ಏ.18ರಂದು ಮೊದಲ ಹಂತದ ಚುನಾವಣೆ : ಆಸಕ್ತಿಕರ ವಿಷಯಗಳು
ಬೆಂಗಳೂರು, ಮಾರ್ಚ್ 31 : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಲಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
14 ಕ್ಷೇತ್ರಗಳಲ್ಲಿ 241 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಮೈತ್ರಿಕೂಟದ ಪೈಕಿ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 4 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮೊದಲ ಹಂತದ ಚುನಾವಣೆ: ಕಣದಲ್ಲಿ 241 ಅಭ್ಯರ್ಥಿಗಳು
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ನಟ ಪ್ರಕಾಶ್ ರಾಜ್, ದಿ.ಅಂಬರೀಶ್ ಪತ್ನಿ ಸುಮಲತಾ, ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಕಣದಲ್ಲಿರುವ ಪ್ರಮುಖರು.
ಏಪ್ರಿಲ್ 18ರಂದು ಮತದಾನ : ಜಿದ್ದಾಜಿದ್ದಿನ 6 ಕ್ಷೇತ್ರಗಳು
ರಾಜ್ಯದಲ್ಲಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಪ್ರತಿ ಲೋಕಸಭಾ ಕ್ಷೇತ್ರದ ಚುನಾವಣಾ ಜವಾಬ್ದಾರಿಯನ್ನು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಲು ತೀರ್ಮಾನಿಸಿದೆ. ಚುನಾವಣೆ ಮುಗಿಯುವ ತನಕ ಕ್ಷೇತ್ರದಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಲಾಗಿದೆ....
ಮಂಡ್ಯ ಕ್ಷೇತ್ರದ ಚುನಾವಣೆ
ಮಂಡ್ಯ ಕ್ಷೇತ್ರದ ಚುನಾವಣೆ ರಾಜ್ಯದ ಗಮನ ಸೆಳೆದಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ದಿ.ಅಂಬರೀಶ್ ಪತ್ನಿ ಸುಮಲತಾ ಅವರು ಎದುರಾಳಿಗಳು. ಬಿಜೆಪಿ ಸಹ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತಾ ಅವರಿಗೆ ಬೆಂಬಲ ನೀಡಿದೆ.
ದೇವೇಗೌಡರ ಅದೃಷ್ಟ ಪರೀಕ್ಷೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಹಾಸನ ಕ್ಷೇತ್ರದ ಸಂಸದರಾದ ದೇವೇಗೌಡರು ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಹಾಸನವನ್ನು ಬಿಟ್ಟುಕೊಟ್ಟಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ದಿ.ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಇದರಿಂದಾಗಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ಮತ್ತು ಮಾಜಿ ಸಚಿವ ವಿ.ಸೋಮಣ್ಣ ಮುನಿಸಿಕೊಂಡಿದ್ದಾರೆ. ಅವರು ಪಕ್ಷದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆಯೇ? ಎಂದು ಕಾದು ನೋಡಬೇಕು.
ಜೆಡಿಎಸ್ ನಾಯಕರು ದೂರ
ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಿ.ಎಚ್.ವಿಜಯಶಂಕರ್ ಅವರು ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿ. ಆದರೆ, ಜೆಡಿಎಸ್ ನಾಯಕರು ಪ್ರಚಾರ, ಸಭೆಗಳಿಂದ ದೂರ ಉಳಿಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಿ.ಎಚ್.ವಿಜಯಶಂಕರ್ ಗೆಲ್ಲಿಸಿಕೊಂಡು ಬರಲು ಪ್ರಯತ್ನ ಮಾಡುತ್ತಿದ್ದಾರೆ.
ಪ್ರಕಾಶ್ ರಾಜ್ ಕಣದಲ್ಲಿ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ನಟ, ನಿರ್ದೇಶಕ ಪ್ರಕಾಶ್ ರಾಜ್ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಮೋಹನ್, ಕಾಂಗ್ರೆಸ್-ಜೆಡಿಎಸ್ನಿಂದ ರಿಜ್ವಾನ್ ಅರ್ಷದ್ ಅಭ್ಯರ್ಥಿಗಳಾಗಿದ್ದಾರೆ. ಪ್ರಕಾಶ್ ರಾಜ್ ಅವರಿಗೆ ವಿಜಲ್ ಚಿಹ್ನೆಯನ್ನು ಆಯೋಗ ನೀಡಿದೆ.
ಪ್ರಜ್ವಲ್ ರೇವಣ್ಣ ಅಭ್ಯರ್ಥಿ
ಹಾಸನ ಕ್ಷೇತ್ರದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ನಲ್ಲಿದ್ದ ಮಾಜಿ ಸಚಿವ ಎ.ಮಂಜು ಅವರು ಬಿಜೆಪಿ ಸೇರಿ ಎದುರಾಳಿಯಾಗಿದ್ದಾರೆ.