ತಮಿಳುನಾಡಿಗೆ ಹರಿದ ಕಾವೇರಿ: ರಾಜ್ಯದ ರೈತರ ಆಕ್ರೋಶ
ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಂದ ಜಲಾನಯನ ಪ್ರದೇಶಗಳಿಗೆ ನೀರು ಬಿಡುವುದನ್ನು ನಿಲ್ಲಿಸಿರುವ ನೀರಾವರಿ ಇಲಾಖೆ, ತಮಿಳುನಾಡಿಗೆ ನೀರು ಹರಿಸಿದೆ. ಇದರಿಂದ ಕೆರಳಿದ ಎರಡೂ ಜಲಾಶಯಗಳ ಜಲಾನಯನ ಪ್ರದೇಶದ ರೈತರು ಕೋಪಗೊಂಡಿದ್ದಾರೆ.
ಕೆಆರ್ ಎಸ್ ಜಲಾಶಯಕ್ಕೆ 5,270 ಕ್ಯೂಸೆಕ್ ಒಳಹರಿವು ದಾಖಲಾಗಿದ್ದರಿಂದ ಅಧಿಕಾರಿಗಳು 5,356 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ 46 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ, ಜಲಾಶಯದಲ್ಲಿ ಈಗ 35.235 ಟಿಎಂಸಿ ಅಡಿ ನೀರು ಸಂಗ್ರಹ ಇದೆ.

ಎರಡು ಜಲಾಶಯಗಳ ಜಲಾನಯನ ಪ್ರದೇಶಗಳಾದ ಕೊಡಗು ಹಾಗೂ ಕೇರಳದ ವಯನಾಡು ಪ್ರದೇಶದಲ್ಲಿ ಮುಂಗಾರು ದುರ್ಬಲವಾಗಿರುವ ಸಂದರ್ಭದಲ್ಲಿ ನೀರು ಬಿಡುವ ನಿರ್ಧಾರ ಕೈಗೊಳ್ಳಲಾಗಿದೆ. ಒಳಹರಿವಿನ ಕೊರತೆಯಿಂದಾಗಿ ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ಇದೇ ಕಾರಣಕ್ಕೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಕರ್ನಾಟಕ ವಿಳಂಬ ಮಾಡುತ್ತಿದೆ.
ಪ್ರಧಾನಿಗೆ ಪತ್ರ ಬರೆದಿದ್ದ ಸ್ಟಾಲಿನ್
ಕರ್ನಾಟಕ ನೀರು ಬಿಡುವುದನ್ನು ವಿಳಂಬ ಮಾಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ನೀರು ಬಿಡಲು ಒತ್ತಾಯಿಸಿತ್ತು. ತಮಿಳುನಾಡು ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ನೀರು ಬಿಡುವಂತೆ ಸೂಚಿಸಲು ಒತ್ತಾಯಿಸಿದ್ದರು.
ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಬಿಡುವ ಕುರಿತು ಬುಧವಾರ ನೀರಾವರಿ ಸಮಾಲೋಚನಾ ಸಮಿತಿ ಸಭೆ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದರು.
ಕಾಲುವೆಗಳಿಗೆ ನೀರು ಹರಿಸಲು ಆಗ್ರಹ
ತಮಿಳುನಾಡಿಗೆ ನೀರು ಹರಿಸಿರುವ ಅಧಿಕಾರಿಗಳು ರೈತರ ಬೆಳೆಗಳಿಗೆ ನೀರು ಬಿಡುವ ವಿಚಾರದಲ್ಲಿ ಮೌನ ವಹಿಸಿದ್ದಾರೆ. ರಾಜ್ಯ ಸರ್ಕಾರದ ನಡೆಗೆ ರೈತರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ರೈತರ ಬೇಡಿಕೆಗಳನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
''ಅಲ್ಪ ಮಳೆಯಿಂದ ಬಿತ್ತನೆ ಮಾಡಲು ಸಾಧ್ಯವಾಗದ ರೈತರ ಹಿತ ಕಾಪಾಡುವಲ್ಲಿ ಸರಕಾರ ವಿಫಲವಾಗಿದೆ. ಕೂಡಲೇ ನಾಲೆಗಳಿಗೆ ನೀರಾವರಿಗೆ ನೀರು ಬಿಡಬೇಕು" ಎಂದು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ ಎಂದು ಹೇಳಿದ ಅವರು, ಮೇಕೆದಾಟು ನಲ್ಲಿ ಸಮತೋಲನ ಜಲಾಶಯವನ್ನು ನಿರ್ಮಿಸಿದರೆ ಹೆಚ್ಚುವರಿ ನೀರನ್ನು ಸಂಗ್ರಹಿಸಲು ಸಂಕಷ್ಟದ ಸಮಯದಲ್ಲಿ ಬಳಸಲು ರಾಜ್ಯಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.












Click it and Unblock the Notifications