ಟಿಕೆಟ್ ನಿರಾಕರಣೆ, ವಿಜಯೇಂದ್ರ ಆಯ್ಕೆ ಬಗ್ಗೆ ಅಸಮಾಧಾನ: ಅರವಿಂದ ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆ ಕುರಿತು ಹುಟ್ಟಿಕೊಂಡ ಚರ್ಚೆ
ಬೆಂಗಳೂರು, ನವೆಂಬರ್ 23: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ಕರ್ನಾಟಕದ ವಿರೋಧ ಪಕ್ಷದ ನಾಯಕರನ್ನಾಗಿ ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನ ನೇಮಕ ಮಾಡಿದ್ದು, ಬಿಜೆಪಿ ಪಾಳಯದಲ್ಲಿನ ಅಸಮಾಧಾನ ಹೆಚ್ಚಾಗಿದೆ.
ಉತ್ತರ ಕರ್ನಾಟಕ ಭಾಗ ಬಿಜೆಪಿ ಹಿರಿಯ ನಾಯಕರು ಸೇರಿದಂತೆ ಬೆಂಗಳೂರು ಭಾಗವ ಮಾಜಿ ಸಚಿವ ವಿ ಸೋಮಣ್ಣ ಹಾಗೂ ಅರವಿಂದ ಲಿಂಬಾವಳಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇತ್ತ ಬಿಜೆಪಿ ನಾಯಕರ ಮೇಲಿನ ಮುನಿಸಿನಿಂದಾಗಿ ಹಲವು ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆ ಬೆನ್ನಲ್ಲೇ ಮಾಜಿ ಶಾಸಕ ಅರವಿಂದ ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆಪಯಾಗುತ್ತಾರಾ ಎಂಬ ಚರ್ಚೆ ಹುಟ್ಟಿಕೊಂಡಿದೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಅರವಿಂಗ ಲಿಂಬಾವಳಿಗೆ ಟಿಕೆಟ್ ಕೈ ತಪ್ಪಿತ್ತು. ಅಲ್ಲದೇ ಪಕ್ಷದ ಕಾರ್ಯಚಟುವಟಿಕೆಯಿಂದ ಬಿಜೆಪಿಯ ಕೆಲ ನಾಯಕರು ಅರವಿಂದ ಲಿಂಬಾವಳಿ ಅವರನ್ನ ದೂರ ಇಟ್ಟಿದ್ದು, ಅವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ.
ಇತ್ತ 2024 ರ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಜೆಡಿಎಸ್ ಜೊತೆಗೆ ಮೈತ್ರಿಯಾಗಿರುವ ಬಿಜೆಪಿಯ ನಡೆಗೂ ಹಲವು ಬಿಜೆಪಿ ನಾಯಕರು ಬೇಸರಗೊಂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇತ್ತ ಅರವಿಂದ ಲಿಂಬಾವಳಿ ಅವರಿಗೂ ಸಹ ವಿಧಾನಸಭಾ ಚುನಾವಣೆಯಲ್ಲಿ ಕೊನೆಯ ಹಂತದಲ್ಲಿ ಟಿಕೆಟ್ ಕೈ ತಪ್ಪಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬೆಂಗಳೂರು ಭಾಗದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.

ಬಿಜೆಪಿ ನಾಯಕರ ವಿರುದ್ಧ ಅರವಿಂದ ಲಿಂಬಾವಳಿ ಹೇಳಿದ್ದೇನು?
ಈ ಕುರಿತು ಮಾಜಿ ಸಚವ ಅರವಿಂದ ಲಿಂಬಾವಳಿ ಮಾತನಾಡಿ, ಆರ್. ಅಶೋಕ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿರುವುದು ಮತ್ತು ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದು ವಿರೋಧ ಪಕ್ಷದವರ ಜತೆಗಿನ ಹೊಂದಾಣಿಕೆಯಿಂದ ಎಂದು ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ. ಈ ಹೊಂದಾಣಿಕೆಯಿಂದಲೇ ಅವರು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನೂ ಗೆಲ್ಲಿಸಬಹುದು. ಹಾಗಾಗಿ ಇವರನ್ನು ನೇಮಕ ಮಾಡಲಾಗಿದೆ ಎಂದು ಅಸಮಾಧಾನಗೊಂಡಿದ್ದಾರೆ.
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿರುವ 66 ಶಾಸಕರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆಯೇ ಗೆದ್ದಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇಂದು ರಾಜಕೀಯದಲ್ಲಿ ಹೊಂದಾಣಿಕೆ ಮಾಡುವವರ ಕಾಲ ನಡೆದಿದೆ. ಬಿ.ವೈ. ವಿಜಯೇಂದ್ರ ಅವರನ್ನು ಅಳೆದು, ತೂಗಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ ಎಂದು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ.












Click it and Unblock the Notifications