BPL Card: ಅನರ್ಹ ಬಿ.ಪಿ.ಎಲ್ ಕಾರ್ಡ್ ಹೊಂದಿದವರೇ ಎಚ್ಚರ! ಸಿದ್ದರಾಮಯ್ಯ ಕೊಟ್ಟ ಮಹತ್ವದ ಸೂಚನೆ ಏನು?
ಬೆಂಗಳೂರು, ಜುಲೈ 08: ಬಿಪಿಎಲ್ ಕಾರ್ಡ್ ಗಳನ್ನು ಅನರ್ಹರು ಹೊಂದಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು ಶೇ. 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ನೆರೆ ರಾಜ್ಯ ತಮಿಳುನಾಡಿನಲ್ಲಿ ಶೇ.40 ದಷ್ಟು ಮಂದಿ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಜೊತೆಗಿನ ಸಭೆಯಲ್ಲಿ ಸಿಎಂ ಮಾತನಾಡಿ, ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು ಸಿದ್ದರಾಮಯ್ಯ ಅವರು ಸೂಚಿಸಿದರು.

ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ.
ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ 225 ಅಂತಹ ಜಲಾಗ್ರಾಮಗಳನ್ನು 1247ಗ್ರಾಮ ಪಂಚಾಯತ್ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಂ ಪಂಚಾಯತ್ ನಲ್ಲಿ ಟಾಸ್ಕ್ ಪೋಸ್ಟ್ ರಚನೆ. ಕಂದಾಯ ಇಲಾಖೆ, ಪಂಚಾಯತ್, ಪೋಲಿಸ್, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್ ಅಧಿಕಾರಿ ನೇಮಕ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಎಲ್ಲಾ ಸಲಕರಣೆ ಲಭ್ಯವಾಗಿಡುವಂತೆ ಸೂಚನೆ ನೀಡಲಾಯಿತು.
ಬೆಳೆ ಹಾನಿ, ಮನೆ ಹಾನಿ ಎಸ್ಡಿಆರ್ಎಫ್ ಪ್ರಕಾರ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ. ಪ್ರಾಣ ಹಾನಿ ತಪ್ಪಿಸುವುದು ಆದ್ಯತೆಯಾಗಬೇಕು. 27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್ಪೋರ್ಸ್ ರಚಿಸಬೇಕು. 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. 2225 ಗ್ರಾಮಗಳು 2242 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಉತ್ತಮವಾಗಿ ಮಳೆಯಾಗಿರುವ ಕಾರಣ ಎಲ್ಲಾ ಜಲಾಶಯಗಳಲ್ಲಿ ಒಟ್ಟು 293 ಟಿಎಂಸಿ ನೀರು ಸಂಗ್ರಹವಿದೆ.
ಈ ಬಾರಿ ಪೂರ್ವ ಮುಂಗಾರಿನಲ್ಲಿ 3714 ಮನೆಗಳಿಗೆ ಹಾನಿ ಉಂಟಾಗಿದ್ದು, ಎಸ್ಡಿಆರ್ಎಫ್ ಮಾನದಂಡ ಪ್ರಕಾರ ಪರಿಹಾರವನ್ನು ತಕ್ಷಣ ಒದಗಿಸಬೇಕು. ಹವಾಮಾನ ಇಲಾಖೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಸೂಚಿಸಲಾಯಿತು. ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 3784 ಅರ್ಜಿಗಳು ಇತ್ಯರ್ಥಪಡಿಸಲು ಬಾಕಿಯಿದ್ದು ಸಕಾಲದ ಅವಧಿಯ ಮಿತಿಯಲ್ಲಿಯೇ ಇವೆ. ಇನ್ನು ಮುಂದೆ 30 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ರಾಜ್ಯದಲ್ಲಿ 76 ಲಕ್ಷ ಜನರಿಗೆ ಪಿಂಚಣಿ ನೀಡುತ್ತಿದ್ದು, ದೇಶದಲ್ಲೇ ಅಧಿಕವಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎನ್ಪಿಸಿಐ ಮ್ಯಾಪಿಂಗ್ ಮಾಡುವಲ್ಲಿ 2 ಲಕ್ಷ ಪ್ರಕರಣಗಳು ಬಾಕಿಯಿವೆ. ಇದನ್ನು ಆದ್ಯತೆ ಮೇರೆಗೆ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಎಷ್ಟು ಪಿಂಚಣಿ ಅರ್ಜಿಗಳು ಬಾಕಿಯಿವೆ ಎಂಬುವುದನ್ನು ಆಯಾ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕೂಡಲೇ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಸಾವು ಸಂಭವಿಸಿದ ತಕ್ಷಣ ಆಯಾ ಪಿಂಚಣಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು.
ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವಲ್ಲಿ ವಿಳಂಬ ಸಲ್ಲದು. ಕಾನೂನು ಪ್ರಕಾರ ಪರಿಶೀಲಿಸಿ 1003 ಅರ್ಹ ಪ್ರಕರಣಗಳಲ್ಲಿ 994 ರೈತರ ಕುಟುಂಬಕ್ಕೆ ಪರಿಹಾರ ಒದಗಿಸಲಾಗಿದೆ. ಕಳೆದ ಬಾರಿ ಸಭೆಯಲ್ಲಿ ಪರಿಹಾರ ನೀಡಿಕೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಾರಿ ಚುರುಕು ಮೂಡಿಸಲಾಗಿದೆ. ರೈತರ ಸಭೆ ಮಾಡಿ ಜಾಗೃತಿ, ಆತ್ಮವಿಶ್ವಾಸ ಮೂಡಿಸುವ ಕಾರ್ಯ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಜಮೀನು ಮಾರ್ಗಸೂಚಿ ದರಕ್ಕಿಂತ ಕಡಿಮೆ ಬೆಲೆಗೆ ನೊಂದಣಿ ಅಗುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಬಾಕಿ ರಾಜಸ್ವವನ್ನು ವಸೂಲು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇಂತಹ 24519 ಪ್ರಕರಣಗಳು ಬಾಕಿಯಿದ್ದು, 310 ಕೋಟಿ ರೂ. ರಾಜಸ್ವ ವಸೂಲಾತಿ ಮಾಡಬೇಕಾಗಿದೆ. ಇದನ್ನು ತ್ವರಿತವಾಗಿ ಮಾಡಲು ಸೂಚನೆ ನೀಡಿದರು.
ರಾಜ್ಯದಲ್ಲಿ 92 ಉಪ ನೋಂದಣಿ ಹಾಗೂ 15 ಜಿಲ್ಲಾ ನೋಂದಣಿ ಕಚೇರಿಗಳು ಖಾಸಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವುಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರ ಪ್ರದೇಶದಲ್ಲಿ ಅತಿ ಹೆಚ್ಚು ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಿಬಿಎಂಪಿ ಅಧೀನದ ಕಟ್ಟಡಗಳಲ್ಲಿ ಸ್ಥಳಾವಕಾಶ ಒದಗಿಸಬೇಕು ಎಂದು ಸೂಚಿಸಿದರು.












Click it and Unblock the Notifications