆಯೋಗದ ಸದಸ್ಯರಾಗಿ ಮಹತ್ವದ ಸ್ಥಾನವನ್ನು ಕಸ್ತೂರಿ ರಂಗನ್ ಹೊಂದಿದ್ದಾರೆ.
ಏಪ್ರಿಲ್ 2004 ರಿಂದ 2009 ರ ವರೆಗೆ, ಅವರು ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನಲ್ಲಿ ನಿರ್ದೇಶಕರ ಸ್ಥಾನವನ್ನು ಅಲಂಕರಿಸಿದರು. ಪ್ರಸ್ತುತ, ಅವರು ಹೊಸ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಕಸ್ತೂರಿ ರಂಗನ್ ಅವರು ಶ್ರೀಲಂಕಾದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ನೋವಾಗಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯಯುತ ಜೀವನ ನಡೆಸಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.












Click it and Unblock the Notifications