ಬೀಸೋ ದೊಣ್ಣೆಯಿಂದ ಸದ್ಯಕ್ಕೆ ಪಾರಾದ ರಾಘವೇಶ್ವರ ಶ್ರೀ
ಬೆಂಗಳೂರು, ಅ.9 : ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳಿಗೆ ಒಂದು ತಿಂಗಳ ಕಾಲದ ಮಧ್ಯಂತರ ಜಾಮೀನು ನೀಡಿ ಬೆಂಗಳೂರಿನ ಸೆಷೆನ್ಸ್ ನ್ಯಾಯಾಲಯ ಗುರುವಾರ ಸಂಜೆ ಆದೇಶ ಹೊರಡಿಸಿದೆ. ಇದರಿಂದ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಬೆದರಿಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಸ್ವಾಮೀಜಿಗಳ ಬಂಧನಕ್ಕೆ ತಡೆ ಬಿದ್ದಿದೆ. ಪೊಲೀಸರ ವಿಚಾರಣೆಗೆ ಸಹಕರಿಸುವಂತೆ ಕೋರ್ಟ್ ಸೂಚನೆ ನೀಡಿದೆ.
ರಾಘವೇಶ್ವರ ಭಾರತಿ ಸ್ವಾಮೀಜಿಗಳ ವಿರುದ್ಧದ ಎಫ್ಐಆರ್ ರದ್ದು ಮಾಡಬೇಕು ಹಾಗೂ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ರಾಘವೇಶ್ವರ ಶ್ರೀಗಳ ಪರ ವಕೀಲರು ಹೈಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಬೆಳಗ್ಗೆ ಕೋರ್ಟ್ ತಳ್ಳಿ ಹಾಕಿತ್ತು. ಸ್ವಾಮೀಜಿಗಳ ವಿರುದ್ಧ ಸಿಐಡಿ ತನಿಖೆ ಮುಂದುವರೆಯಲಿ ಎಂದು ನ್ಯಾ. ಕೆ.ಎನ್ ಫಣೀಂದ್ರ ಅವರ ಪೀಠ ಆದೇಶ ನೀಡಿತ್ತು. ಇದರಿಂದ ಸ್ವಾಮೀಜಿಗಳಿಗೆ ಬಂಧನದ ಭೀತಿ ಎದುರಾಗಿತ್ತು. [ರಾಘವೇಶ್ವರಶ್ರೀಗಳಿಗೆ ಮತ್ತೆ ಸಂಕಟ]

ಪ್ರಕರಣದಲ್ಲಿ ಸ್ವಾಮೀಜಿಗಳಿಗೆ ನಿರೀಕ್ಷಣಾ ಜಾಮೀನು ನೀಡಬೇಕೆಂದು ಸ್ವಾಮೀಜಿಗಳ ಪರ ವಕೀಲರು ಇಂದು ಮಧ್ಯಾಹ್ನ ಬೆಂಗಳೂರಿನ ಸೆಷನ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಒಂದು ತಿಂಗಳ ಅವಧಿಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. [ಪ್ರಕರಣದ ವಿವರ ಇಲ್ಲಿದೆ ನೋಡಿ]
ಎರಡು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್, ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ರಾಜ್ಯ ಬಿಟ್ಟು ತೆರಳುವಂತಿಲ್ಲ, ತನಿಖೆಗೆ ಸಹಕಾರ ನೀಡಬೇಕು ಎಂಬ ಷರತ್ತಿನ ಅನ್ವಯ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನಿನ ಅವಧಿ ಒಂದು ತಿಂಗಳು ಮಾತ್ರವಾಗಿದೆ. ಪೊಲೀಸರ ವಿಚಾರಣೆ ವೇಳೆ ತಮ್ಮ ಪರವಾದ ವಕೀಲರೊಬ್ಬರನ್ನು ಜೊತೆಯಲ್ಲಿಟ್ಟುಕೊಳ್ಳಲು ಶ್ರೀಗಳಿಗೆ ಕೋರ್ಟ್ ಅನುಮತಿ ನೀಡಿದೆ.
ರಾಘವೇಶ್ವರ ಶ್ರೀಗಳ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಬಿ.ವಿ.ಆಚಾರ್ಯ ಸ್ವಾಮೀಜಿಗಳು ಸಮಾಜದ ಪ್ರಮುಖ ಸ್ಥಾನದಲ್ಲಿದ್ದು ಅವರ ವರ್ಚಸ್ಸಿಗೆ ಧಕ್ಕೆ ಉಂಟುಮಾಡಲು ಈ ದೂರು ಸಲ್ಲಿಸಲಾಗಿದೆ. ಶ್ರೀಗಳ ವಿರುದ್ಧ ನೀಡಿರುವ ದೂರಿನಲ್ಲಿಯೇ ಹಲವಾರು ಗೊಂದಲಗಳಿವೆ. ಆದ್ದರಿಂದ ಶ್ರೀಗಳಿಗೆ ಜಾಮೀನು ಮಂಜೂರು ಮಾಡಬೇಕೆಂದು ಮನವಿ ಮಾಡಿದ್ದರು.












Click it and Unblock the Notifications