ಕಾಂಗ್ರೆಸ್ ಹೈಕಮಾಂಡ್ಗೆ ಪರೋಕ್ಷ ಟಾಂಗ್ ಕೊಡುತ್ತಿರುವ ಡಿ.ಕೆ ಶಿವಕುಮಾರ್ ?
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಸಾಕಷ್ಟು ಶ್ರಮಿಸಿದ್ದಾರೆ. ಆದರೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಸಿಗದೆ ಇರುವುದಕ್ಕೆ ಅವರು ಅಸಮಾಧಾನಿತರಾಗಿದ್ದು. ಕಾಂಗ್ರೆಸ್ ಹೈಕಮಾಂಡ್ನ ಮೇಲೆ ಪರೋಕ್ಷ ಸೇಡು ತೀರಿಸಿಕೊಳ್ಳುತ್ತಿದ್ದಾರೆಯೇ ಎನ್ನುವ ಅನುಮಾನ ಶುರುವಾಗಿದೆ. ಇದಕ್ಕೆ ಕಾರಣ ಡಿ.ಕೆ ಶಿವಕುಮಾರ್ ಅವರು ಇತ್ತೀಚಿನ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು. ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇಶಾ ಫೌಂಡೇಷನ್ನ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಕಾಣಿಸಿಕೊಂಡಿರುವುದು ಹಾಗೂ ಕುಂಭಮೇಳದ ಬಗ್ಗೆ ಅವರು ನೀಡಿರುವ ಹೇಳಿಕೆಗಳು ಹೊಸ ಚರ್ಚೆಗಳನ್ನು ಶುರುವಾಗಿವೆ.
ಮಲ್ಲಿಕಾರ್ಜುನ ಖರ್ಗೆ ಅವರು ಮಹಾಕುಂಭಮೇಳದ ಬಗ್ಗೆ ಮಾತನಾಡಿದ್ದರು. ಮಹಾಕುಂಭ ಮೇಳ ನಡೆಸುವುದರಿಂದ/ ಮಹಾಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಬಡತನ ಪರಿಹಾರವಾಗುತ್ತದೆಯೇ ಎಂದು ಅವರು ಪ್ರಶ್ನೆ ಮಾಡಿದ್ದರು. ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ, ಇದರ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹಾಕುಂಭ ಮೇಳದಲ್ಲಿ ಭಾಗವಹಿಸಿದ್ದರು. ಅಲ್ಲದೆ ಉತ್ತರ ಪ್ರದೇಶ ಸರ್ಕಾರವು ಮಹಾಕುಂಭ ಮೇಳವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿದೆ ಎಂದೂ ಹೇಳಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಯಿತು. ಅಲ್ಲದೆ ಇದರಿಂದ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ಮುಜುಗರವನ್ನು ಸೃಷ್ಟಿ ಮಾಡಿತ್ತು. ಆದರೆ, ಸಿದ್ಧಾಂತ ಹಾಗೂ ಧರ್ಮ ನಂಬಿಕೆ ಬೇರೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಈ ವಿಷಯ ತಣ್ಣಗಾಗುವ ಮೊದಲೇ ಅವರು, ತಮಿಳುನಾಡಿನ ಕೊಯಮತ್ತೂರಿನ ಇಶಾ ಫೌಂಡೇಷನ್ನಲ್ಲಿ ಆಯೋಜಿಸಿದ್ದ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇಶಾ ಫೌಂಡೇಷನ್ನ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಕಾಣಿಸಿಕೊಂಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ರಾಹುಲ್ ಗಾಂಧಿ ವಿರೋಧಿ ಹೇಳಿಕೆಯೊಂದಿಗೆ ವೇದಿಕೆ ಹಂಚಿಕೊಂಡ ಡಿಕೆಶಿ
ಇನ್ನು ಡಿ.ಕೆ ಶಿವಕುಮಾರ್ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರನ್ನು ಅವಮಾನ ಮಾಡಿದವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಹೌದು ರಾಹುಲ್ ಗಾಂಧಿ ಅವರ ಬಗ್ಗೆ ಜಗ್ಗಿ ವಾಸುದೇವ್ ಅವರು ವಿರೋಧಿ ಅಥವಾ ವ್ಯಂಗ್ಯ ರೀತಿಯಲ್ಲಿ ಉತ್ತರ ನೀಡಿದ್ದರು.
ರಾಹುಲ್ ಗಾಂಧಿ ಅಂದರೆ ಯಾರು ಅಂತಲೇ ಗೊತ್ತಿಲ್ಲ ಎಂದು ವಾಸುದೇವ್ ಅವರು ಈ ಹಿಂದೆ ಹೇಳಿರುವ ವಿಚಾರ ಇದೀಗ ಚರ್ಚೆಯಾಗುತ್ತಿದೆ. ಬ್ಯುಸಿನೆಟ್ ಟುಡೇ ಪತ್ರಕರ್ತರು ನಡೆಸಿದ ಸಂದರ್ಶನವೊಂದರಲ್ಲಿ ರಾಹುಲ್ ಗಾಂಧಿ ಬಗ್ಗೆ ಕೇಳಿದ್ದ ಪ್ರಶ್ನೆಗೆ ಜಗ್ಗಿ ವಾಸುದೇವ್ ಅವರು, "ನನಗೆ ರಾಹುಲ್ ಗಾಂಧಿ ಯಾರು ಎಂಬುದು ನಿಜಕ್ಕೂ ಗೊತ್ತಿಲ್ಲ. ಏಕೆಂದರೆ ಅವರು ಏನನ್ನು ಹೇಳಲು ಪ್ರಯತ್ನಿಸುತ್ತಿದ್ದಾರೆ ಎಂಬುದು ನಮಗೆ ಸ್ಪಷ್ಟವಿಲ್ಲ. ಯಾರಾದರೂ ರಾಜಕೀಯ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಬಯಸಿದರೆ, ಆ ವ್ಯಕ್ತಿ ಏನನ್ನು ಪ್ರತಿನಿಧಿಸುತ್ತಾರೆ ಎಂಬುದು ಜನತೆಗೆ ಸ್ಪಷ್ಟವಾಗಿರಬೇಕು. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ, ನರೇಂದ್ರ ಮೋದಿ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಏನನ್ನು ಪ್ರತಿನಿಧಿಸುತ್ತಾರೆ. ಕನಿಷ್ಠ ನನಗೆ ಇದು ಸ್ಪಷ್ಟವಾಗಿಲ್ಲ" ಎಂದು ಹೇಳಿದ್ದರು. ಈ ರೀತಿ ಹೇಳಿದ ಜಗ್ಗಿ ವಾಸುದೇವ್ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಭಾಗವಹಿಸುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಜನ ಪ್ರಶ್ನೆ ಮಾಡುತ್ತಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ವಿಚಾರ ಚರ್ಚೆಯಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುತ್ತಿಲ್ಲ. ಅಲ್ಲದೆ ಮುಂದಿನ ಬಾರಿಯೂ ಮುಖ್ಯಮಂತ್ರಿ ಆಗುವ ಬಗ್ಗೆ ಮಾತನಾಡುತ್ತಿರುವುದು ಡಿ.ಕೆ ಶಿವಕುಮಾರ್ ಅವರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications