Breaking: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕೈ ಬೆರಳಿಗೆ ಗಾಯ
ಬೆಂಗಳೂರು, ಆಗಸ್ಟ್ 27: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬೆರಳಿಗೆ ವಿಧಾನಸೌಧದಲ್ಲಿ ಗಾಯವಾಗಿದೆ. ಕರ್ಚಿಫ್ ಸುತ್ತಿಕೊಂಡು ಅವರು ಸಭೆಗೆ ಆಗಮಿಸಿದ್ದು, ತಕ್ಷಣ ವೈದ್ಯರ ತಂಡ ಧಾವಿಸಿ ಪರಿಶೀಲನೆ ನಡೆಸಿತು. ಮುಖ್ಯಮಂತ್ರಿಗಳು ಪೊಲೀಸ್ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸುತ್ತಿದ್ದು, ವಿಧಾನಸೌಧದಲ್ಲೇ ಇದ್ದಾರೆ.
ಮಂಗಳವಾರ ವಿಧಾನಸೌಧದ ಕೊಠಡಿ ಸಂಖ್ಯೆ 313ರಲ್ಲಿ ಜನಸ್ಪಂದನ ಕಾರ್ಯಕ್ರಮ ಮಗಿಸಿ ಬರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬೆರಳಿಗೆ ಗಾಯವಾಗಿದೆ. ಸಾರ್ವಜನಿಕರೊಬ್ಬರು ನೀಡಿದ ಅರ್ಜಿಯಲ್ಲಿದ್ದ ಗುಂಡು ಸೂಜಿ ಚುಚ್ಚಿಗಾಯವಾಗಿದೆ.

ಈ ಕಾರ್ಯಕ್ರಮದ ಬಳಿಕ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಜೊತೆಗಿನ ಸಭೆಗೆ ಆಗಮಿಸಬೇಕಿತ್ತು. ಕರ್ಚಿಫ್ ಸುತ್ತಿಕೊಂಡು ಅವರು ಸಭೆಗೆ ಆಗಮಿಸಿದ್ದು ನೋಡಿ ತಕ್ಷಣ ವೈದ್ಯರಿಗೆ ಮಾಹಿತಿ ನೀಡಲಾಗಿದೆ. ವೈದ್ಯರ ತಂಡ ಆಗಮಿಸಿ ಪರಿಶೀಲನೆ ನಡೆಸಿತು.
ವೈದ್ಯರ ತಂಡ ಸಿದ್ದರಾಮಯ್ಯ ಕೈ ಪರಿಶೀಲನೆ ನಡೆಸಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿತು. ಅರ್ಜಿ ಜೊತೆ ಇದ್ದ ಗುಂಡು ಸೂಜಿ ಚುಚ್ಚಿದ್ದನ್ನು ವೈದ್ಯರು ಬಳಿಕ ಖಚಿತಪಡಿಸಿದರು. ವೈದ್ಯರ ಭೇಟಿ ಬಳಿಕ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಮುಂದುವರೆಸಿದರು.
ಬೇರೆ ಜೈಲಿಗೆ ಶಿಫ್ಟ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಪೊಲೀಸ್ ಅಧಿಕಾರಿಗಳ ಸಭೆಯನ್ನು ನಡೆಸುತ್ತಿದ್ದಾರೆ. ದರ್ಶನ್ ಮತ್ತು ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ಒಪ್ಪಿಗೆ ಪಡೆದು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸುವ ಮುನ್ನ ಗೃಹ ಸಚಿವ ಡಾ. ಜಿ. ಪರಮೇಶ್ವರ ಗೃಹ ಕಛೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಭೇಟಿಯಾಗಿದ್ದರು. ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಂಜೆ ಜೈಲಿಗೆ ಭೇಟಿ ನೀಡಿದ್ದ ಕುರಿತು ವಿವರಣೆ ನೀಡಿದ್ದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ಗೆ ಇಂದು ಜೈಲಿಗೆ ಭೇಟಿ ನೀಡುವಂತೆ ಗೃಹ ಸಚಿವರು ಸೂಚನೆ ಕೊಟ್ಟಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರ ತನಕ ವಿಸ್ತರಣೆ ಮಾಡಲಾಗಿದೆ. ಬುಧವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಆಗ ಕೋರ್ಟ್ ಒಪ್ಪಿಗೆ ಪಡೆದು ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಕುರಿತು ಪೊಲೀಸರು ಆದೇಶವನ್ನು ಪಡೆಯಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ದರ್ಶನ್ ಮತ್ತು ಕೆಲವು ಆರೋಪಿಗಳನ್ನು ಬಳ್ಳಾರಿ ಜೈಲಿಗೆ, ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಇತರರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಮಾಹಿತಿ ಇದೆ. ಕೋರ್ಟ್ ಬುಧವಾರ ಯಾವ ಆದೇಶ ನೀಡಲಿದೆ? ಎಂದು ಕಾದು ನೋಡಬೇಕಿದೆ.
ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಪವಿತ್ರಾ ಗೌಡ ಸೇರಿದಂತೆ ಇತರ 5 ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರು ಕೋರ್ಟ್ನಲ್ಲಿ ಮಂಗಳವಾರ ನಡೆಯುತ್ತಿದೆ. ಪವಿತ್ರಾ ಗೌಡಗೆ ಜಾಮೀನು ನೀಡಬಾರದು ಎಂದು ಈಗಾಗಲೇ ಪೊಲೀಸರು ಆಕ್ಷೇಪಣೆಯನ್ನು ಸಲ್ಲಿಕೆ ಮಾಡಿದ್ದಾರೆ.












Click it and Unblock the Notifications