ರಾಜ್ಯಪಾಲರ ಕಚೇರಿ ಕಲ್ಯಾಸಿಪಾಳ್ಯ ಪೊಲೀಸ್ ಠಾಣೆಗಿಂತ ಕಡೆಯಾಯ್ತಾ?-ಶಾಸಕ ಶರತ್ ಬಚ್ಚೇಗೌಡ
ಹುಬ್ಬಳ್ಳಿ, ಆಗಸ್ಟ್ 29: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಪ್ರಕರಣದಲ್ಲಿ ಮೂರು ಪಕ್ಷಗಳ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಶಾಸಕ ಶರತ್ ಬಚ್ಚೇಗೌಡ ಮಾತನಾಡಿದ್ದು, ಬಿಜೆಪಿಯವರು ರಾಜಭವನವನ್ನು ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಂತೆ ಕಾಣಿಸುತ್ತಿದೆ. ಪ್ರತಿಯೊಂದು ಸಣ್ಣಪುಟ್ಟ ದೂರುಗಳನ್ನು ರಾಜ್ಯಪಾಲರಿಗೆ ನೀಡುತ್ತಿರುವುದು ಗಮನಿಸಿದರೆ, ರಾಜ್ಯಪಾಲರ ಕಚೇರಿ ಕಲ್ಯಾಸಿಪಾಳ್ಯದ ಪೊಲೀಸ್ ಠಾಣೆಗಿಂತ ಕಡೆಯಾಯ್ತಾ? ಎಂಬ ಅನುಮಾನ ಮೂಡುತ್ತಿದೆ ಎಂದು ಶಾಸಕರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಅವರ ಒಂದು ಸಹಿಯಿಲ್ಲ. ಪ್ರಕರಣದಲ್ಲಿ 19 ಜನರ ಹೆಸರಿದ್ದರು ಸಹ ಅವರನ್ನು ಬಿಟ್ಟು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿರುವುದು ರಾಜಕೀಯ ಷಡ್ಯಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದರು.
ಮುಡಾ ಹಗರಣದಲ್ಲಿ ಕಾಂಗ್ರೆಸ್ನವರ ಕೈವಾಡ ಎಂಬ ಬಿಜೆಪಿಯವರ ಆರೋಪಕ್ಕೆ ತಿರುಗೇಟು ನೀಡಿದ ಶರತ್ ಬಚ್ಚೆಗೌಡ ಇದು ಶುದ್ದ ಸುಳ್ಳು, ಬೆಂಬಲಕ್ಕೆ ಎಲ್ಲ ಶಾಸಕರು ಹಾಗೂ ಹೈಕಮಾಂಡ್ ಇದೆ. ಅಷ್ಟೇ ರಾಜ್ಯದ ಜನರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಿದ್ದರೂ ಸಹ ಹಿಂದೂಳಿದ ನಾಯಕನಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ಇದೀಗ ರಾಜ್ಯಪಾಲರ ಕಚೇರಿ ಹಾಗೂ ಬಿಜೆಪಿ ಕಚೇರಿಗೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ. ಬಿಜೆಪಿ ಪಾದಯಾತ್ರೆಗಿಂತಲೂ ಕಾಂಗ್ರೆಸ್ ಜನಾಂದೋಲನಕ್ಕೆ ಜನರು ಹೆಚ್ಚಿನ ಬೆಂಬಲ ನೀಡಿದ್ದಾರೆ. ಆದರೆ ಬಿಜೆಪಿಯವರು ಹಸಿಸುಳ್ಳು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಸಂಗವೇ ಬರುವುದಿಲ್ಲ ಎಂದು ಹೇಳಿದರು.












Click it and Unblock the Notifications